ಮಂಗಳೂರು: ಸರಕಳ್ಳತನ ಪ್ರಕರಣದ ಆರೋಪಿ ಅಲ್ತಾಫ್ ಹುಸೈನ್ ಬಂಧನ
ಮಂಗಳೂರು: ಸೂಟರ್ಪೇಟೆಯಲ್ಲಿ ಮಹಿಳೆಯೊಬ್ಬರ ಬಂಗಾರದ ಸರ ಕಸಿದುಕೊಂಡು ಬೈಕ್ನಲ್ಲಿ ಪರಾರಿಯಾಗಿದ್ದ ಪ್ರಕರಣದ ಪ್ರಮುಖ ಆರೋಪಿ ಅಲ್ತಾಫ್ ಹುಸೈನ್ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಜೂನ್ 26ರಂದು ಪಾಂಡೇಶ್ವರದ ರೋಸಾರಿಯೋ ಶಾಲೆ ಬಳಿ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ಯುತ್ತಿದ್ದ ವೇಳೆ ಅಲ್ತಾಫ್ ಹುಸೈನ್ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಪೊಲೀಸರ ವಶದಿಂದ ಪರಾರಿಯಾಗಿದ್ದ.
ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಅಲ್ತಾಫ್ ಹುಸೈನ್ ಪತ್ತೆಗೆ ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು. ನಿರಂತರ ಕಾರ್ಯಾಚರಣೆ ನಡೆಸಿದ ಪೊಲೀಸರು ಖಚಿತ ಮಾಹಿತಿ ಮೇರೆಗೆ ಆಗಸ್ಟ್ 10ರಂದು ವಿಜಯಪುರ ನಗರದಲ್ಲಿ ಆರೋಪಿಯನ್ನು ಬೆನ್ನಟ್ಟಿ ಬಂಧಿಸಿದ್ದಾರೆ.
ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಾರುತಿ ಪಿ. ಹಾಗೂ ಸಿಬ್ಬಂದಿ ಲಕ್ಷ್ಮಣ ಸಾಲೋಟಗಿ, ಸಾಗರ್ ಮತ್ತು ಆಂಜನೇಯ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದೆ.
ಬಂಧಿತ ಆರೋಪಿಯ ವಿರುದ್ಧ ರಾಜ್ಯದ ವಿವಿಧೆಡೆ 6 ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
