ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದು ಹಲ್ಲೆಗೈದು ಕೊಲೆ: ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಸುಳ್ಯದ ವ್ಯಕ್ತಿಯೊಬ್ಬರನ್ನು ಕಳೆದ ಅಕ್ಟೋಬರ್ ತಿಂಗಳಲ್ಲಿ ಕಾರು ಬಾಡಿಗೆ ನೆಪದಲ್ಲಿ ದುಗ್ಗಲಡ್ಕ ಎಂಬಲ್ಲಿಗೆ ಕರೆದೊಯ್ದು ಹಲ್ಲೆಗೈದಿದ್ದು ಮರುದಿನ ವ್ಯಕ್ತಿ ಹಲ್ಲೆ ಆಘಾತದಿಂದ ಸಾವನ್ನಪ್ಪಿದ ಘಟನೆ ಸಂಬಂಧಿಸಿ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಸುಳ್ಯ ಕಸ್ಟಾ ಗ್ರಾಮದ ನಿವಾಸಿ ಸುಮಯ್ಯಾ (35) ಎಂಬವರ ದೂರಿನಂತೆ ಈ ಬಗ್ಗೆ ಕೊಲೆ ಪ್ರಕರಣ ದಾಖಲಾಗಿತ್ತು. ಮಹಿಳೆಯ ಗಂಡ ಅಬ್ದುಲ್ ಜಬ್ಬಾರ್ ಎಂಬವರನ್ನು ಅಕ್ಟೋಬರ್ 16ರಂದು ಮಧ್ಯಾಹ್ನ ವೇಳೆ, ಆರೋಪಿಗಳಾದ ಮೊಹಮ್ಮದ್ ರಫೀಕ್ ಮತ್ತು ಇತರರು, ಕಾರು ಬಾಡಿಗೆ ನೆಪದಲ್ಲಿ ದುಗ್ಗಲಡ್ಕ ಎಂಬಲ್ಲಿಗೆ ಕರೆದುಕೊಂಡು ಹೋಗಿ ಕಿರುಕುಳ ನೀಡಿ, ಅಲ್ಲಿಂದ ಸುಳ್ಯ ಕಲ್ಲುಗುಂಡಿಗೆ ಕರೆತಂದು ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿ ಮನೆಗೆ ಕಳುಹಿಸಿದ್ದರು. ಮರುದಿನ 17ರಂದು ಅಬ್ದುಲ್ ಜಬ್ಬಾರ್ ಮನೆಯಲ್ಲಿದ್ದಾಗ ಅನಾರೋಗ್ಯಕ್ಕೀಡಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಅಬ್ದುಲ್ ಜಬ್ಬಾರ್ ಸಾವಿಗೆ ರಫೀಕ್ ಪಡು ಮತ್ತು ಇತರರು ಹಲ್ಲೆ ನಡೆಸಿದ್ದೇ ಕಾರಣ ಎಂಬುದಾಗಿ ಸುಮಯ್ಯಾ ಅವರು ಅ.18ರಂದು ನೀಡಿದ ದೂರಿನ ಮೇರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ: 125/2025, ಕಲಂ: 105 ಜೊತೆಗೆ 3(5) BNS ರಂತೆ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳು ನಡೆಸಿದ ಹಲ್ಲೆಯ ಪರಿಣಾಮ ಅಬ್ದುಲ್ ಜಬ್ಬಾರ್ ಮೃತಪಟ್ಟಿರುವುದಾಗಿ ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದ್ದರಿಂದ ಸದ್ರಿ ಪ್ರಕರಣವನ್ನು ಕಲಂ: 103 ಜೊತೆಗೆ 3(5) BNS ರಂತೆ ಕೊಲೆ ಪ್ರಕರಣವಾಗಿ ಮಾರ್ಪಡಿಸಲಾಗಿದೆ.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯಾದ ಸುಳ್ಯ ಕಸಬ ನಿವಾಸಿ ಮೊಹಮ್ಮದ್ ರಫೀಕ್ (41) ಎಂಬಾತನನ್ನು ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿ, ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಿದ ಕಾರನ್ನು ಸ್ವಾಧೀನಪಡಿಸಿದ್ದು, ಇನ್ನೋರ್ವ ಆರೋಪಿ ಸುಳ್ಯ ಸಂಪಾಜೆ ನಿವಾಸಿ ಮನೋಹರ್ ಕೆ ಎಸ್ @ ಮನು (42) ಎಂಬಾತನನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ, ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.













