
ಮೇ2 ರಂದು ಮಣಿಪಾಲದಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ನ 111ನೇ ಶಾಖೆ ಉದ್ಘಾಟನೆ, ನವೋದಯ ಸಾಧನಾ ಸಮಾವೇಶ
ಉಡುಪಿ: ಎಸ್ಸಿಡಿಸಿಸಿ ಬ್ಯಾಂಕ್ ನ 111ನೇ ನೂತನ ಶಾಖೆಯು ಮೇ 2 ರಂದು ಮಣಿಪಾಲದ ಕಮರ್ಷಿಯಲ್ ಕಾಂಪ್ಲೆಕ್ಸ್ನ ನೆಲ ಅಂತಸ್ತಿನಲ್ಲಿ ಸಂಪೂರ್ಣ ಗಣಕೀಕೃತಗೊಂಡ ಹವಾನಿಯಂತ್ರಿತ ಶಾಖೆ, ಆರ್ಟಿಜಿಎಸ್, ನೆಫ್ಟ್, ರೂಪೇ ಕಾರ್ಡ್ (ಎಟಿಎಂ) ಹಾಗೂ ಕೋರ್ ಬ್ಯಾಂಕಿಂಗ್ ಸೌಲಭ್ಯದೊಂದಿಗೆ ಕಾರ್ಯಾರಂಭಗೊಳ್ಳಲಿದೆ ಎಂದು ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಹೇಳಿದರು.
ಅವರು ಬುಧವಾರ ಉಡುಪಿಯ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಎಸ್ಸಿಡಿಸಿಸಿ ಬ್ಯಾಂಕಿನ 111ನೇ ನೂತನ ಮಣಿಪಾಲ ಶಾಖೆಯನ್ನು ಕೇಂದ್ರ ಸರಕಾರದ ಮಾನ್ಯ ಕೃಷಿ ಮತ್ತು ರೈತರ ಕಲ್ಯಾಣ ಇಲಾಖಾ ರಾಜ್ಯ ಸಚಿವೆ ಸನ್ಮಾನ್ಯ ಶೋಭಾ ಕರಂದ್ಲಾಜೆಯವರು ಉದ್ಘಾಟಿಸಲಿದ್ದು, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ನವೋದಯ ಸ್ವಸಹಾಯ ಸಂಘಗಳ ಸಾಧನಾ ಸಮಾವೇಶದ ಉದ್ಘಾಟನೆ ನೆರವೇರಿಸಲಿರುವರು.
ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಹಾಗೂ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿರುವರು. ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ವಿ. ಸುನಿಲ್ ಕುಮಾರ್ ದೀಪ ಪ್ರಜ್ವಲನೆ ಮಾಡಲಿದ್ದು, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ನವೋದಯ ಜಂಟಿ ಭಾದ್ಯತಾ ಗುಂಪುಗಳಿಗೆ ಸಾಲ ಪತ್ರ ವಿತರಣೆ ನೆರವೇರಿಸಲಿರುವರು. ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ., ಬೆಂಗಳೂರು ಬೆಳ್ಳಿ ಪ್ರಕಾಶ್ ಹೊಸ ಸ್ವಸಹಾಯ ಗುಂಪುಗಳ ಉದ್ಘಾಟನೆ ನೆರವೇರಿಸಲಿದ್ದಾರೆ. ಶಾಖೆಯ ಭದ್ರತಾ ಕೋಶದ ಉದ್ಘಾಟನೆಯನ್ನು ಉಡುಪಿ ಶಾಸಕ ಕೆ. ರಘುಪತಿ ಭಟ್ ನೆರವೇರಿಸಲಿರುವರು.
ನೂತನ ಶಾಖೆಯ ಗಣಕೀಕರಣದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಯೋಜನಾ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಲಾಕರ್ ಕೀ ಹಸ್ತಾಂತರವನ್ನು, ಉದ್ಯಮಿ ನಾಡೋಜ ಜಿ. ಶಂಕರ್ ಇವರು ನೆರವೇರಿಸಲಿರುವರು. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಸಿ.ಎನ್. ದೇವರಾಜ್ ಅವರು ಚೈತನ್ಯ ವಿಮಾ ಚೆಕ್ ವಿತರಣೆ ನೆರವೇರಿಸಲಿದ್ದು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಇದರ ನಿರ್ದೇಶಕರು ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿ. ಅಧ್ಯಕ್ಷ ಯಶ್ಪಾಲ್ ಎ. ಸುವರ್ಣ, ದಿ ಕೆನರಾ ಲ್ಯಾಂಡ್ ಇನ್ವೆಸ್ಟ್ಮೆಂಟ್ಸ್ ಮಣಿಪಾಲ ಇದರ ವ್ಯವಸ್ಥಾಪಕ ನಿರ್ದೇಶಕ ಟಿ. ಅಶೋಕ್ ಪೈ, ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘ ನಿ ಇದರ ಅಧ್ಯಕ್ಷ ದಿನಕರ್ ಶೆಟ್ಟಿ ಹೆರ್ಗ, ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರ ನಾಯಕ್, ಉಜ್ವಲ್ ಡೆವಲಪರ್ ನ ಮಾಲೀಕ ಪುರುಷೋತ್ತಮ ಶೆಟ್ಟಿ ಸಮಾರಂಭದಲ್ಲಿ ಗೌರವ ಉಪಸ್ಥಿತಿ ಇರಲಿದ್ದಾರೆ ಎಂದು ತಿಳಿಸಿದರು
ಉಡುಪಿ ಜಿಲ್ಲೆಗೆ ಮೊಬೈಲ್ ಬ್ಯಾಂಕ್:
ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ “ಗ್ರಾಹಕರ ಮನೆ ಬಾಗಿಲಿಗೆ ಮೊಬೈಲ್ ಬ್ಯಾಂಕಿಂಗ್ ಯೋಜನೆಯನ್ನು 2007ರ ಡಿಸೆಂಬರ್ 19ರಂದು ಜಾರಿಗೆ ತಂದಿದೆ. ಸುಸಜ್ಜಿತ ವಾಹನದ ಮೂಲಕ ನಿರ್ದಿಷ್ಟ ದಿನಗಳಲ್ಲಿ, ನಿರ್ದಿಷ್ಟ ಸಮಯದಲ್ಲಿ, ನಿರ್ದಿಷ್ಟ ಸ್ಥಳಗಳಲ್ಲಿ ಬ್ಯಾಂಕಿಂಗ್ ವ್ಯವಹಾರ ನಡೆಯುತ್ತಿದ್ದು, ಇದು ಮಂಗಳೂರಿಗೆ ಮಾತ್ರ ಸೀಮಿತವಾಗಿತ್ತು. ಇದೀಗ ಉಡುಪಿ ಜಿಲ್ಲೆಗೂ ಈ ಯೋಜನೆಯನ್ನು ವಿಸ್ತರಿಸಲಿದ್ದು, ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್), ಬೆಂಗಳೂರು ಇದರ ಮಹಾಪ್ರಬಂಧಕ ನೀರಜ್ ಕುಮಾರ್ ವರ್ಮ ಉಡುಪಿ ಮೊಬೈಲ್ ಬ್ಯಾಂಕ್ ಉದ್ಘಾಟನೆ ಮಾಡಲಿರುವರು.
ನವೋದಯ ಸ್ವಸಹಾಯ ಸಂಘಗಳ ಸಾಧನಾ ಸಮಾವೇಶ:
ಎಸ್ಸಿಡಿಸಿಸಿ ಬ್ಯಾಂಕ್ ಪ್ರವರ್ತಿತ ನವೋದಯ ಸ್ವಸಹಾಯ ಸಂಘಗಳು ಸಂಘಟನಾತ್ಮಕವಾಗಿ ಬಲಾಢಗೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ನವೋದಯ ಸ್ವಸಹಾಯ ಸಂಘಗಳ ಸಾಧನಾ ಸಮಾವೇಶವನ್ನು ಕೂಡಾ ಮೇ-2ರಂದು ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶವು 15000 ಮಹಿಳೆಯ ಉಪಸ್ಥಿತಿಯಲ್ಲಿ ಮಣಿಪಾಲ ಟೈಗರ್ ಸರ್ಕಲ್ ನಿಂದ ಭವ್ಯ ಮೆರವಣಿಗೆಯಲ್ಲಿ ಸಾಗಿ ಬಂದು ಎಂ.ಐ.ಟಿ. ಕಾಲೇಜು ಎದುರುಗಡೆಯ ಮೈದಾನದಲ್ಲಿ ನಡೆಯಲಿದೆ.
ಸುದ್ದಿಗೋಷ್ಟಿಯಲ್ಲಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನ ನಿರ್ದೇಶಕ ಜಯಕರ್ ಶೆಟ್ಟಿ ಇಂದ್ರಾಳಿ, ನಿರ್ದೇಶಕರಾದ ರಾಜು ಪೂಜಾರಿ, ಅಶೋಕ್ ಶೆಟ್ಟಿ ಕುಕ್ಕೆಹಳ್ಳಿ, ಮಹೇಶ್ ಹೆಗ್ಡೆ ಮೊಳಹಳ್ಳಿ, ರಾಜೇಶ್ ರಾವ್ ಪಾಂಗಾಳ ಮತ್ತು ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧಿಕಾರಿಗಳು ಉಪಸ್ಥಿತರಿದ್ದರು.