
ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಣೆ – ಪ್ರಖ್ಯಾತ್ ಶೆಟ್ಟಿ ಆಕ್ರೋಶ
ಉಡುಪಿ: ಈ ವರ್ಷದ ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ಕೇಂದ್ರ ಸರಕಾರಕ್ಕೆ ಕರ್ನಾಟಕದ ಮೇಲೆ ಇರುವ ನಿರ್ಲಕ್ಷ್ಯ ಭಾವನೆಯನ್ನು ಎತ್ತಿತೋರಿಸುತ್ತಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಹೇಳಿದ್ದಾರೆ.
ಸತತ ಹದಿಮೂರು ವರ್ಷಗಳ ಕಾಲ ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ಥಬ್ದ ಚಿತ್ರಗಳು ನಮ್ಮ ಇತಿಹಾಸ ಸಂಸ್ಕೃತಿ ಮತ್ತು ಪ್ರಕೃತಿಯ ಹಿರಿಮೆಗಳನ್ನು ಪ್ರದರ್ಶಿಸಿ ಇಡೀ ದೇಶದ ಶ್ಲಾಘನೆಗೆ ಪಾತ್ರವಾಗಿದೆ. ಇದೇ ಮೊದಲ ಬಾರಿ ಕೇಂದ್ರ ಸರ್ಕಾರ ಈ ಗೌರವಕ್ಕೆ ಧಕ್ಕೆ ತಂದಿದ್ದು, ಇದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಈ ನಿರ್ಧಾರ ಕನ್ನಡ, ಕನ್ನಡಿಗ ಮತ್ತು ಕರ್ನಾಟಕಕ್ಕೆ ಮಾಡಿರುವ ಅವಮಾನವಾಗಿದೆ.
ಮಾತೆತ್ತಿದ್ದರೆ ನಮ್ಮದು ಡಬಲ್ ಇಂಜಿನ್ ಸರಕಾರ ಎಂದು ಬಡಾಯಿಕೊಚ್ಚಿಕೊಳ್ಳುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯದ ಹಕ್ಕು ಮತ್ತು ಗೌರವದ ಪ್ರಶ್ನೆ ಎದುರಾದಾಗ ಯಾಕೆ ಬಾಯಿ ಹೊರಡುವುದಿಲ್ಲ. ಕಳೆದ ಬಾರಿ ಕೂಡ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ಥಬ್ಧ ಚಿತ್ರ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡ ಕೇಂದ್ರ ಸರಕಾರ ಈ ಬಾರಿ ಕರ್ನಾಟಕದ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡದೆ ಮತ್ತೊಮ್ಮೆ ರಾಜ್ಯಕ್ಕೆ ಅವಮಾನ ಮಾಡಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.