
ಬಂಡೀಪುರ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ
ಚಾಮರಾಜನಗರ: ರೈತರ ಜಮೀನುಗಳಿಗೆ ಲಗ್ಗೆಯಿಟ್ಟು ಫಸಲು, ಆಸ್ತಿ-ಪಾಸ್ತಿ ನಷ್ಟ ಮಾಡುತ್ತಿದ್ದುದಲ್ಲದೆ ಜನರ ಮೇಲೆಯೇ ದಾಳಿ ಮಾಡಲು ಮುಂದಾಗುತ್ತಿದ್ದ ರೇಡಿಯೋ ಕಾಲರ್ ಅಳವಡಿಸಿದ್ದ ಪುಂಡಾನೆಯನ್ನು ಸಾಕಾನೆ ಅಭಿಮನ್ಯು ಮತ್ತು ಇತರೆ ಸಾಕಾನೆಗಳ ಸಹಕಾರದೊಂದಿಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯ ವ್ಯಾಪ್ತಿಯ ಕಡೆಕೋಟಿ ಪ್ರದೇಶದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಡಾನೆಯನ್ನು ಸೆರೆ ಹಿಡಿದು ಸ್ಥಳಾಂತರಿಸುವಂತೆ ರೈತರು ಅರಣ್ಯ ಇಲಾಖೆಯವರಿಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಕಳೆದ ಡಿಸೆಂಬರ್ 21 ರಂದು ಮೇಲಧಿಕಾರಿಗಳೊಂದಿಗೆ ಪತ್ರ ವ್ಯವಹಾರ ನಡೆಸಿ ಡಿಸೆಂಬರ್ 30 ರಂದು ಕಾಡಾನೆ ಸೆರೆಗೆ ಅನುಮತಿ ಪಡೆಯಲಾಗಿತ್ತು. ಆನೆಯ ಚಲನ-ವಲನ ಪರಿಶೀಲಿಸಿ ಜನವರಿ 8 ರಂದು ಪತ್ತೆ ಹಚ್ಚುವ ಕಾರ್ಯ ಚುರುಕುಗೊಳಿಸಲಾಗಿತ್ತು. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಸಾಕಾನೆಗಳಾದ ಕೂಂಬಿಂಗ್ ಆಪರೇಷನ್ ಸ್ಪೆಷಲಿಸ್ಟ್ಗಳಾದ ಅಭಿಮನ್ಯು, ಮಹೇಂದ್ರ, ಗಣೇಶ ಮತ್ತು ಭೀಮ ಆನೆಗಳನ್ನು ನಿಯೋಜನೆ ಮಾಡಿಕೊಂಡು, ಪಶು ವೈಧ್ಯಾಧಿಕಾರಿ ಡಾ. ಮಿರ್ಜಾ ವಾಸಿಂ, ಡಾ.ರಮೇಶ್ ಹಾಗೂ ಡಾ. ಮುಜೀಬ್ ರೆಹಮಾನ್ ಹಾಗೂ ಸಹಾಯಕರನ್ನು ಬಳಸಿಕೊಂಡು ಆನೆ ಹಿಡಿಯುವ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.
ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸತತ ಪರಿಶ್ರಮದ ಫಲವಾಗಿ ಕಾಡಾನೆಗೆ ಅರವಳಿಕೆ ಚುಚ್ಚು ಮದ್ದು ನೀಡುವ ಮೂಲಕ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ. ಸೆರೆ ಸಿಕ್ಕ ರೇಡಿಯೋ ಕಾಲರ್ ಅಳವಡಿಸಿರುವ ಪುಂಡಾನೆಯನ್ನು ಬಂಡೀಪುರ ವಿಭಾಗ ವ್ಯಾಪ್ತಿಯ ಐನೂರು ಮಾರಿಗುಡಿ ವಲಯದ ರಾಂಪುರ ಸಾಕಾನೆ ಶಿಬಿರಕ್ಕೆ ಸ್ಥಳಾಂತರಿಸಲಾಗುತ್ತಿದೆ. ಅಭಿಮನ್ಯು ಪರಾಕ್ರಮದ ಎದುರು ಪುಂಡಾನೆ ಸೋತು ಶರಣಾಗಿದ್ದು, ರೈತರು ನಿಟ್ಟುಸಿರು ಬಿಟ್ಟಿದ್ದಾರೆ.
ಹಾಸನ, ದಕ್ಷಿಣ ಕನ್ನಡ, ಚಾಮರಾಜನಗರ ಸೇರಿದಂತೆ ಕಾಡಾಂಚಿನ ಪ್ರದೇಶದಲ್ಲಿ ಕಾಡಾನೆ ದಾಳಿ ನಿರಂತರವಾಗಿ ನಡೆಯುತ್ತಲೇ ಇರುತ್ತದೆ, ಕಾಡಾನೆ ದಾಳಿಯಿಂದಾಗಿ ಸ್ಥಳೀಯರು ಆತಂಕದಲ್ಲೇ ಜೀವನ ಸಾಗಿಸುವ ಪ್ರಸಂಗ ಎದುರಾಗಿದೆ. ಈ ಬಗ್ಗೆ ಸರ್ಕಾರದ ವಿರುದ್ಧ ಕೂಡ ಆಕ್ರೋಶ ವ್ಯಕ್ತವಾಗಿದೆ. ಅರಣ್ಯ ಇಲಾಖೆ ತಮ್ಮಿಂದಾಗುವ ಎಲ್ಲ ಪ್ರಯತ್ನವನ್ನು ಮಾಡುತ್ತಿದ್ದರೂ ಕಾಡಾನೆಗಳು ಅರಣ್ಯದಿಂದ ನಾಡಿನತ್ತ ಬರುವುದು ಮಾತ್ರ ನಿಲ್ಲುತ್ತಿಲ್ಲ ಎಂಬುದು ಕಾಡಂಚಿನ ಜನರ ಆರೋಪವಾಗಿದೆ.