ಮಂಗಳೂರು : ಎತ್ತಿನಹೊಳೆ ಯೋಜನೆ – ತಜ್ಞರ ಅಭಿಪ್ರಾಯ ಪಡೆದು ಸರಕಾರ ಮುಂದುವರೆಯಲಿ ಶಾಸಕ ಲೋಬೊ

Spread the love

ಮಂಗಳೂರು : ಎತ್ತಿನಹೊಳೆ ಯೋಜನೆಯ ಪರಿಣಾಮದ ಬಗ್ಗೆ ಪುನರ್ ಪರಿಶೀಲನೆ ಆಗಬೇಕಾಗಿದೆ ಎಂದು ಶಾಸಕ ಹಾಗೂ ರಾಜ್ಯ ವಿಧಾನ ಮಂಡಲದ ಹಿಂದುಳಿದ ವರ್ಗಗಳ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಸಮಿತಿಯ ಅಧ್ಯಕ್ಷ ಜೆ.ಆರ್.ಲೋಬೊ ತಿಳಿಸಿದ್ದಾರೆ.

Lobo-PM-31082015 (20)

ಅವರು ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ . ಎತ್ತಿನಹೊಳೆ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂದರ್ಭದಲ್ಲಿ, ಅದರಿಂದ ಕರಾವಳಿ ಜನರಿಗೆ ಯಾವರೀತಿಯ ತೊಂದರೆಯಾಗಬಹುದು ಎನ್ನುವ ಬಗ್ಗೆ ಸಮಗ್ರವಾದ ವರದಿಯನ್ನು ತಜ್ಞರಿಂದ ಸರಕಾರ ಪಡೆದುಕೊಳ್ಳಬೇಕು. ನಂತರ ಜನರ ಸಮ್ಮತಿಯನ್ನು ಪಡೆದುಕೊಂಡು ಯೋಜನೆಯನ್ನು ಅನುಷ್ಠಾನಗೊಳಿಸಬೇಕಾಗಿದೆ ಎಂದರು.

ಈ ಯೋಜನೆಯ ಬಗ್ಗೆ ಸಾರ್ವಜನಿಕರಲ್ಲಿ ಇರುವ ಸಂದೇಹಗಳನ್ನು ಪರಿಹರಿಸುವ ಕೆಲಸ ಆಗಬೇಕಾಗಿದೆ.ಯೋಜನೆಯಿಂದ ಪರಿಸರಕ್ಕೆ ಹಾನಿ ಇದೆಯೇ?, ಎತ್ತಿನಹೊಳೆಯಲ್ಲಿ ನೀರಿನ ಲಭ್ಯತೆ ಎಷ್ಟಿದೆ? ಎನ್ನುವ ಬಗ್ಗೆ ಖಚಿತವಾದ ತಜ್ಞರ ಅಭಿಪ್ರಾಯವನ್ನು ಸರಕಾರ ಪಡೆದು ಮುಂದುವರಿಯುವುದು ಉತ್ತಮ ಎಂದರು.

ಕೋಲಾರದಲ್ಲಿ ಕುಡಿಯುವ ನೀರಿನ ಗಂಭೀರವಾದ ಸಮಸ್ಯೆ ಇದೆ. ಈ ಬಗ್ಗೆ ನಮಗೆ ಸಹಾನುಭೂತಿ ಇದೆ. ಆದರೆ ಅಲ್ಲಿನ ಸಮಸ್ಯೆ ಪರಿಹಾರಕ್ಕೆ ಪರ್ಯಾಯ ಮಾರ್ಗಗಳ ಬಗ್ಗೆ ಯೋಚಿಸಬೇಕಾದ ಅಗತ್ಯವಿದೆ. ಜನತೆಯ ವಿಶ್ವಾಸಗಳಿಸಿದ ಬಳಿಕ ಎತ್ತಿನಹೊಳೆ ಯೋಜನೆಯನ್ನು ಸರಕಾರ ಅನುಷ್ಠಾನಗೊಳಿಸುವ ಬಗ್ಗೆ ನಿರ್ಧಾರ ಕೈಗೊಳ್ಳಬಹುದಾಗಿದೆ ಎಂದು ಜೆ.ಆರ್.ಲೋಬೊ ಅಭಿಪ್ರಾಯಿಸಿದ್ದಾರೆ.

ರಾಜ್ಯದ ವಿಧಾನ ಮಂಡಲದ ಹಿಂದುಳಿದ ವರ್ಗ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಸಮಿತಿಯ ಅಧ್ಯಕ್ಷನಾಗಿ ಆಯ್ಕೆಯಾಗಿರುವ ಸಂದರ್ಭದಲ್ಲಿಮ ರಾಜ್ಯದ ಶೇ.60ರಷ್ಟಿರುವ ಈ ವರ್ಗದ ಜನರ ಸಮಸ್ಯೆ ಹಾಗೂ ಸವಾಲುಗಳಿಗೆ ಸಂಬಂಧಿಸಿದಂತೆ ಸರಕಾರಕ್ಕೆ ಸೂಕ್ತ ವರದಿ ಸಲ್ಲಿಸಿ ಪರಿಹಾರ ಯೋಜನೆಗಳನ್ನು ಕೈಗೊಳ್ಳಲು ಶಿಫಾರಸು ಮಾಡುವ ಅಧಿಕಾರವಿದೆ ಎಂದು ಜೆ.ಆರ್.ಲೋಬೊ ತಿಳಿಸಿದ್ದಾರೆ.


Spread the love