ಜಿಲ್ಲೆಯಲ್ಲಿ ಮುಖ್ಯಮಂತ್ರಿ ಪ್ರವಾಸ – ಸಚಿವ ಪ್ರಮೋದ್ ಮಧ್ವರಾಜ್  ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

Spread the love

ಜಿಲ್ಲೆಯಲ್ಲಿ ಮುಖ್ಯಮಂತ್ರಿ ಪ್ರವಾಸ – ಸಚಿವ ಪ್ರಮೋದ್ ಮಧ್ವರಾಜ್  ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

ಉಡುಪಿ : ಜನವರಿ 8 ರಂದು ಸನ್ಮಾನ್ಯ ಮುಖ್ಯಮಂತ್ರಿಯವರು ರಾಜ್ಯ ಪ್ರವಾಸ ಅವಧಿಯಲ್ಲಿ , ಉಡುಪಿ ಜಿಲ್ಲೆಗೆ ಭೇಟಿ ನೀಡುವ ಸಂಬಂಧ ಇಂದು ಮೀನುಗಾರಿಕೆ, ಯುವ ಸಬಲೀಕರಣ, ಕ್ರೀಡಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಕಳೆದ ನಾಲ್ಕೂವರೆ ವರ್ಷಗಳಲ್ಲಿ ರಾಜ್ಯ ಸರ್ಕಾರ ಜಾರಿ ಗೊಳಿಸಿದ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಸಂಬಂಧ ಹಾಗೂ ವಿವಿಧ ಯೋಜನೆಗಳ ಶಿಲಾನ್ಯಾಸ ಸಂಬಂಧ ಆಯೋಜಿಸಲಾಗಿರುವ ರಾಜ್ಯ ಪ್ರವಾಸದ ವೇಳೆ ಉಡುಪಿ ಜಿಲ್ಲೆಯ ಬೈಂದೂರು, ಕಾಪು ಹಾಗೂ ಉಡುಪಿಯಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ವಿವಿಧ ಸಮಿತಿಗಳನ್ನು ರಚಿಸಿ ಹೊಣೆಯನ್ನು ನೀಡಲಾಯಿತು.

ಸರ್ಕಾರದ ಸಾಧನೆ ಸಂಭ್ರಮಕ್ಕೆ ಸಂಬಂಧಿಸಿದ ಮಾಹಿತಿ ಪುಸ್ತಕಗಳು ಅಧಿಕಾರಿಶಾಹಿ ಭಾಷೆಯಿಂದ ಹೊರಬಂದು ಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಮೂಡಿಬರಬೇಕೆಂದು ಸಚಿವರು ಹೇಳಿದರು.

ಜಿಲ್ಲೆಯ ಅಭಿವೃದ್ಧಿಗೆ ಹಲವು ಕೋಟಿಗಳನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದು, ಸರ್ಕಾರದ ಅನ್ನಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ,ಕ್ಷೀರಧಾರೆ, ಕೃಷಿ ಭಾಗ್ಯ, ಮನಸ್ವಿನಿ, ಮೈತ್ರಿಯಂತಹ ಯೋಜನೆಗಳು ಯಶಸ್ವಿಯಾಗಿದ್ದು, ಜನಪರ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮವೂ ಇದಾಗಿದೆ ಎಂದು ಸಚಿವರು ಹೇಳಿದರು.

ಕಾರ್ಯಕ್ರಮ ಆಯೋಜನೆ ಸಂಬಂಧ ಪ್ರಮುಖ ನಿರ್ದೇಶನಗಳನ್ನು ಸಚಿವರು ಅಧಿಕಾರಿಗಳಿಗೆ ನೀಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಅಪರ ಜಿಲ್ಲಾಧಿಕಾರಿ ಅನುರಾಧ, ಎಲ್ಲ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.


Spread the love