
ಬುಡಕಟ್ಟು ಜನರಿಗೆ ಕಾನೂನು ಅರಿವು ಕಾರ್ಯಕ್ರಮ
ಕುಂದಾಪುರ: ಕಾನೂನು ಸೇವಾ ಪ್ರಾಧಿಕಾರದ ಮೂಲಕ ರಾಜ್ಯದ 30 ಜಿಲ್ಲೆ ಹಾಗೂ 149 ತಾಲ್ಲೂಕುಗಳ ಪ್ರತಿ ಹಳ್ಳಿಗಳಲ್ಲಿಯೂ ಕಾನೂನು ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿನ 69 ಸಾವಿರಕ್ಕೂ ಅಧಿಕ ಗ್ರಾಮದಲ್ಲಿನ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ಅರಿವು ಮತ್ತು ನೆರವು ನೀಡುವ ಉದ್ದೇಶದಿಂದ ಪ್ರಾಧಿಕಾರ ಈ ಕಾರ್ಯಕ್ರಮವನ್ನು ನೀಡುತ್ತಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೆಚ್.ಶಶಿಧರ ಶೆಟ್ಟಿ ಹೇಳಿದರು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಅರಣ್ಯ ಇಲಾಖೆ ಉಡುಪಿ, ಕುಂಭಾಸಿ ಗ್ರಾಮ ಪಂಚಾಯಿತಿ ಮತ್ತು ಕೊರಗ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ 75 ನೇ ಸ್ವಾತಂತ್ರ್ಸೋವ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಕುಂಭಾಸಿ ಮಕ್ಕಳ ಮನೆಯಲ್ಲಿ ನಡೆದ ‘ ಬುಡಕಟ್ಟು ಜನರಿಗೆ ಕಾನೂನು ಅರಿವು ಕಾರ್ಯಕ್ರಮ’ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕುಂಭಾಸಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ಎಸ್ ಆರ್ ಅಧ್ಯಕ್ಷತೆ ವಹಿಸಿದ್ದರು. ಉಡುಪಿಯ ಹಿರಿಯ ವಕೀಲ ಉದಯ ಕುಮಾರ್ ನಲ್ಸಾ ಅವರು ಬುಡಕಟ್ಟು ಹಕ್ಕುಗಳ ರಕ್ಷಣೆ ಮತ್ತು ಜಾರಿ ಯೋಜನೆ -2016 ಕುರಿತು ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು. ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್ ಹಾಗೂ ಉಡುಪಿ ವಕೀಲ ಸಂಘದ ಅಧ್ಯಕ್ಷ ನಾಗರಾಜ ಬಿ ಇದ್ದರು.
ಕೊರಗ ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷ ಗಣೇಶ್ ವಿ ಕುಂದಾಪುರ ನಿರೂಪಿಸಿದರು. ಐಟಿಡಿಪಿ ಇಲಾಖೆ ವ್ಯವಸ್ಥಾಪಕ ವಿಶ್ವನಾಥ ಶೆಟ್ಟಿ ವಂದಿಸಿದರು.