ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ ಬಳಕೆಗೆ ‘ಪೂರ್ವಾನುಮತಿ ಕಡ್ಡಾಯ’ ಆದೇಶಕ್ಕೆ ಹೈಕೋರ್ಟ್ ತಡೆ, ರಾಜ್ಯ ಸರ್ಕಾರಕ್ಕೆ ನೋಟಿಸ್
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಸಂಘ- ಸಂಸ್ಥೆಗಳು ಕಾರ್ಯಕ್ರಮ ನಡೆಸುವುದಕ್ಕೆ ಸ್ಥಳೀಯಾಡಳಿತದಿಂದ ಪೂರ್ವಾನುಮತಿ ಕಡ್ಡಾಯ ಎಂಬ ರಾಜ್ಯ ಸರಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಸಂಘ- ಸಂಸ್ಥೆಗಳು ಕಾರ್ಯಕ್ರಮ ನಡೆಸುವುದಕ್ಕೆ ಸ್ಥಳೀಯಾಡಳಿತದಿಂದ ಪೂರ್ವಾನುಮತಿ ಕಡ್ಡಾಯ ಎಂಬ ರಾಜ್ಯ ಸರಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಇಲ್ಲದೆ ಹತ್ತಕ್ಕಿಂತ ಹೆಚ್ಚು ಜನರು ಜಮಾಯಿಸಿದರೆ ಪೊಲೀಸ್ ಇಲಾಖೆ ಅಕ್ರಮ ಕೂಟವೆಂದು ಪರಿಗಣಿಸಿ ಕ್ರಮ ಜರುಗಿಸಬಹುದೆಂದು ರಾಜ್ಯ ಸರಕಾರ ಅ.18ರಂದು ಆದೇಶ ಜಾರಿಗೊಳಿಸಿತ್ತು.
ಸರಕಾರದ ಕ್ರಮವನ್ನು ಹುಬ್ಬಳ್ಳಿಯ ಪುನಶ್ಚತನ ಸೇವಾ ಸಂಸ್ಥೆ ಅಧ್ಯಕ್ಷ ವಿನಾಯಕ, ವಿ ಕೇರ್ ಫೌಂಡೇಶನ್ ಅಧ್ಯಕ್ಷ ಗಂಗಾಧರಯ್ಯ ಧಾರವಾಡದ ರಾಜೀವ ಮಲ್ದಾರ ಕುಲಕರ್ಣಿ ಹಾಗೂ ಬೆಳಗಾವಿಯ ಉಮಾ ಸತ್ಯಜಿತ್ ಚವಾಣ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರವಾಗಿ ಹಿರಿಯ ವಕೀಲ ಅಶೋಕ ಹಾರನಹಳ್ಳಿ ವಾದ ಮಂಡಿಸಿದ್ದು, ವಾದ ಆಲಿಸಿದ ಬಳಿಕ ಪ್ರತಿವಾದಿಗಳಿಗೆ ನೋಟೀಸ್ ಜಾರಿಗೊಳಿಸಿ ಮುಂದಿನ ಆದೇಶದ ವರೆಗೆ ಸರಕಾರದ ಆದೇಶಕ್ಕೆ ತಡೆ ನೀಡಿತು. ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ, ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ, ಡಿಜಿ-ಐಜಿಪಿ ಹಾಗೂ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟೀಸ್ ಜಾರಿಗೊಳಿಸಲು ಆದೇಶಿಸಿದೆ. ಸರಕಾರಿ ಸ್ಥಳಗಳಲ್ಲಿ ಅನುಮತಿ ಇಲ್ಲದೆ ಮೆರವಣಿಗೆ, ಸಭೆ ನಡೆಸುವುದನ್ನು ನಿರ್ಬಂಧಿಸಿರುವ ಕ್ರಮ ಸಂವಿಧಾನದ 13, 14 ಮತ್ತು 19ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.
ಅ.18ರಂದು ರಾಜ್ಯ ಸರಕಾರ ಹೊರಡಿಸಿದ ಆದೇಶದಲ್ಲಿ ನೋಂದಣಿಯಾದ ಅಥವಾ ನೋಂದಣಿಯಾಗದ ಯಾವುದೇ ಖಾಸಗಿ ಸಂಘ-ಸಂಸ್ಥೆಗಳು ಸರಕಾರದ ಆಸ್ತಿಯನ್ನು ಅಂದರೆ ಜಮೀನು, ರಸ್ತೆ ಪಾರ್ಕ್, ಆಟದ ಮೈದಾನಗಳು, ಕಟ್ಟಡಗಳನ್ನು ಬಳಸಿಕೊಳ್ಳಬೇಕಾದರೆ ಸ್ಥಳೀಯ ಪೊಲೀಸ್ ಕಮಿಷನರ್ ಅಥವಾ ಡೆಪ್ಯುಟಿ ಕಮಿಷನರ್ ರಿಂದ ಅನುಮತಿ ಪಡೆಯಬೇಕು. ಇಲ್ಲವಾದಲ್ಲಿ ಇದು ಅಕ್ರಮ ಕೂಟವೆಂದು ಪರಿಗಣಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿತ್ತು. ಸಚಿವ ಪ್ರಿಯಾಂಕ ಖರ್ಗೆ ಬರೆದ ಪತ್ರದ ಉಲ್ಲೇಖದಂತೆ, ಆರೆಸ್ಸೆಸ್ ಪಥಸಂಚಲನ ಮತ್ತು ಸರಕಾರಿ ಶಾಲೆ, ಕಟ್ಟಡಗಳ ಬಳಕೆಯನ್ನು ನಿರ್ಬಂಧಿಸುವ ಸಲುವಾಗಿ ಈ ಆದೇಶ ಮಾಡಲಾಗಿತ್ತು.
