ಉಡುಪಿಯ ಪ್ರಕರಣವನ್ನು ಮುಚ್ಚಿಹಾಕಲು ಜಿಲ್ಲಾ ಕಾಂಗ್ರೆಸ್ ಹುನ್ನಾರ : ಕುಯಿಲಾಡಿ

Spread the love

ಉಡುಪಿಯ ಪ್ರಕರಣವನ್ನು ಮುಚ್ಚಿಹಾಕಲು ಜಿಲ್ಲಾ ಕಾಂಗ್ರೆಸ್ ಹುನ್ನಾರ : ಕುಯಿಲಾಡಿ

ಉಡುಪಿಯ ಖಾಸಗಿ ಶಿಕ್ಷಣ ಸಂಸ್ಥೆಯ ಶೌಚಾಲಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಂದ ನಡೆದ ಹಿಂದೂ ವಿದ್ಯಾರ್ಥಿನಿಯರ ಆಕ್ಷೇಪಾರ್ಹ ಖಾಸಗಿ ವೀಡಿಯೋ ಚಿತ್ರೀಕರಣದ ಗಂಭೀರ ಪ್ರಕರಣವನ್ನು ಮುಚ್ಚಿ ಹಾಕಲು ಉಡುಪಿ ಜಿಲ್ಲಾ ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆರೋಪಿಸಿದ್ದಾರೆ.

ಉಡುಪಿಯಲ್ಲಿ ನಡೆದ ನಾಗರಿಕ ಸಮಾಜ ತಲೆತಗ್ಗಿಸುವಂತಹ ಹೇಯ ಕೃತ್ಯಕ್ಕೆ ಎಲ್ಲೆಡೆ ಆಕ್ರೋಶ ಭುಗಿಲೆದ್ದಾರೂ ಕಾಪು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಿನಯ ಕುಮಾರ್ ಸೊರಕೆ ಸಹಿತ ಕಾಂಗ್ರೆಸ್ ಮುಖಂಡರು ಮಾತ್ರ ಏನೂ ನಡೆದೇ ಇಲ್ಲ ಎಂಬಂತೆ ವರ್ತಿಸುತ್ತಾ ಹಠಾತ್ ಮಣಿಪುರ ಘಟನೆಯ ವಿಚಾರವನ್ನು ಮುನ್ನೆಲೆಗೆ ತರುವ ಮೂಲಕ ಉಡುಪಿಯ ಪ್ರಕರಣದ ದಾರಿ ತಪ್ಪಿಸುವ ಪ್ರಯತ್ನ ನಡೆಸುತ್ತಿರುವುದು ಖಂಡನೀಯ.

ಉಡುಪಿಯ ಪ್ರಕರಣದ ತನಿಖಾಧಿಕಾರಿಯನ್ನು ಬದಲಿಸಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸುತ್ತದೆ. ರಾಜ್ಯ ಗೃಹ ಸಚಿವರು ಸದ್ರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದರೂ, ತಮ್ಮದೇ ಕ್ಷೇತ್ರದ ಸಂತ್ರಸ್ತೆ ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವ ಗೊಡವೆಗೆ ಹೋಗದ ಸೊರಕೆ ಸಹಿತ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಘಟನೆ ನಡೆದೇ ಇಲ್ಲ ಎನ್ನುತ್ತಾ ಜನತೆಗೆ ತಪ್ಪು ಮಾಹಿತಿ ನೀಡುತ್ತಿರುವ ಮರ್ಮವೇನು ಎಂದವರು ಪ್ರಶ್ನಿಸಿದ್ದಾರೆ.

ಪ್ರಕರಣದ ಕೂಲಂಕುಷ ತನಿಖೆಯಿಂದ ಸತ್ಯಾಂಶ ಹೊರಬರಲಿದೆ. ಜಿಹಾದಿ ಮನಸ್ಥಿತಿಯ ಸಾಮಾಜಿಕ ಪಿಡುಗನ್ನು ಬೇರು ಸಹಿತ ಕಿತ್ತೊಗೆಯದೆ ಬಿಜೆಪಿ ವಿರಮಿಸದು. ‘ಸರ್ವ ಜನಾಂಗದ ಶಾಂತಿಯ ತೋಟ’ ಎಂದು ಬೊಗಳೆ ಬಿಡುವ ಕಾಂಗ್ರೆಸ್ ಒಂದೇ ವರ್ಗವನ್ನು ಓಲೈಸುವ ಭರದಲ್ಲಿ ನೊಂದವರನ್ನು ಕಡೆಗಣಿಸುವ ಮೂಲಕ ಸಮಾಜದಲ್ಲಿ ಶಾಂತಿ ಕದಡಿಸಲು ಹೊರಟಿರುವುದು ವಿಷಾದನೀಯ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love