ಎಸ್‌.ಐ.ಆರ್ ಪ್ರಕ್ರಿಯೆಯಲ್ಲಿ ಕೈಬಿಟ್ಟಿರುವ ಹೆಸರುಗಳನ್ನು ಪರಿಶೀಲಿಸಿ: ಕಾಂಗ್ರೆಸ್ ಬಿ.ಎಲ್‌.ಎ.ಗಳಿಗೆ ಹರೀಶ್ ಕುಮಾರ್ ಕರೆ

Spread the love

ಎಸ್‌.ಐ.ಆರ್ ಪ್ರಕ್ರಿಯೆಯಲ್ಲಿ ಕೈಬಿಟ್ಟಿರುವ ಹೆಸರುಗಳನ್ನು ಪರಿಶೀಲಿಸಿ: ಕಾಂಗ್ರೆಸ್ ಬಿ.ಎಲ್‌.ಎ.ಗಳಿಗೆ ಹರೀಶ್ ಕುಮಾರ್ ಕರೆ

ಮಂಗಳೂರು: ಎಸ್‌ಐಆರ್ (Special Intensive Revision) ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ಹೆಸರುಗಳು ಹಾಗೂ ಮತದಾರರ ವಿವರಗಳಲ್ಲಿರುವ ವ್ಯತ್ಯಾಸಗಳನ್ನು ಸಮಗ್ರವಾಗಿ ಪರಿಶೀಲಿಸಿ, ಅರ್ಹ ಮತದಾರರ ಹೆಸರುಗಳು ಯಾವುದೇ ಕಾರಣಕ್ಕೂ ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಕರೆ ಅವರು ಕಾಂಗ್ರೆಸ್ ಬಿಎಲ್‌ಎಗಳಿಗೆ ಕರೆ ನೀಡಿದರು.

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬಿಎಲ್‌ಎಗಳು ಹಾಗೂ ಕ್ಷೇತ್ರದ ಸಂಯೋಜಕರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹಲವು ಪ್ರದೇಶಗಳಲ್ಲಿ ಮತದಾರರ ಹೆಸರುಗಳಲ್ಲಿ ವ್ಯತ್ಯಾಸ ಕಂಡುಬಂದಿರುವುದು ಹಾಗೂ ಕೆಲವರ ಹೆಸರುಗಳು ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ಕುರಿತು ಈಗಾಗಲೇ ವರದಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರ ಹೆಸರನ್ನು ಪರಿಶೀಲಿಸಿ, ನೈಜ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ ಐವನ್ ಡಿ’ಸೋಜಾ ಅವರು, ಕೆಲವು ಹೆಸರುಗಳು ಮತದಾರರ ಪಟ್ಟಿಯಿಂದ ಕೈಬಿಟ್ಟಿರುವುದಕ್ಕೆ ವಿವಿಧ ಕಾರಣಗಳಿರಬಹುದು. ಕೆಲವರು ಮನೆ ಬದಲಾಯಿಸಿ ಬೇರೆಡೆಗೆ ತೆರಳಿರುವುದು, ಒಂದೇ ವ್ಯಕ್ತಿಯ ಹೆಸರು ಎರಡು ಕಡೆಗಳಲ್ಲಿ ದಾಖಲಾಗಿರುವುದು ಅಥವಾ ಮೃತಪಟ್ಟವರ ಹೆಸರುಗಳು ಪಟ್ಟಿಯಲ್ಲಿ ಮುಂದುವರಿದಿರುವುದನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಹೇಳಿದರು.

ಅದೇ ಸಂದರ್ಭದಲ್ಲಿ, ನೈಜ ಮತದಾರರ ಹೆಸರುಗಳಲ್ಲಿ ತಪ್ಪು ಮಾಹಿತಿ, ವಿಳಾಸದ ದೋಷ ಅಥವಾ ಇತರ ಕ್ಲೆರಿಕಲ್ ದೋಷಗಳಿಂದ ಹೆಸರುಗಳು ಕೈಬಿಟ್ಟಿರುವ ಸಾಧ್ಯತೆಯೂ ಇದೆ. ಆದ್ದರಿಂದ ಪ್ರತಿಯೊಂದು ಪ್ರಕರಣವನ್ನು ಸೂಕ್ತವಾಗಿ ಪರಿಶೀಲಿಸಿ, ಅಗತ್ಯ ತಿದ್ದುಪಡಿಗಳನ್ನು ಮಾಡಿಸುವ ಕೆಲಸವನ್ನು ಬಿಎಲ್‌ಎಗಳು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಶ್ರೀ ಐವನ್ ಡಿ’ಸೋಜಾ ಅವರು ಸೂಚಿಸಿದರು.

ಬಿಎಲ್‌ಎಗಳು ಮನೆಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ಸಂಗ್ರಹಿಸಿದ ಬಳಿಕವೇ ಸಂಬಂಧಿತ ಅರ್ಜಿಗಳಿಗೆ ಶಿಫಾರಸು ನೀಡಬೇಕು. ಯಾವುದೇ ಪ್ರಕರಣವನ್ನು ಸಂಪೂರ್ಣ ಪರಿಶೀಲನೆ ನಡೆಸದೆ ಮುಂದುವರಿಸಬಾರದು ಎಂದು ಅವರು ಸ್ಪಷ್ಟವಾಗಿ ತಿಳಿಸಿದರು.

ಈ ಸಭೆಯಲ್ಲಿ ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ ಸಲೀಂ, ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಬಿ. ಸಾಲಿಯಾನ್, ತರಬೇತುದಾರರಾದ ಅಮಿತಾ ಅಶ್ವಿನ್ ಹಾಗೂ 203 ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಎಲ್ಲಾ ವಾರ್ಡ್‌ಗಳ ಸಂಯೋಜಕರು ಉಪಸ್ಥಿತರಿದ್ದರು.


Spread the love
Subscribe
Notify of

0 Comments