ಮಂಗಳೂರಿನಲ್ಲಿ ಎಂಡಿಎಂಎ ಮಾರಾಟ: ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು, ಸೊತ್ತು ವಶ; ಆರೋಪಿ ಬಂಧನ
ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದು, ಆತನಿಂದ ಸುಮಾರು ರೂ.2.10 ಲಕ್ಷ ಮೌಲ್ಯದ ಎಂಡಿಎಂಎ ಹಾಗೂ ಇತರೆ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಅಣ್ಣಪ್ಪ ಸ್ವಾಮಿ @ ಮನು (26), ದಿ. ಹನುಮಂತಪ್ಪ ಅವರ ಪುತ್ರ, ಇಡ್ಯಾ ಸಮೀಪದ ಈಶ್ವರ್ ನಗರ ನಿವಾಸಿ ಹಾಗೂ ಪ್ರಸ್ತುತ ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದವನು ಎಂದು ಗುರುತಿಸಲಾಗಿದೆ.
ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಜೂನ್ 25ರಂದು ಕುಳಾಯಿಗುಡ್ಡೆ ಪ್ರದೇಶದ ಮನೆಯಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರು.
ಕಾರ್ಯಾಚರಣೆಯಲ್ಲಿ ಆರೋಪಿಯಿಂದ 15 ಗ್ರಾಂ ಎಂಡಿಎಂಎ (ಅಂದಾಜು ಮೌಲ್ಯ ರೂ.1.50 ಲಕ್ಷ), ಮೊಬೈಲ್ ಫೋನ್, ಜಿಪ್ ಲಾಕ್ ಕವರ್ ಹಾಗೂ ಡಿಜಿಟಲ್ ತೂಕಮಾಪನ ಯಂತ್ರ ಸೇರಿದಂತೆ ಒಟ್ಟು ರೂ.2,10,500 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಆರೋಪಿಯ ವಿರುದ್ಧ ಹಲವು ಪ್ರಕರಣಗಳು
ಬಂಧಿತ ಅಣ್ಣಪ್ಪ ಸ್ವಾಮಿ @ ಮನು ವಿರುದ್ಧ ಈ ಹಿಂದೆಯೂ ವಿವಿಧ ಪೊಲೀಸ್ ಠಾಣೆಗಳಲ್ಲಿ ಗಂಭೀರ ಪ್ರಕರಣಗಳು ದಾಖಲಾಗಿವೆ. ಪಣಂಬೂರು ಹಾಗೂ ಬಜಪೆ ಪೊಲೀಸ್ ಠಾಣೆಗಳಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣಗಳು, ಸುರತ್ಕಲ್ ಠಾಣೆಯಲ್ಲಿ ಹಲ್ಲೆ ಹಾಗೂ ಮಸೀದಿಗೆ ಕಲ್ಲು ತೂರಾಟ ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿರುವುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಅವರ ಪತ್ತೆಗಾಗಿ ತನಿಖೆ ಮುಂದುವರಿದಿದೆ.













