
ಅಪಘಾತದಲ್ಲಿ ಮೃತಪಟ್ಟ ಕೆ.ಎಸ್.ಆರ್.ಟಿ.ಸಿ ಚಾಲನಾ ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ 1 ಕೋಟಿ ಪರಿಹಾರ ಚೆಕ್ ವಿತರಣೆ
ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ಕೆ.ಎಸ್.ಆರ್.ಟಿ.ಸಿ ಚಾಲನಾ ಸಿಬ್ಬಂದಿಗಳಾದ . ಜಿ.ವಿ.ಚಲಪತಿ, ಪಿ.ಎನ್. ನಾಗರಾಜು ಅವರ ಎರಡು ಕುಟುಂಬದ ಅವಲಂಬಿತರಿಗೆ ತಲಾ ರೂ.1 ಕೋಟಿ ಅಪಘಾತ ಪರಿಹಾರ ಚೆಕ್ ವಿತರಣೆಯನ್ನು ಕರಾರಸಾ ನಿಗಮದ ಕೇಂದ್ರ ಕಛೇರಿಯಲ್ಲಿ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಮಾಡಿದರು.
ಕೆ.ಎಸ್.ಆರ್.ಟಿ.ಸಿ ಯು ದೇಶದಲ್ಲಿಯೇ ಪ್ರಪ್ರಥಮವಾಗಿ ಕಾರ್ಮಿಕ ಕಲ್ಯಾಣದ ವಿನೂತನ ಯೋಜನೆ ಅಡಿಯಲ್ಲಿ ಸಿಬ್ಬಂದಿಗಳಿಗೆ ರೂ.1 ಕೋಟಿ ಮೊತ್ತದ ಅಪಘಾತ ವಿಮೆಯನ್ನು (On duty & Off Duty ಅಪಘಾತ) ಜಾರಿಗೊಳಿಸಿದೆ.
ಈ ವೇಳೆ ಮಾತನಾಡಿದ ಅವರು ಮೃತಪಟ್ಟ ಚಾಲನಾ ಸಿಬ್ಬಂದಿಗಳನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ, ಅವರ ಕುಟುಂಬಗಳ ಸುಭದ್ರತೆಗಾಗಿ ನಿಗಮವು ಜಾರಿಗೊಳಿಸಿರುವ ಈ ಅಪಘಾತ ಪರಿಹಾರ ವಿಮಾ ಯೋಜನೆಯು ಬಹಳ ಉತ್ತಮವಾಗಿದ್ದು, ಈ ಯೋಜನೆಯನ್ನು ಸದ್ಯದಲ್ಲಿಯೇ ಇತರೆ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಜಾರಿಗೊಳಿಸಲು ಕೂಡಲೇ ಕ್ರಮ ಜರುಗಿಸಲು ಸೂಚಿಸಲಾಗುವುದು. ಕುಟುಂಬದವರು ಹಣವನ್ನು ಬ್ಯಾಂಕಿನಲ್ಲಿ ಸ್ಥಿರ ಠೇವಣಿಯನ್ನು ಇಟ್ಟು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಾಗೂ ತಮ್ಮ ಮುಂದಿನ ಜೀವನಕ್ಕಾಗಿ ಕಾಪಾಡಿಕೊಳ್ಳಬೇಕು.ನಿಗಮದ ಸಿಬ್ಬಂದಿಗಳ ಹಾಗೂ ಕುಟುಂಬದವರ ಹಿತಾಸಕ್ತಿ ಕಾಪಾಡಲು ನಾವು ಸದಾ ಸಿದ್ದರಿದ್ದೇವೆ. ಎಂದರು
ಈ ಕಾರ್ಯಕ್ರಮದಲ್ಲಿ ವಿ. ಅನ್ಬುಕುಮಾರ್ ಭಾಆಸೇ., ಎಸ್ ಬಿ.ಐ ಬ್ಯಾಂಕಿನ ವ್ಯವಸ್ಥಾಪಕರು ಹಾಗೂ ಕಾರ್ಮಿಕ ಸಂಘಟನೆಗಳ ಮುಖಂಡರುಗಳಾದ ಹೆಚ್.ವಿ. ಅನಂತ ಸುಬ್ಬರಾವ್, ಬಿ. ಜಯದೇವರಾಜೇ ಅರಸು, ಜಿ.ಎಸ್. ಮಹದೇವಯ್ಯ, ಹೆಚ್.ಡಿ. ರೇವಪ್ಪ, ಎಸ್. ನಾಗರಾಜ, ವೆಂಕಟರಮಣಪ್ಪ ಮತ್ತು ಇತರರು ಹಾಗೂ ನಿಗಮದ ಅಧಿಕಾರಿ/ಸಿಬ್ಬಂದಿಗಳು ಭಾಗವಹಿಸಿದ್ದರು.