ಆಟೋ ರಿಕ್ಷಾದಲ್ಲಿ ಗಾಂಜಾ ಹಾಗೂ ಕತ್ತಿ ಸಾಗಾಟ: ಆರೋಪಿಯ ಬಂಧನ
ಪುತ್ತೂರು: ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಆಟೋ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪುತ್ತೂರು ನಗರ ಪೊಲೀಸ್ ಠಾಣೆಯವರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನ.08, 2025 ರಂದು ಮಧ್ಯಾಹ್ನ ಸವಣೂರು ಕಡೆಯಿಂದ ಪುತ್ತೂರು ಕಡೆಗೆ ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ, ಪುತ್ತೂರು ನಗರ ಠಾಣೆಯ ಉಪನಿರೀಕ್ಷಕ ಜನಾರ್ಧನ ಕೆ.ಎಂ. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದರು.
ಪರಿಶೀಲನೆ ವೇಳೆ 1 ಕಿಲೋ ಗಿಂತಲೂ ಹೆಚ್ಚು ಪ್ರಮಾಣದ ನಿಷೇಧಿತ ಮಾದಕ ವಸ್ತು ಗಾಂಜಾ ಹಾಗೂ ಸುಮಾರು 25 ಇಂಚು ಉದ್ದದ ಕತ್ತಿ ಪತ್ತೆಯಾಗಿದ್ದು, ಆಟೋ ಚಾಲಕನನ್ನು ವಿಚಾರಿಸಿದಾಗ ಆತ ಕಡಬ ತಾಲೂಕಿನ ಸವಣೂರು ನಿವಾಸಿ ಪ್ರಸಾದ್ ಇ (35) ಎಂದು ತಿಳಿದುಬಂದಿದೆ.
ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 106/2025ರಂತೆ NDPS ಕಾಯ್ದೆಯ ಸೆಕ್ಷನ್ 8(c), 20(ii)(c) ಹಾಗೂ Indian Arms Act ಸೆಕ್ಷನ್ 25(1B)(b) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಆರೋಪಿತನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಬಳಿಕ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಲಾಗಿದೆ.
