ಅಕ್ರಮ ಕೆಂಪುಕಲ್ಲು, ಮಣ್ಣು ಗಣಿಗಾರಿಕೆ ಮೇಲೆ ಪೊಲೀಸರ ದಾಳಿ; ವಾಹನ, ಯಂತ್ರೋಪಕರಣಗಳ ವಶಕ್ಕೆ
ಬಂಟ್ವಾಳ: ಅಕ್ರಮ ಕೆಂಪುಕಲ್ಲು ಹಾಗೂ ಮಣ್ಣು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿ, ಗಣಿಗಾರಿಕೆಗೆ ಬಳಸಲಾಗುತ್ತಿದ್ದ ವಾಹನಗಳು ಹಾಗೂ ಯಂತ್ರೋಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಜುಲೈ 2ರಂದು ಸಂಜೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಠಾಣಾ ಸಿಬ್ಬಂದಿಯೊಂದಿಗೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಮುಗುಳಿ ಪ್ರದೇಶಕ್ಕೆ ತೆರಳಿದ ವೇಳೆ, ಪೊಲೀಸ್ ವಾಹನವನ್ನು ಕಂಡ ಗಣಿಗಾರಿಕೆಯಲ್ಲಿ ತೊಡಗಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ.
ಪೊಲೀಸರು ಸ್ಥಳ ಪರಿಶೀಲನೆ ನಡೆಸಿದಾಗ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿರುವುದು ಪತ್ತೆಯಾಗಿದೆ. ಅಲ್ಲದೆ, ಗಣಿಗಾರಿಕೆಗೆ ಬಳಸಲಾಗುತ್ತಿದ್ದ ಯಂತ್ರೋಪಕರಣಗಳು ಸ್ಥಳದಲ್ಲೇ ಪತ್ತೆಯಾಗಿವೆ.
ಇದೇ ಸ್ಥಳದ ಸಮೀಪ ಅಕ್ರಮ ಮಣ್ಣು ಗಣಿಗಾರಿಕೆಯೂ ನಡೆಯುತ್ತಿದ್ದು, ಮಣ್ಣು ಸಾಗಣೆ ಮಾಡುವ ಲಾರಿಗಳ ತೂಕ ಪರಿಶೀಲನೆಗಾಗಿ ನಿರ್ಮಿಸಲಾಗಿದ್ದ ವೇ ಬ್ರಿಡ್ಜ್, ಕಟ್ಟಡ ಹಾಗೂ ಇತರೆ ಯಂತ್ರೋಪಕರಣಗಳನ್ನೂ ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಎಲ್ಲಾ ಸೊತ್ತುಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಯಾವುದೇ ಪರವಾನಗಿ ಇಲ್ಲದೆ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪದಡಿ ಮುಳಿಗದ್ದೆ ಝಕಾರಿಯಾ ಹಾಗೂ ಇತರರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ.148/2026 ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2), MMDR Act-1957ರ ಕಲಂ 4(1), 21 ಹಾಗೂ ಕರ್ನಾಟಕ ಮೈನರ್ ಮಿನರಲ್ ಕನ್ಸೆಷನ್ ರೂಲ್ಸ್-1994ರ ಕಲಂ 3 ಮತ್ತು 44ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ.
