ಮನಪಾ ಆಯುಕ್ತರಾಗಿ ರಾಹುಲ್ ರತ್ನಮ್ ಪಾಂಡೆ ನೇಮಕ
ಮಂಗಳೂರು: ರಾಜ್ಯ ಸರ್ಕಾರವು ಆಡಳಿತಾತ್ಮಕ ವರ್ಗಾವಣೆಯ ಭಾಗವಾಗಿ ಮಂಗಳೂರು ಮಹಾನಗರ ಪಾಲಿಕೆಗೆ (ಎಂಸಿಸಿ) ನೂತನ ಆಯುಕ್ತರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
2018ನೇ ಬ್ಯಾಚ್ನ ಐಎಎಸ್ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ ನೇಮಕ ಮಾಡಲಾಗಿದೆ.
ಈವರೆಗೆ ಅವರು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ (KSMSCL) ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ರವಿಚಂದ್ರ ನಾಯಕ್ (ಕೆಎಎಸ್) ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ರಾಹುಲ್ ರತ್ನಂ ಪಾಂಡೆ ಅವರನ್ನು ನೇಮಿಸಲಾಗಿದೆ. ಈ ವರ್ಗಾವಣೆ ಮತ್ತು ನೇಮಕಾತಿಯು ತಕ್ಷಣದಿಂದಲೇ ಜಾರಿಗೆ ಬರುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಆದೇಶ ಹೊರಡಿಸಿದೆ.
ನೂತನ ಆಯುಕ್ತರ ನೇಮಕದೊಂದಿಗೆ ಮಂಗಳೂರು ನಗರದ ನಾಗರಿಕ ಸೌಲಭ್ಯಗಳ ಅಭಿವೃದ್ಧಿ, ಮೂಲಸೌಕರ್ಯ ಕಾಮಗಾರಿಗಳು, ಸ್ವಚ್ಛತಾ ವ್ಯವಸ್ಥೆ, ಮಳೆಗಾಲದ ನಿರ್ವಹಣೆ ಹಾಗೂ ವಿವಿಧ ನಗರಾಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.
