ಭಾವೈಕ್ಯತೆಯ ತಾಣ ಕೊಡಗಿನ ಎಮ್ಮೆಮಾಡುನಲ್ಲಿ ಉರೂಸ್ ಸಂಭ್ರಮ

Spread the love

ಭಾವೈಕ್ಯತೆಯ ತಾಣ ಕೊಡಗಿನ ಎಮ್ಮೆಮಾಡುನಲ್ಲಿ ಉರೂಸ್ ಸಂಭ್ರಮ

ಮಡಿಕೇರಿ: ಭಾವೈಕ್ಯತೆಯ ತಾಣವಾಗಿರುವ ಕೊಡಗಿನ ಎಮ್ಮೆಮಾಡುವಿನಲ್ಲೀಗ ವಾರ್ಷಿಕ ಮಖಾಂ ಉರೂಸ್ ಸಂಭ್ರಮ ಕಂಡು ಬರುತ್ತಿದ್ದು, ಕೊಡಗು ಮಾತ್ರವಲ್ಲದೆ ಇತರೆ ಎಲ್ಲಕಡೆಯಿಂದ ಜನ ಸಾಗರವೇ ಹರಿದು ಬರುತ್ತಿದೆ. ಉರೂಸ್ ಗೆ ಕೇವಲ ಮುಸ್ಲಿಂ ಮಾತ್ರವಲ್ಲದೆ ಎಲ್ಲ ಜಾತಿ ಜನಾಂಗದವರು ಪಾಲ್ಗೊಳ್ಳುವುದು ವಿಶೇಷವಾಗಿದೆ.

ತನ್ನದೇ ಆದ ಇತಿಹಾಸ, ನಿಸರ್ಗ ಸೌಂದರ್ಯ ಹಾಗೂ ಧಾರ್ಮಿಕ ಕಾರ್ಯಗಳಿಂದ ಸದಾ ಎಲ್ಲರನ್ನು ಸೆಳೆಯುತ್ತಿರುವ ಎಮ್ಮೆಮಾಡು ಸೂಫಿ ಸಂತರು ಕಾಲಿಟ್ಟು ಪಾವನಗೊಳಿಸಿದ ಪುಣ್ಯ ಭೂಮಿಯಾಗಿದೆ. ಸೂಫಿ ಸಂತರು ತಮ್ಮ ಜೀವಿತಾವಧಿಯ ಕೊನೆಯ ಕಾಲದಲ್ಲಿ ಈ ಗ್ರಾಮಕ್ಕೆ ಆಗಮಿಸಿ ಸಮಾಧಿ ಹೊಂದುವುದರ ಮೂಲಕ ಅಂತಿಮ ವಿಶ್ರಾಂತಿ ಪಡೆಯುತ್ತಿದ್ದು, ಜೀವನದಲ್ಲೊಮ್ಮೆ ಆ ಸಂತರ ದರ್ಶನ ಭಾಗ್ಯ ಪಡೆದು ಧನ್ಯರಾಗಬೇಕೆನ್ನುವುದು ಇಲ್ಲಿಗೆ ಆಗಮಿಸುವವರ ಬಯಕೆಯಾಗಿರುತ್ತದೆ.

ಎಮ್ಮೆಮಾಡುವಿನ ಬಗ್ಗೆ ಇತಿಹಾಸದ ಪುಟಗಳನ್ನು ತಿರುವಿಹಾಕುತ್ತಾ ಹೋದರೆ ಒಂದಷ್ಟು ಪವಾಡಗಳು ಗೋಚರಿಸುತ್ತವೆ. ನೂರಾರು ವರ್ಷಗಳ ಹಿಂದೆ ಊರೂರು ಅಲೆಯುತ್ತಾ ಶಾಂತಿ ಸಂದೇಶವನ್ನೂ ಸಾರುತ್ತಾ ಸಾಗುತ್ತಿದ್ದ ಸೂಫಿ ಶಹೀದ್ ಸಂತರು ತಮ್ಮ ಜೀವಿತದ ಕೊನೆಯ ದಿನಗಳಲ್ಲಿ ಕೊಡಗಿನ ಎಮ್ಮೆಮಾಡಿಗೆ ಬಂದಿದ್ದರು. ಬೆಟ್ಟಗುಡ್ಡಗಳು… ತೊರೆಗಳು… ಬೀಸುವ ತಂಗಾಳಿ… ಎಲ್ಲೆಡೆ ನೋಡಿದರೂ ಹಚ್ಚ ಹಸಿರಿನಿಂದ ಕಂಗೊಳಿಸುವ ನಿಸರ್ಗ ಸೂಫಿ ಶಹೀದ್ ಸಂತರನ್ನು ಸೆಳೆದಿತ್ತು. ತನ್ನ ಜೀವಿತಾವಧಿಯ ಕೊನೆಯ ವಿಶ್ರಾಂತಿಗೆ ಈ ತಾಣವೇ ಸೂಕ್ತವೆಂದು ನಿರ್ಧರಿಸಿದ ಅವರು ಗ್ರಾಮದ ಎಲ್ಲಾ ಜನಾಗದವರೊಂದಿಗೆ ಬೆರೆಯುತ್ತಾ ಅವರ ಕಷ್ಟಕಾರ್ಪಣ್ಯಕ್ಕೆ ಸಲಹೆ ನೀಡುತ್ತಾ ಜನತೆಯಲ್ಲಿ ಸೌಹಾರ್ಧತೆಯನ್ನು ಬೆಳೆಸುತ್ತಾ ಹೆಚ್ಚಿನ ಕಾಲವನ್ನು ದೇವರ ಸ್ಮರಣೆಯಲ್ಲೇ ಕಳೆಯತೊಡಗಿದ್ದರು.

ಸದಾ ದೇವರ ಧ್ಯಾನದಲ್ಲಿ ಮಗ್ನರಾಗಿರುತ್ತಿದ್ದ ಅವರನ್ನು ಜನ ಪೂಜ್ಯ ಭಾವನೆಯಿಂದ ಕಾಣುತ್ತಿದ್ದರಲ್ಲದೆ, ದೈವಸ್ವರೂಪಿಯಾದ ಅವರಿಗೆ ನಮಸ್ಕರಿಸಿ ಹೋಗುತ್ತಿದ್ದರು. ಸೂಫಿ ಶಹೀದ್ ಸಂತರ ಬಗ್ಗೆ ಕೇಳಿ ತಿಳಿದ ದೂರದ ಮಂದಿ ಅವರ ದರ್ಶನ ಭಾಗ್ಯಕ್ಕಾಗಿ ಹಾತೊರೆಯುತ್ತಿದ್ದರು. ದಿನಗಳು ಕಳೆಯುತ್ತಿದ್ದಂತೆಯೇ ಅವರಿಗೆ ತಮ್ಮ ಬದುಕಿನ ಅಂತಿಮ ದಿನಗಳು ಸಮೀಪಿಸುತ್ತಿದೆ ಎಂಬುವುದು ಗೋಚರವಾಗಿತ್ತು. ಹಾಗಾಗಿ ಅವರು ಎಮ್ಮೆಮಾಡು ಬಳಿಯ ’ಬರಾಕೊಲ್ಲಿ’ಎಂಬಲ್ಲಿ ಹೆಬ್ಬಂಡೆಯ ಮೇಲೆ ಮಲಗಿದ್ದರಂತೆ ಬಳಲಿದ್ದ ಅವರನ್ನು ಕಂಡ ಹಸುವೊಂದು ಕಟ್ಟಿಹಾಕಿದ ಹಗ್ಗವನ್ನು ತುಂಡರಿಸಿಕೊಂಡು ಬಂದು ಪಕ್ಕದಲ್ಲೇ ಹರಿದು ಹೋಗುತ್ತಿದ್ದ ತೋಡು(ತೊರೆ)ನ ನೀರಿನಲ್ಲಿ ತನ್ನ ಕೆಚ್ಚಲನ್ನು ಮುಳುಗಿಸಿಕೊಂಡು ಬಂದು ಮಂಡಿಯೂರಿ ಅವರ ಬಾಯಿಗೆ ಹಾಲುಣಿಸಿತಂತೆ. ಇದಕ್ಕೆ ಇಂದಿಗೂ ಬಂಡೆಕಲ್ಲಿನ ಮೇಲೆ ಉಳಿದಿರುವ ಕೆಲವು ಕುರುಹುಗಳು ಸಾಕ್ಷಿಯಾಗಿವೆ.

ಸೂಫಿ ಶಹೀದ್ ಸಂತರಿಗೆ ಹಸು ಹಾಲುಣಿಸಿದ ಪವಾಡ ನಡೆದಂದಿನಿಂದ ಇಲ್ಲಿಯವರೆಗೂ ಎಮ್ಮೆಮಾಡು ದರ್ಗಾ ಹಸುಕರುಗಳಿಗೆ ಉಂಟಾಗುವ ರೋಗ ರುಜಿನ ಇನ್ನಿತರ ಯಾವುದೇ ತೊಂದರೆಗಳಿಗೆ ಪರಿಹಾರ ನೀಡುತ್ತಾ ಬರುತ್ತಿರುವುದು ಗಮನಾರ್ಹವಾಗಿದೆ.

ಮನೆಯಲ್ಲಿ ಸಾಕಿದ ಹಸುಕರುಗಳಿಗೆ ಏನಾದರು ಕಾಯಿಲೆ, ತೊಂದರೆಗಳು ಆದಾಗ ಎಮ್ಮೆಮಾಡು ದರ್ಗಾಕ್ಕೆ ಹರಕೆ ಹೊತ್ತುಕೊಳ್ಳುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಪ್ರತಿ ವರ್ಷವೂ ಭಕ್ತರು ತಮ್ಮ ಇಷ್ಟಾರ್ಥ ನೆರವೇರಿಸಿದ್ದಕ್ಕಾಗಿ ಬೆಳ್ಳಿಯ ಹಸುಕರುವಿನ ಪ್ರತಿಕೃತಿ ಹಾಗೂ ತುಪ್ಪ, ನಗದನ್ನು ಹರಕೆಯ ರೂಪದಲ್ಲಿ ಒಪ್ಪಿಸುತ್ತಾರೆ.

ಇದುವರೆಗೆ ಕೇವಲ ದನಕರುಗಳ ಸಮಸ್ಯೆಗೆ ಮಾತ್ರವಲ್ಲದೆ, ಮಾನಸಿಕ, ಶಾರೀರಿಕವಾಗಿ ಕೆಲವೊಂದು ತೊಂದರೆಗಳಿಂದ ಬಳಲುತ್ತಿದ್ದವರು ಕೂಡ ಇಲ್ಲಿಗೆ ಭೇಟಿ ನೀಡಿ ಪರಿಹಾರ ಕಂಡುಕೊಂಡ ಹಲವು ಉದಾಹರಣೆಗಳನ್ನು ನಾವು ಕಾಣಬಹುದು.

ಒಂದು ಕಾಲದಲ್ಲಿ ಕುಗ್ರಾಮವಾದ ಎಮ್ಮೆಮಾಡು ಇಲ್ಲಿನ ದರ್ಗಾದ ಮಹಿಮೆಯಿಂದಾಗಿ ಅಭಿವೃದ್ಧಿಯತ್ತ ಸಾಗುತ್ತಿದ್ದು ಧಾರ್ಮಿಕ, ಸಾಮಾಜಿಕ ಮತ್ತು ವಿದ್ಯಾ ಕೇಂದ್ರವಾಗಿ ದಾಪುಗಾಲಿಡುತ್ತಿದೆ. ಇಲ್ಲಿರುವ ಮಸೀದಿಯಂತು ಸುಂದರವಾಗಿದ್ದು, ಜಿಲ್ಲೆಯಲ್ಲಿರುವ ಮಸೀದಿಗಳ ಪೈಕಿ ಅತಿ ದೊಡ್ಡದಾದ ಮಸೀದಿಯಾಗಿದೆ. ಸುಮಾರು ಒಂದು ಕೋಟಿಗೂ ಹೆಚ್ಚು ಖರ್ಚು ಮಾಡಿ ನಿರ್ಮಿಸಲಾಗಿರುವ ಮಸೀದಿಯು ಸಾವಿರಾರು ಮಂದಿ ನೆರೆದು ಪ್ರಾರ್ಥನೆ ಸಲ್ಲಿಸುವಷ್ಟು ವಿಸ್ತಾರವನ್ನು ಹೊಂದಿದೆ. ಎಮ್ಮೆಮಾಡಿನಲ್ಲಿ ಸೂಫಿ ಶಹೀದ್ ಸಂತರ ಮಸೀದಿಯಲ್ಲದೆ, ಪ್ರವಾದಿ ಮಹಮ್ಮದ್ ಪೈಗಂಬರ್‌ರವರ ವಂಶಸ್ಥರಾದ ಸೈಯದ್ ಹಸನ್ ಸಖಾಫ್ ಎಂಬ ಮತ್ತೊಬ್ಬ ಸಂತರ ಮಸೀದಿಯನ್ನು ಕೂಡ ಕಾಣಬಹುದು. ಈ ಮಸೀದಿಯು ಸೂಫಿ ಶಹೀದ್ ದರ್ಗಾ ಶರೀಫ್‌ಗೆ ತೆರಳುವ ಮಾರ್ಗದ ಬಲಬದಿಯಲ್ಲಿದೆ. ಬಹಳ ವರ್ಷಗಳ ಹಿಂದಿನ ದರ್ಗಾಗಳಾದ ಇವುಗಳನ್ನು ಪುನರ್ರಚಿಸಲಾಗಿದೆ. ಇನ್ನು ಎಮ್ಮೆಮಾಡು ಕೊಡಗಿನ ಮಡಿಕೇರಿಯಿಂದ 32ಕಿಲೋಮೀಟರ್ ದೂರದಲ್ಲಿದ್ದು, ನಾಪೋಕ್ಲಿಗೆ ಸಮೀಪದಲ್ಲಿದೆ.


Spread the love

Leave a Reply

Please enter your comment!
Please enter your name here