ಮನಪಾದಲ್ಲಿ ಜನನ- ಮರಣ ಪ್ರಮಾಣ ಪಕ್ರಿಯೆಗೆ ತಡೆ: ವೇದವ್ಯಾಸ ಕಾಮತ್
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಸಿಬ್ಬಂದಿ, ಅಧಿಕಾರಿಗಳು ಎಸ್ಐಆರ್ ಕರ್ತವ್ಯಕ್ಕೆ ನಿಯೋಜನೆಗೊಂಡಿರುವುದರಿಂದ ಜುಲೈ 29ರವರೆಗೆ ‘ಒಂದು ತಿಂಗಳು ಜನನ ಮತ್ತು ಮರಣಗಳ ನೋಂದಣಿ ಘಟಕದಲ್ಲಿ ಅರ್ಜಿ ಸ್ವೀಕಾರ ಬಂದ್’ ಎಂದು ಬೋರ್ಡ್ ಹಾಕಲಾಗಿದೆ. ಇದರಿಂದಾಗಿ ಸಾರ್ವಜನಿಕರು ತುರ್ತಾಗಿ ಜನನ, ಮರಣ ಪತ್ರ ಪಡೆಯಲು ಸಾಧ್ಯವಾಗದೇ ಕಂಗೆಟ್ಟಿದ್ದಾರೆ. ಮನಪಾ ಆಡಳಿತ ತಕ್ಷಣ ಈ ಸಮಸ್ಯೆ ಬಗೆಹರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಆಗ್ರಹಿಸಿದರು.
ಆಡಳಿತಾಧಿಕಾರಿ ಮೂಲಕ ಪಾಲಿಕೆಯಲ್ಲಿ ಆಡಳಿತ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಕಾರ ಇನ್ನು ಒಂದು ತಿಂಗಳು ಮಂಗಳೂರಿನಲ್ಲಿ ಜನನ, ಮರಣಗಳು ಇರುವುದಿಲ್ಲವೇ? ಶಾಲಾ ಮಕ್ಕಳ ದಾಖಲಾತಿಗೆ ಜನನ ಪ್ರಮಾಣ ಪತ್ರ ಅಗತ್ಯವಾಗಿ ಬೇಕಿರುವ ಪೋಷಕರು ಏನು ಮಾಡಬೇಕು? ಪಾಸ್ಪೋರ್ಟ್ ಮಾಡಿಸಿಕೊಳ್ಳವವರು ಏನು ಮಾಡಬೇಕು? ಸಾರ್ವಜನಿಕರು ನನಗೆ ದೂರು ನೀಡುತ್ತೇವೆ ಎಂದು ಹೇಳಿದ ಕಾರಣ ಮಂಗಳವಾರ ಅರ್ಜಿ ತೆಗೆದುಕೊಳ್ಳಲು ಆರಂಭಿಸಿದ್ದಾರೆ. ಆದರೆ ಪ್ರಮಾಣ ಪತ್ರಕ್ಕೆ ಅವಸರ ಮಾಡುವಂತಿಲ್ಲ ಎಂದು ಷರತ್ತು ಹಾಕುತ್ತಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಸರಕಾರ ಇದ್ದಾಗ 5 ರೂ. ಇದ್ದ ಜನನ, ಮರಣ ಪ್ರಮಾಣಪತ್ರ ಶುಲ್ಕವನ್ನು ಕಾಂಗ್ರೆಸ್ ಸರಕಾರ 75 ರೂ.ಗೆ ಏರಿಸಿದೆ. ಈಗ ಅರ್ಜಿ ಸ್ವೀಕಾರವನ್ನೇ ಬಂದ್ ಮಾಡಿದೆ. ಇನ್ನು ಒಂದು ತಿಂಗಳು ಮಂಗಳೂರಿನ ಜನರಿಂದ ಯಾವುದೇ ರೀತಿಯ ತೆರಿಗೆ ವಸೂಲಿ ಇಲ್ಲ, ಲಂಚ ಸ್ವೀಕಾರ ಮಾಡುವುದಿಲ್ಲ ಎಂದು ಪಾಲಿಕೆಯವರು ಬೋರ್ಡ್ ಹಾಕಲಿ. ಕಾಂಗ್ರೆಸ್ ನೇತೃತ್ವದ ಪಾಲಿಕೆಯ ಆಡಳಿತ ಜನರಿಗೆ ಯಾವ ರೀತಿಯಲ್ಲಿ ಹಿಂಸೆ ನೀಡುತ್ತಿದೆ ಎಂಬುದಕ್ಕೆ ಪ್ರತಿನಿತ್ಯ ಪಾಲಿಕೆಯ ಕಚೇರಿ ಮುಂದೆ ಜನರು ಸಾಲುಗಟ್ಟಿ ನಿಂತಿರುವುದೇ ಸಾಕ್ಷಿ. ಈ ಅವ್ಯವಸ್ಥೆಯಿಂದಾಗಿ ಪ್ರತಿನಿತ್ಯ ಸಾರ್ವಜನಿಕರ ಹಾಗೂ ಪಾಲಿಕೆಯ ಸಿಬ್ಬಂದಿ ನಡುವೆ ಅನಗತ್ಯ ಮಾತಿನ ಚಕಮಕಿ ನಡೆಯುತ್ತಿದ್ದು, ಇದಕ್ಕೆಲ್ಲ ಅಂತ್ಯ ಹಾಡಿ ಸಾರ್ವಜನಿಕರ ಕೆಲಸಗಳು ಸುಗಮವಾಗಿ ನಡೆಯಬೇಕು ಎಂದು ಶಾಸಕ ಕಾಮತ್ ಒತ್ತಾಯಿಸಿದರು.
ಮಂಗಳೂರು ನಗರ ವ್ಯಾಪ್ತಿಯಲ್ಲಿ ಈಗ ಭೂಪರಿವರ್ತನೆ (ಕನ್ವರ್ಷನ್) ಕಗ್ಗಂಟಾಗಿದ್ದು ಜನ ಸಾಮಾನ್ಯರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಕಂದಾಯ ಇಲಾಖೆಯಡಿ ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಗುತ್ತಿದ್ದ ಭೂಪರಿವರ್ತನೆ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರವು ಈಗ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ವಹಿಸಿಕೊಟ್ಟಿದೆ. ಇದೀಗ ಕನ್ವರ್ಷನ್ಗೆ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು, ಸರ್ವೆಯರ್ಗಳನ್ನು ಕಂದಾಯ ಇಲಾಖೆಯಲ್ಲಿ ಇಟ್ಟುಕೊಂಡು, ಯಾವುದೇ ಪರ್ಯಾಯ ವ್ಯವಸ್ಥೆಗಳನ್ನು ಮಾಡದೇ ನೇರವಾಗಿ ಮುಡಾಗೆ ವಹಿಸಿದ ಪರಿಣಾಮ ಗೊಂದಲ ಉಂಟಾಗಿದೆ. ಯಾವುದೇ ನಕ್ಷೆ ಇಲ್ಲದೇ ಕನ್ವರ್ಷನ್ ಮಾಡಲು ಸಾಧ್ಯವಿಲ್ಲ ಎಂದು ಮುಡಾದವರು ಹೇಳುತ್ತಾರೆ. ನಕ್ಷೆ ಮಾಡಬೇಕಾದ ಕಂದಾಯ ಇಲಾಖೆಯವರು ಸರಕಾರದ ಆದೇಶದ ಪ್ರಕಾರ ನಾವು ಮಾಡುವಂತಿಲ್ಲ ಎನ್ನುತ್ತಿದ್ದಾರೆ. ಕನ್ವರ್ಷನ್ ಆಗದೇ ಯಾವುದೇ ಭೂಮಾರಾಟ ಸಾಧ್ಯವಿಲ್ಲ, ಖರೀದಿಗೂ ಯಾರೂ ಮುಂದೆ ಬರುವುದಿಲ್ಲ. ಈ ವಿಚಾರದಲ್ಲಿ ಸಾರ್ವಜನಿರು ಪರದಾಡುವಂತಾಗಿದೆ ಎಂದು ಆರೋಪಿಸಿದರು.
ಈ ಬಗ್ಗೆ ಕಂದಾಯ ಇಲಾಖೆ ಸಚಿವರು, ಕಾರ್ಯದರ್ಶಿಗೆ ಪತ್ರ ನೀಡಲಾಗಿದ್ದು, ನಗರಾಭಿವೃದ್ಧಿ ಇಲಾಖೆ ಸಚಿವರು, ಕಾರ್ಯದರ್ಶಿಗೂ ಮನವಿ ನೀಡಲಾಗುವುದು. ರಾಜ್ಯ ಕಾಂಗ್ರೆಸ್ ಸರ್ಕಾರ ಕೂಡಲೇ ಈ ಬಗ್ಗೆ ಗಮನ ಹರಿಸಿ, ಜನರಿಗೆ ಆಗುತ್ತಿರುವ ತೊಂದರೆಯನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.
ಎಸ್ಐಆರ್ ಪ್ರಕ್ರಿಯೆಯಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಆಡಳಿತ ವ್ಯವಸ್ಥೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಒಂದೇ ಕಡೆ ಜನರನ್ನು ಒಟ್ಟುಸೇರಿಸಿ ಎಸ್ಐಆರ್ ಫಾರಂ ವಿತರಿಸಿ ಭರ್ತಿ ಮಾಡಲಾಗುತ್ತಿದೆ. ವಿದೇಶದಲ್ಲಿ ಇದ್ದವರ ಫಾರಂನ್ನೂ ಭರ್ತಿ ಮಾಡಿ ಸಹಿ ಮಾಡಲಾಗುತ್ತಿದೆ. ವಾಸ್ತವ್ಯ ಪ್ರಮಾಣಪತ್ರ ನೀಡಿ ಎಸ್ಐಆರ್ ಪ್ರಕ್ರಿಯೆ ನಡೆಸಲಾಗುತ್ತಿದೆ. ಅನರ್ಹರನ್ನೂ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಹುನ್ನಾರ ನಡೆಯುತ್ತಿದೆ. ಈ ಎಲ್ಲದರ ಬಗ್ಗೆ ದಾಖಲೆ ಇರಿಸಿ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಬಿಜೆಪಿ ಮಂಗಳೂರು ದಕ್ಷಿಣ ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ, ಲಲೇಶ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಕಾರ್ಯದರ್ಶಿ ಪೂರ್ಣಿಮಾ, ಮಂಡಲದ ಪದಾಧಿಕಾರಿ ಮಂಗಳಾ ಆಚಾರ್ ಉಪಸ್ಥಿತರಿದ್ದರು.













