ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಶ್ಲಾಘನೆ

Spread the love

ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಶ್ಲಾಘನೆ

– ಕೃಷಿಗೆ ಹಗಲು ವೇಳೆ ವಿದ್ಯುತ್‌ ಪೂರೈಕೆಗೆ ‘ಮುಖ್ಯಮಂತ್ರಿ ಸೌರ ಕೃಷಿ ಯೋಜನೆʼ
– 2026-27ನೇ ಸಾಲಿನಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರಗಳ ಘೋಷಣೆ
– 2,000 ಮೆಗಾವ್ಯಾಟ್ ಪರ್ ಅವರ್ ಬ್ಯಾಟರಿ ಶಕ್ತಿ ಸಂಗ್ರಹ ವ್ಯವಸ್ಥೆ
– ಇವಿ ಪೋತ್ಸಾಹಕ್ಕೆ 1,250 ವಾಹನ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆ

ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼ ಎಂಬ ಹೊಸ ಕಾರ್ಯಕ್ರಮವನ್ನು ಘೋಷಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ 7 ತಾಸು ವಿದ್ಯುತ್ ಪೂರೈಸುವ ಬದ್ಧತೆಯನ್ನು ಸಾಕಾರಗೊಳಿಸುತ್ತಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಬಜೆಟ್ ಕುರಿತು ಗುರುವಾರ ಪ್ರತಿಕ್ರಿಯೆ ನೀಡಿರುವ ಸಚಿವರು, “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ತೀವ್ರ ಬರಗಾಲ ಇದ್ದರೂ ರೈತರಿಗೆ 7 ಗಂಟೆ ವಿದ್ಯುತ್ ಪೂರೈಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿತ್ತು. ಇದಕ್ಕೆ ಪೂರಕವಾಗಿ ನಾವು ಕೇಂದ್ರ ಪುರಸ್ಕೃತ ಕುಸುಮ್- ಸಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಕೃಷಿ ಫೀಡರ್‌ಗಳನ್ನು ಸೌರೀಕರಣಗೊಳಿಸಿ ರೈತರಿಗೆ ಹಗಲು ವೇಳೆ ವಿದ್ಯುತ್ ನೀಡಲು ಪ್ರಯತ್ನಿಸಿದ್ದೆವು. ಇದೇ ಮಾದರಿಯಲ್ಲಿ ಈಗ ಸುಮಾರು 3000 ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್‌ಗಳಿಗೆ ಹಗಲು ವೇಳೆ ವಿದ್ಯುತ್ ಪೂರೈಸುವ ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼ ಜಾರಿಗೊಳಿಸುವುದಾಗಿ ಹೇಳಿದ್ದಾರೆ. ಅಲ್ಲದೆ, ಕೃಷಿ ಪಂಪ್ ಸೆಟ್‌ಗಳಿಗೆ 10 ಅಶ್ವಶಕ್ತಿವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆಗೆ 19,290 ಕೋಟಿ ರೂ. ಮೀಸಲಿಡುವ ಮೂಲಕ ಮುಖ್ಯಮಂತ್ರಿಗಳು ರೈತರ ಕುರಿತಾಗಿ ಇರುವ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ,” ಎಂದಿದ್ದಾರೆ.

“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್ ಉತ್ಪಾದಾನೆ ಹೆಚ್ಚಿಸಲಾಗಿದೆ. ಅದನ್ನು ಸಮರ್ಪಕವಾಗಿ ಜನರಿಗೆ ಪೂರೈಸಲು ಅಗತ್ಯ ಮೂಲ ಸೌಕರ್ಯದ ಅಗತ್ಯವಿತ್ತು. ಅದಕ್ಕಾಗಿ 2026-27ನೇ ಸಾಲಿನಲ್ಲಿಯೂ 100 ಹೊಸ ಉಪ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಘೋಷಿಸುವ ಮೂಲಕ ಎಲ್ಲರಿಗೂ ಸಮರ್ಪಕ ವಿದ್ಯುತ್ ಪೂರೈಕೆಯನ್ನು ಸಾಕಾರಗೊಳಿಸಲು ದೃಢ ಹೆಜ್ಜೆ ಇಟ್ಟಿದ್ದಾರೆ,” ಎಂದು ಶ್ಲಾಘಿಸಿದ್ದಾರೆ.

“ಅದೇ ರೀತಿ ಬೇಡಿಕೆ ಅವಧಿಯಲ್ಲಿ ವಿದ್ಯುತ್ ಪೂರೈಸಲು ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದನೆಯಾದ ವಿದ್ಯುತ್ತನ್ನು ಸಂಗ್ರಹಿಸಲು ಅನುಕೂಲವಾಗುವಂತೆ 2,000 ಮೆಗಾವ್ಯಾಟ್‌ ಪರ್ ಅವರ್ ಬ್ಯಾಟರಿ ಶಕ್ತಿ ಸಂಗ್ರಹ ವ್ಯವಸ್ಥೆ ಯೋಜನೆಗೆ ಅಂದಾಜು 3,400 ಕೋಟಿ ರೂ. ಹೂಡಿಕೆಗೆ ಅವಕಾಶ ಕಲ್ಪಿಸಿರುವುದು, ಇವಿ ವಾಹನಗಳ ಬಳಕೆ ಉತ್ತೇಜಿಸಲು 777 ಕೋಟಿ ರೂ.ಗಳ ವೆಚ್ಚದಲ್ಲಿ 1,250 ವಾಹನ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವುದು ಈ ಸರ್ಕಾರದ ಜನಪರ ಕಾಳಜಿಯನ್ನು ತೋರಿಸುತ್ತದೆ,” ಎಂದು ಹೇಳಿದ್ದಾರೆ.

“ಗೃಹ ಬಳಕೆದಾರರಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಒದಗಿಸುವ ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆ ಕೋಟ್ಯಂತರ ಮನೆಗಳನ್ನು ಬೆಳಗಿಸಿದ್ದು, ಉಳಿತಾಯವಾದ ವಿದ್ಯುತ್ ಬಿಲ್‌ ಹಣವನ್ನು ಜನರು ಇತರೆ ಉದ್ದೇಶಗಳಿಗೆ ಬಳಸಿಕೊಂಡು ಆರ್ಥಿಕವಾಗಿ ಪ್ರಗತಿ ಸಾಧಿಸುತ್ತಿದ್ದಾರೆ. ಈ ಯೋಜನೆಯಡಿ ಆಗುವ ವೆಚ್ಚವನ್ನು ಸರ್ಕಾರ ಮುಂಗಡವಾಗಿ ಎಸ್ಕಾಂಗಳಿಗೆ ಪಾವತಿಸುವುದರಿಂದ ಅವುಗಳ ಹೊರೆಯೂ ಕಡಿಮೆಯಾಗುತ್ತಿದೆ. ಈ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿಯವರು ಯೋಜನೆಗೆ 10,578 ಕೋಟಿ ರೂ. ಮೀಸಲಿಡುವ ಮೂಲಕ ಅದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾಕ್ಕೆ ತರಲು ಸಹಕರಿಸಿದ್ದಾರೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments