ಬಿ.ಸಿ ರೋಡಿನಲ್ಲಿ ಯುವತಿಯ ಹತ್ಯೆ ಪ್ರಕರಣ; ಇಲಿಪಾಷಾಣ ಸೇವಿಸಿದ ಆರೋಪಿ: ದ.ಕ ಜಿಲ್ಲಾ ಎಸ್ಪಿ ಡಾ. ಅರುಣ್
ಮಂಗಳೂರು: ಬಿ.ಸಿ ರೋಡಿನಲ್ಲಿ ಗುರುವಾರ ನಡೆದ ಯುವತಿಯೊಬ್ಬಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಶುಕ್ರವಾರ ಬೆಳಗ್ಗೆ ಮಂಗಳೂರಿನಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.
ಗುರುವಾರ ಸಂಜೆ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 21 ವರ್ಷದ ಲಾವಣ್ಯ ಎಂಬ ಯುವತಿಯೊಬ್ಬಳನ್ನು ಯುವಕನೊಬ್ಬ ತಲವಾರು ಮೂಲಕ ದಾಳಿ ನಡೆಸಿ ಕೊಲೆ ಮಾಡಿರುವ ಬಗ್ಗೆ ದೂರು ಬಂದಿದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಶೇಷ ಪೊಲೀಸ್ ತಂಡ ರಚಿಸುವ ಮೂಲಕ ಆರೋಪಿಯನ್ನು ಪತ್ತೆ ಹಚ್ಚಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ವಿಚಾರಣೆ ವೇಳೆ ಆತ ಇಲಿಪಾಷಾಣ ಸೇವಿಸಿರುವುದಾಗಿ ಹೇಳಿದ್ದು, ಆತನನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂದೆ ಅಗತ್ಯ ಕಾನೂನು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.
