Home Mangalorean News Kannada News ಲಿಂಗಾನುಪಾತ ಸರಿಪಡಿಸಲು ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಮೂಲಕ ಕಟ್ಟುನಿಟ್ಟಿನ ಕ್ರಮ: ಮೀನಾಕ್ಷಿ ಶಾಂತಿಗೋಡು

ಲಿಂಗಾನುಪಾತ ಸರಿಪಡಿಸಲು ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಮೂಲಕ ಕಟ್ಟುನಿಟ್ಟಿನ ಕ್ರಮ: ಮೀನಾಕ್ಷಿ ಶಾಂತಿಗೋಡು

Spread the love

ಲಿಂಗಾನುಪಾತ ಸರಿಪಡಿಸಲು ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಮೂಲಕ ಕಟ್ಟುನಿಟ್ಟಿನ ಕ್ರಮ: ಮೀನಾಕ್ಷಿ ಶಾಂತಿಗೋಡು

ಮಂಗಳೂರು :ಜಿಲ್ಲೆಯಲ್ಲಿ ಲಿಂಗಾನುಪಾತವನ್ನು ಸರಿಪಡಿಸಲು ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಮೂಲಕ ಮುಂದಿನ ಒಂದು ವರ್ಷದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಮೀನಾಕ್ಷಿ ಶಾಂತಿಗೋಡು ಹೇಳಿದರು.

ಅವರಿಂದು ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆ ಕುರಿತು ವೈದ್ಯಾಧಿಕಾರಿಗಳಿಗ, ಶಿಶು ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಮೇಲ್ವಿಚಾರಕಿಯರಿಗೆ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಲಿಂಗಾನುಪಾತಕ್ಕೆ ಕಾರಣಗಳು ಹಲವು; ಸಮಾನತೆ ಮನೆಯಿಂದಲೇ ಆರಂಭವಾಗಬೇಕಿದ್ದು, ಹೆಣ್ಮಕ್ಕಳ ಬಾಲ್ಯ ಅರಳುವುದು ಇಲ್ಲಿಂದಲೇ ಎಂದರು. ಗರ್ಭಿಣಿಯರ ಶುಶ್ರೂಷೆ, ಅಪೌಷ್ಠಿಕತೆ ನಿವಾರಣೆ, ಶುಚಿತ್ವ ಕುರಿತ ಎಲ್ಲರಲ್ಲೂ ಜಾಗೃತಿ ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹೇಳಿದರು.

ಉದ್ಘಾಟನಾ ಭಾಷಣ ಮಾಡಿದ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ ಸೆಲ್ವಮಣಿ ಆರ್ ಅವರು, ವಿಶ್ವ ಆರೋಗ್ಯ ಸಂಸ್ಥೆಯ ನಿಯಮಾನುಸಾರ ಕಳೆದ ಸಾಲಿಗೆ ಹೋಲಿಸಿದರೆ ಈ ಸಾಲಿನಲ್ಲಿ ಲಿಂಗಾನುಪಾತ ಜಿಲ್ಲೆಯಲ್ಲಿ ಕೆಳಗಿಳಿದಿದ್ದು, ಈ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಕಸ್ತೂರಿ ಪಂಜ, ಸಾಮಾಜಿಕ ನ್ಯಾಯಸ್ಥಾಯಿ ಸಮಿತಿ ಅಧ್ಯಕ್ಷರಾದ ಜನಾರ್ಧನ ಗೌಡ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿತಾ ಹೇಮನಾಥ ಶೆಟ್ಟಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮಲ್ಲನಗೌಡ ಪಾಟೀಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಡಾ ಎಂ. ರಾಮಚಂದ್ರ ಬಾಯರಿ ಪಿಪಿಎನ್‍ಡಿಟಿ ಕಾಯ್ದೆ ಕುರಿತು ಮಾಹಿತಿ ನೀಡಿದರು. ವೆನ್ ಲಾಕ್ ಆಸ್ಪತ್ರೆಯ ಆರ್ ಎಂಒ ಡಾ ಸಲ್ಡಾನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ರಾಮಕೃಷ್ಣ ರಾವ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶಿವರಾಮಯ್ಯ ವೇದಿಕೆಯಲ್ಲಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಸುಂದರ ಪೂಜಾರಿ ಸ್ವಾಗತಿಸಿದರು. ಉಸ್ಮಾನ್ ವಂದಿಸಿದರು.


Spread the love

Exit mobile version