ಅಕ್ಷಯ ಕಲ್ಲೇಗ ಕೊಲೆ ಪ್ರಕರಣ: 3ನೇ ಆರೋಪಿಯ ಜಾಮೀನು ಅರ್ಜಿ ವಜಾ
ಪುತ್ತೂರು: ಎರಡು ವರ್ಷಗಳ ಹಿಂದೆ ಪುತ್ತೂರಿನ ನೆಹರೂ ನಗರದಲ್ಲಿ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪೈಕಿ ಜಾಮೀನು ಕೋರಿ 3ನೇ ಆರೋಪಿ ಮಂಜುನಾಥ್ ಅಲಿಯಾಸ್ ಹರಿ ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.
ಆತ ಅನಾರೋಗ್ಯದ ಕಾರಣ ನೀಡಿ ಜಾಮೀನಿನಲ್ಲಿ ಬಿಡುಗಡೆ ಕೋರಿ ಅರ್ಜಿ ಸಲ್ಲಿಸಿದ್ದ. ದೂರುದಾರರ ಪರ ಸರಕಾರಿ ಅಭಿಯೋಜಕರಾದ ಜಯಂತಿ ಸತೀಶ್ ಭಟ್ ಅವರು ವಾದಿಸಿ, ಆರೋಪಿಗೆ ಜಾಮೀನು ಮಂಜೂರು ಮಾಡದಂತೆ ಮನವಿ ಮಾಡಿದ್ದರು. ನ್ಯಾಯಾಧೀಶರು ಅವರ ವಾದವನ್ನು ಪುರಸ್ಕರಿಸಿದ್ದಾರೆ.