
ಭ್ರಷ್ಟಾಚಾರಿಗಳನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ, ಮಾಡಾಳ್ ಶೀಘ್ರ ಬಂಧನ: ಬಿಎಸ್ವೈ
ಕಲಬುರಗಿ: ‘ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಕ್ರಮಕ್ಕೆ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಗೆ ವರದಿ ಸಲ್ಲಿಸಲಾಗಿದೆ. ಶೀಘ್ರವೇ ಅವರ ಬಂಧನವಾಗಲಿದೆ. ಭ್ರಷ್ಟಾಚಾರಿಗಳನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ’ ಎಂದು ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ ಸೋಮವಾರ ಹೇಳಿದರು.
ಮಾಡಾಳ್ ಅವರ ಪುತ್ರ ಪ್ರಶಾಂತ್ ₹ 40 ಲಕ್ಷ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮಾಡಾಳ್ ಅವರು ಕ್ಷಮಿಸಲಾರದಂತಹ ಅಕ್ರಮ ಎಸಗಿ ತಪ್ಪು ಮಾಡಿದ್ದಾರೆ. ಹೀಗಾಗಿ ಅವರ ಬಂಧನ ಆಗಲೇಬೇಕು. ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಮಾಡಾಳ್ ಪ್ರಕರಣ ಮುಚ್ಚಿಹಾಕುವ ಕೆಲಸ ಬಿಜೆಪಿ ಮಾಡುತ್ತಿಲ್ಲ’ ಎಂದರು.
‘ಸಂಸದೆ ಸುಮಲತಾ ಅಂಬರೀಷ್ ಅವರು ಬಿಜೆಪಿ ಸೇರ್ಪಡೆ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ. ಸಚಿವ ಸೋಮಣ್ಣ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಗೆಲ್ಲಲು ಆಗದ ಕ್ಷೇತ್ರದಲ್ಲಿ ಕೆ.ಸಿ ನಾರಾಯಣಗೌಡ ಅವರನ್ನು ಗೆಲ್ಲಿಸಿದ್ದೇವೆ. ಯಾರೆಲ್ಲ ಏನು ಮಾಡುತ್ತಾರೋ ಕಾದು ನೋಡೋಣ’ ಎಂದರು.
‘ನರೇಂದ್ರ ಮೋದಿ ಅವರಂತಹ ಬಲಿಷ್ಠ ನಾಯಕ ತಮ್ಮ ಪಕ್ಷದಲ್ಲಿ ಇರದ ಕಾರಣ ಕಾಂಗ್ರೆಸ್ನವರು ತಮ್ಮ ಅಸ್ತಿತ್ವಕ್ಕಾಗಿ ರಾಜ್ಯ ಬಂದ್ಗೆ ಕರೆ ಕೊಟ್ಟಿದ್ದಾರೆ’ ಎಂದು ಟೀಕಿಸಿದರು.