ವಂಚನೆ ಪ್ರಕರಣ: ಚೈತ್ರಾ ಸೇರಿದಂತೆ ಇಬ್ಬರಿಗೆ ಷರತ್ತುಬದ್ಧ ಜಾಮೀನು

Spread the love

ವಂಚನೆ ಪ್ರಕರಣ: ಚೈತ್ರಾ ಸೇರಿದಂತೆ ಇಬ್ಬರಿಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಹೋಟೆಲ್ ಉದ್ಯಮಿ ಗೋವಿಂದಬಾಬು ಪೂಜಾರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಬಂಧನಕ್ಕೀಡಾಗಿದ್ದ ಹಿಂದೂ ಕಾರ್ಯಕರ್ತೆ ಚೈತ್ರಾ ಸೇರಿ ಇಬ್ಬರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಪ್ರಮುಖ ಆರೋಪಿಯಾಗಿ ಚೈತ್ರಾ ಅವರನ್ನು ಬಂಧಿಸಲಾಗಿತ್ತು. ಟಿಕೆಟ್ಗಾಗಿ ಬರೋಬ್ಬರಿ 5 ಕೋಟಿ ರೂ. ಪಡೆದಿದ್ದರು ಎಂದು ಗೋವಿಂದಬಾಬು ಪೂಜಾರಿ ದೂರು ನೀಡಿದ್ದರು. ಈ ಬಗ್ಗೆ ಸಿಸಿಬಿ ಪೊಲೀಸರು ದೂರು ದಾಖಲಿಸಿಕೊಂಡು ಕಳೆದ ಎರಡು ತಿಂಗಳ ಹಿಂದೆ ವಶಕ್ಕೆ ಪಡೆದಿದ್ದರು.

ಡಿಸೆಂಬರ್ 5ಕ್ಕೆ ಜೈಲಿನಿಂದ ಬಿಡುಗಡೆ
ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಹಾಗೂ 7ನೇ ಆರೋಪಿ ಶ್ರೀಕಾಂತ್ಗೆ 3ನೇ ಎಸಿಎಂಎಂ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಮಂಗಳವಾರ ಪರಪ್ಪನ ಅಗ್ರಹಾರ ಕಾರಾಗೃಹದಿಂದ ಬಿಡುಗಡೆಯಾಗಲಿದ್ದಾರೆ.

9 ಮಂದಿ ಬಂಧನವಾಗಿತ್ತು
ವಂಚನೆ ಸಂಬಂಧ ಉದ್ಯಮಿ ಗೋವಿಂದಬಾಬು ಪೂಜಾರಿ ಸೆ.8ರಂದು ಬಂಡೇಪಾಳ್ಯ ಠಾಣೆಯಲ್ಲಿ ಚೈತ್ರಾ ಮತ್ತು ಇತರೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಆಗಿತ್ತು. ಬಳಿಕ ಕ್ಷೀಪ್ರ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಚೈತ್ರಾ, ಗಗನ್ ಕಡೂರು, ಹೊಸಪೇಟೆಯ ಸ್ವಾಮೀಜಿ ಹಾಲಶ್ರೀ ಸ್ವಾಮೀಜಿ, ಚನ್ನನಾಯ್ಕ, ಧನರಾಜ್, ಶ್ರೀಕಾಂತ್, ಪ್ರಜ್ವಲ್ ಸೇರಿ 9 ಮಂದಿಯನ್ನು ಬಂಧಿಸಲಾಗಿತ್ತು.

ಹೊಸಪೇಟೆಯ ಹಾಲಶ್ರೀ ಸ್ವಾಮೀಜಿಗೆ ಜಾಮೀನು
ಆರೋಪಿಗಳು ಅಕ್ರಮ ಹಣದಿಂದ ಸಂಪಾದಿಸಿದ್ದ ಲಕ್ಷಾಂತರ ರೂ. ನಗದು ಹಾಗೂ ಕೆಲ ಆಸ್ತಿಗಳ ಪತ್ರಗಳು ಸೇರಿ 4 ಕೋಟಿ ರೂ. ಅಧಿಕ ವಶಕ್ಕೆೆ ಪಡೆದುಕೊಳ್ಳಲಾಗಿತ್ತು. ಅಲ್ಲದೆ, ತನಿಖೆ ಪೂರ್ಣಗೊಳಿಸಿ ಇತ್ತೀಚೆಗಷ್ಟೇ 9 ಮಂದಿ ಆರೋಪಿಗಳ ವಿರುದ್ಧ ಕೋರ್ಟ್ಗೆ ಸಿಸಿಬಿ ಆರೋಪಪಟ್ಟಿ ಕೂಡ ಸಲ್ಲಿಸಿತ್ತು. ಈ ಹಿಂದೆ ಹೊಸಪೇಟೆಯ ಹಾಲಶ್ರೀ ಸ್ವಾಮೀಜಿಗೆ ಜಾಮೀನು ಸಿಕ್ಕಿತ್ತು. ಈ ಮೂಲಕ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕಾಂತಾಗಿದೆ.


Spread the love