ಸುರತ್ಕಲ್ ದೈವಸ್ಥಾನದ ಕಾಣಿಕೆ ಹುಂಡಿ ಕಳವು ಪ್ರಕರಣ: ಆರೋಪಿ ಬಂಧನ
ಸುರತ್ಕಲ್: ಮಧ್ಯ ಕೊಡಿಪಾಡಿಯ ಕೋರ್ದಗಬ್ಬು ದೈವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳವು ಮಾಡಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಆ.05ರಂದು ಬೆಳಗಿನ ಜಾವ ಸುಮಾರು 1.30ಕ್ಕೆ ಕಬ್ಬಿಣದ ಆಯುಧ ಬಳಸಿ ದೈವಸ್ಥಾನದ ಬಾಗಿಲು ಹಾಗೂ ಕಿಟಕಿ ಮುರಿದು ಒಳನುಗ್ಗಿದ ಕಳ್ಳ, ಕಾಣಿಕೆ ಹುಂಡಿಯನ್ನು ಕಳವು ಮಾಡಿದ್ದ. ಹುಂಡಿಯಲ್ಲಿದ್ದ ಸುಮಾರು ₹15,000 ನಗದು ಕಳವಾಗಿತ್ತು.
ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ಖಚಿತ ಮಾಹಿತಿ ಮೇರೆಗೆ ಆ.10ರಂದು ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ ಉಡುಪಿ ಮೂಲದ ಸುಖೇಶ್ ನಾಯ್ಕ್ (40) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಕೃತ್ಯ ಎಸಗಿರುವುದನ್ನು ಆರೋಪಿ ಒಪ್ಪಿಕೊಂಡಿದ್ದಾನೆ.
ಆರೋಪಿ ವಿರುದ್ಧ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 18 ಪ್ರಕರಣಗಳು ದಾಖಲು!
ಈ ಪೈಕಿ ಒಂದು ಪ್ರಕರಣದಲ್ಲಿ ಶಿಕ್ಷೆಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಅಲ್ಲದೇ, ವಿವಿಧ ಠಾಣೆಗಳಲ್ಲಿ ಆರೋಪಿಯ ವಿರುದ್ಧ ದಸ್ತಗಿರಿ ವಾರಂಟ್ಗಳು ಇರುವುದೂ ಪತ್ತೆಯಾಗಿದೆ.
ಆರೋಪಿಯನ್ನು ಆ.11ರಂದು ಮಂಗಳೂರು ನಗರದ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
