ಸಮಾಜದ ಚಿಂತನೆಯ ಜೊತೆಗೆ ತಮ್ಮ ಮಕ್ಕಳ ಭವಿಷ್ಯದ ಬಗ್ಗೆಯೂ ಚಿಂತಿಸಿ – ಲಕ್ಷ್ಮೀ ಹೆಬ್ಬಾಳ್ಕರ್

Spread the love

ಸಮಾಜದ ಚಿಂತನೆಯ ಜೊತೆಗೆ ತಮ್ಮ ಮಕ್ಕಳ ಭವಿಷ್ಯದ ಬಗ್ಗೆಯೂ ಚಿಂತಿಸಿ – ಲಕ್ಷ್ಮೀ ಹೆಬ್ಬಾಳ್ಕರ್

  • ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪ್ರತಿಭಾ ಪುರಸ್ಕಾರ ಉದ್ಘಾಟಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಲಹೆ

ಉಡುಪಿ: ಸಮಾಜದ ಅಂಕು-ಡೊಂಕುಗಳನ್ನು ತಿದ್ದಿ, ಸಾಮರಸ್ಯ, ಸತ್ಯದ ಮೇಲೆ ಬೆಳಕು ಚೆಲ್ಲುವ ಕೆಲಸ ಮಾಡುತ್ತಿರುವ ಪತ್ರಕರ್ತರು ಕುಟುಂಬವನ್ನು ತ್ಯಜಿಸಿ ರಾತ್ರಿ-ಹಗಲೆನ್ನದೇ ದುಡಿಯುತ್ತಾರೆ. ಸಮಾಜದ ಒಳಿತಿಗಾಗಿ ಸದಾ ಚಿಂತಿಸುವ ಪತ್ರಕರ್ತರು ಅವರ ಮಕ್ಕಳ ಭವಿಷ್ಯದ ಬಗ್ಗೆಯೂ ಚಿಂತಿಸಬೇಕಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಜತ ಮಹೋತ್ಸವ ಸಮಿತಿ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ಸಹಯೋಗದೊಂದಿಗೆ ಮಣಿಪಾಲ ಡಾ. ಟಿಎಂಎ ಪೈ ಸಭಾಂಗಣದಲ್ಲಿ ಶನಿವಾರ ಜರುಗಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಎರಡು ಕೈಗಳಿಂದ ಹೊತ್ತ ಸಂವಿಧಾನ ಪುಸ್ತಕವನ್ನು ಅನಾವರಣಗೊಳಿಸುವ ಮೂಲಕ ವಿಶಿಷ್ಟವಾಗಿ ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಕರ್ತರ ಕುಟುಂಬವನ್ನು ಪ್ರೋತ್ಸಾಹಿಸಬೇಕು ಎನ್ನುವ ದಿಸೆಯಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಪತ್ರಕರ್ತರ ಮಕ್ಕಳಿಗಾಗಿ ಆಯೋಜಿಸಿರುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮಾದರಿ ಕಾರ್ಯಕ್ರಮವಾಗಿ ರೂಪುಗೊಳ್ಳಲಿ ಎಂದು ಆಶಿಸಿದರು.

ಸಮಾಜದ ಅನೇಕ ಸಮಸ್ಯೆಗಳನ್ನು ವರದಿ ಮೂಲಕ ಬೆಳಕು ಚೆಲ್ಲುವ ಪತ್ರಕರ್ತರಿಗೂ ಸಾಕಷ್ಟು ಸಮಸ್ಯೆಗಳಿವೆ. ಈಗಲೂ ನಿವೇಶನಕ್ಕಾಗಿ ಪತ್ರಕರ್ತರು ಹಾತೊರೆಯುತ್ತಿದ್ದಾರೆ. ಪತ್ರಕರ್ತರ ಏಳಿಗೆಗಾಗಿ ಸರ್ಕಾರದ ಮಟ್ಟದಲ್ಲಿ ಮುಂದೆ ನಿಂತು ಮಾಡಿಸಿಕೊಡುತ್ತೇನೆ. ರಾತ್ರಿ-ಹಗಲು, ಚಳಿ-ಮಳೆ ಎನ್ನದೇ ಸುದ್ದಿ ಮಾಡುವ ಪತ್ರಕರ್ತರ ಶ್ರಮವನ್ನು ಕಣ್ಣಾರೆ ಕಂಡಿದ್ದೇನೆ. ಖಂಡಿತವಾಗಿಯೂ ನಿಮ್ಮೆಲ್ಲರ ಶ್ರಮಕ್ಕೆ ಫಲ ಸಿಗುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪೋಷಕರ ಕನಸು ಸಾಕಾರಗೊಳಿಸಿ:
ಕಾರ್ಯಕರ್ತೆಯಾಗಿ ಆರಂಭಗೊಂಡ ನನ್ನ ರಾಜಕೀಯ ಜೀವನ ಇಂದು ಪ್ರತಿಭಾವಂತ ಜಿಲ್ಲೆಯ ಉಸ್ತುವಾರಿ ಸಚಿವೆಯಾಗಿ ನಿಮ್ಮ ಮುಂದೆ ನಿಂತಿದ್ದೇನೆ. ಇದು ನನ್ನ ಶ್ರಮಕ್ಕೆ ಸಿಕ್ಕ ಪ್ರತಿಫಲ. ತಂದೆ-ತಾಯಿ ಕಷ್ಟಪಟ್ಟು ತಮ್ಮ ಭವಿಷ್ಯದ ಬಗ್ಗೆ ಕನಸು ಕಂಡಿದ್ದಾರೆ. ಅವರ ಕನಸನ್ನು ನÀನಸು ಮಾಡುವ ಗುರುತರವಾದ ಜವಾಬ್ದಾರಿ ನಿಮ್ಮ ಮೇಲಿದೆ. ಅವರ ಕನಸನ್ನು ನನಸುಗೊಳಿಸಲು ನೀವೆಲ್ಲರೂ ಸನ್ನದ್ದರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪುರಸ್ಕರಿಸಿ ಮಾತನಾಡಿದ ಸಭಾಪತಿ ಯು.ಟಿ ಖಾದರ್, ನಮ್ಮ ಸಂಪ್ರದಾಯ, ಆಚಾರ-ವಿಚಾರಗಳು ಪಾರಂಪರಿಕವಾಗಿ ಬೆಳೆದು ನಿಲ್ಲಬೇಕಾದರೆ ಅದಕ್ಕೆ ಪತ್ರಕರ್ತರ ಕೊಡುಗೆ ಅಪಾರÀವಾದುದು. ಯುವ ಪೀಳಿಗೆಗೆ ನಮ್ಮ ಸಂಪ್ರದಾಯಗಳನ್ನು ವರ್ಗಾಯಿಸುವ ದೊಡ್ಡ ಶಕ್ತಿಯಾಗಿ ಮಾಧ್ಯಮದ ಪಾಲು ಬಹಳಷ್ಟಿವೆ. ತಮ್ಮ ವೃತ್ತಿಯ ಜೊತೆ-ಜೊತೆಗೆ ಕುಟುಂಬವನ್ನು ಸೇರಿಸಿಕೊಂಡು ಮಾಡುತ್ತಿರುವ ಪ್ರತಿಭಾ ಪುರಸ್ಕಾರ ಅರ್ಥಪೂರ್ಣ ಕಾರ್ಯಕ್ರಮ. ಪತ್ರಕರ್ತರು ಮತ್ತು ರಾಜಕಾರಣಿಗಳ ನಡುವೆ ಅವಿನಾಭಾವ ಸಂಬಂಧವಿದೆ. ಪತ್ರಕರ್ತರಿಲ್ಲದೇ ರಾಜಕಾರಣಿಗಳಿಲ್ಲ ಹಾಗೆಯೇ ರಾಜಕಾರಣಿಗಳಿಲ್ಲದೇ ಪತ್ರಕರ್ತರಿಲ್ಲ. ರಾಜಕೀಯದಲ್ಲಿ ಗೊಂದಲಗಳುಂಟಾದಾಗ ಪತ್ರಕರ್ತರ ಸಲಹೆ, ಸೂಚನೆಗಳಿಂದ ಗೊಂದಲ ಬಗೆಹರಿದ ಅನೇಕ ಉದಾಹರಣೆಗಳಿವೆ. ನೂತನ ಶಾಸಕರಿಗೆ ತರಬೇತಿ ಕೊಟ್ಟಂತೆ ಪತ್ರಕರ್ತರಿಗೂ ತರಬೇತಿ ಕೊಡುವ ಅವಶ್ಯಕತೆ ಇದೆ ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಹೆ ಮಣಿಪಾಲದ ಪ್ರೋ ಚಾನ್ಸಲರ್ ಡಾ. ಎಚ್ ಎಸ್ ಬಲ್ಲಾಳ್, ಕೆಎಂಸಿ ಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ, ಜಿಲ್ಲಾಧಿಕಾರಿ ಎಂ. ಕೂರ್ಮರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ ಮಚ್ಚಿಂದ್ರ ಹಾಕೆ, ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜೆಸಿ ಲೋಕೇಶ್, ಉಪಾಧ್ಯಕ್ಷರಾದ ಪುಂಡಲೀಕ ಭೀ ಬಾಳೋಜಿ, ಅಜ್ಜಮಾಡ ರಮೇಶ್ ಕುಟ್ಟಪ್ಪ, ಭವಾನಿ ಸಿಂಗ್ ಠಾಕೂರು, ಕಾರ್ಯದರ್ಶಿಗಳಾದ ಮತ್ತಿಕೆರೆ ಜಯರಾಮ್, ಸೋಮಶೇಖರ್ ಕೆರಗೋಡು, ಕೋಶಾಧಿಕಾರಿ ವಾಸುದೇವ ಹೊಳ್ಳ, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಜಿಲ್ಲಾ ಕಾರ್ಯದರ್ಶಿ ನಝೀರ್ ಪೊಲ್ಯ, ರಜತ ಮಹೋತ್ಸವ ಸಮಿತಿ ಕಾರ್ಯದರ್ಶಿ ಜಯಕರ ಸುವರ್ಣ ಉಪಸ್ಥಿತರಿದ್ದರು.

ಜಯಂತ್ ಐತಾಳ್ ಪ್ರಾರ್ಥಿಸಿದರು. ರಜತ ಮಹೋತ್ಸವ ಸಂಚಾಲಕ ಶರೀಫ್ ಕಾರ್ಕಳ ಸ್ವಾಗತಿಸಿದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅಲೆವೂರು ರಾಜೇಶ್ ಶೆಟ್ಟಿ ಪ್ರಸ್ತಾಪಿಸಿದರು. ಕಾರ್ಯದರ್ಶಿ ನಝೀರ್ ಪೊಲ್ಯ ಧನ್ಯವಾದವಿತ್ತರು. ಕೆಸಿ ರಾಜೇಶ್ ನಿರೂಪಿಸಿದರು.


Spread the love