ಮುಲ್ಕಿ ನೀರಿನ ಸಮಸ್ಯೆ ಪರಿಹಾರಕ್ಕೆ ವಿಶೇಷ ಸಭೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್

Spread the love

ಮುಲ್ಕಿ ನೀರಿನ ಸಮಸ್ಯೆ ಪರಿಹಾರಕ್ಕೆ ವಿಶೇಷ ಸಭೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್

ಮಂಗಳೂರು: ಮುಲ್ಕಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸಲು ವಿಶೇಷ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ತಿಳಿಸಿದ್ದಾರೆ.

ಅವರು ಸೋಮವಾರ ಮುಲ್ಕಿಯಲ್ಲಿ ಜನತಾದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು.

ಜನತಾದರ್ಶನ ಕಾರ್ಯಕ್ರಮದಲ್ಲಿ ಹಲವು ಸಾರ್ವಜನಿಕರು ತಮ್ಮ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಗಮನಕ್ಕೆ ತಂದಿದ್ದಾರೆ. ಉಪ್ಪು ನೀರಿನ ಸಮಸ್ಯೆ ಇರುವುದು ಕೂಡ ಕಂಡು ಬಂದಿದೆ, ಈ ನೆಲೆಯಲ್ಲಿ ಇಲ್ಲಿನ ಸ್ಥಳೀಯ ಸಂಸ್ಥೆಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಲಾಗುವುದು ಎಂದು ಅವರು ಹೇಳಿದರು.

ಜಮೀನಿನ ಸರ್ವೆ, ವರ್ಗೀಕರಣ, ಪಾಲು ಮತ್ತು ಇತರ ಸಮಸ್ಯೆಗಳು ವಿಳಂಬವಾಗುತ್ತಿರುವುದನ್ನು ತಪ್ಪಿಸಲು ವಿಶೇಷ ಅಭಿಯಾನ ನಡೆಸಲಾಗುವುದು. ಮುಲ್ಕಿ ತಾಲೂಕಿನ ಕಂದಾಯ ದಾಖಲೆಗಳು ಮಂಗಳೂರು ತಾಲೂಕು ಕಚೇರಿಯ ಸಂಗ್ರಹದಲ್ಲಿದ್ದು, ಅವುಗಳನ್ನು ಮುಲ್ಕಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜನತಾದರ್ಶನದಲ್ಲಿ ಸಾರ್ವಜನಿಕರಿಂದ ಅಹವಾಲುಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿ ಪರಿಹಾರ ಒದಗಿಸಲು ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್, ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಮತ್ತಿತರರು ಉಪಸ್ಥಿತರಿದ್ದರು.


Spread the love