ಉಡುಪಿ ಪತ್ರಕರ್ತರಿಗೆ ಹೃದಯ ಆರೋಗ್ಯ -ತುರ್ತು ಆರೈಕೆ ತರಬೇತಿ
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ವಿಶ್ವ ಹೃದಯ ದಿನದ ಪ್ರಯುಕ್ತ ಜಿಲ್ಲೆಯ ಪತ್ರಕರ್ತರಿಗೆ ಹೃದಯ ಆರೋಗ್ಯ ಮತ್ತು ತುರ್ತು ಆರೈಕೆಯ ಕುರಿತ ಮೂಲಭೂತ ಜೀವ ರಕ್ಷಣೆ (ಬಿಎಲ್ಎಸ್) ಮತ್ತು ಹೃದಯ ಶ್ವಾಸಕೋಶದ ಕೃತಕ ಉಸಿರಾಟದ(ಸಿಪಿಆರ್) ತರಬೇತಿ ಕಾರ್ಯಕ್ರಮವನ್ನು ಉಡುಪಿ ಪತ್ರಿಕಾ ಭವನದಲ್ಲಿ ಸೋಮವಾರ ಆಯೋಜಿಸಲಾಗಿತ್ತು.
ಹೃದಯ ದಿನಾಚರಣೆಯ ಈ ವರ್ಷದ ಥೀಮ್ -ಡೋಂಟ್ ಮಿಸ್ ಎ ಬೀಟ್(ಹೃದಯದ ಒಂದು ಬಡಿತವನ್ನು ತಪ್ಪಿಸಿಕೊಳ್ಳಬೇಡಿ) ಎಂಬು ದಾಗಿದೆ. ಪ್ರತಿವರ್ಷ ಹೃದಯದ ತಪಾಸಣೆ ಮಾಡಬೇಕು. ದಿನದ ೨೪ಗಂಟೆಗಳಲ್ಲಿ ಒಂದು ಗಂಟೆಯಾದರೂ ಆರೋಗ್ಯಕ್ಕಾಗಿ ಮೀಸಲಿಡಬೇಕು. ಇದರಲ್ಲಿ ವಾಕಿಂಗ್ ಹೆಚ್ಚು ಉತ್ತಮ. ಈ ಮೂಲಕ ಒತ್ತಡ ಕೂಡ ಕಡಿಮೆ ಮಾಡ ಬಹುದು ಎಂದು ಅವರು ಹೇಳಿದರು.
ಆಸ್ಪತ್ರೆಯ ತುರ್ತು ವೈದ್ಯಕೀಯ ಸಲಹೆಗಾರ ಡಾ.ಆಕಾಶ್ ಕಲ್ಲೂರೆ ಮತ್ತು ಅವರ ತಂಡವು ಬಿಎಲ್ಎಸ್ ಮತ್ತು ಸಿಪಿಆರ್ನ ಪ್ರಾಯೋಗಿಕ ತರಬೇತಿಯನ್ನು ನೀಡಿ, ಹೃದಯಾಘಾತ, ರಸ್ತೆ ಸಂಚಾರ ಅಪಘಾತಗಳು ಮತ್ತು ಪಾರ್ಶ್ವವಾಯುಗಳಂತಹ ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ತಕ್ಷಣದ ಪ್ರತಿಕ್ರಿಯೆಯ ನಿರ್ಣಾಯಕ ಪಾತ್ರದ ಕುರಿತು ಮಾತನಾಡಿದರು.
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಮಾರ್ಕೆಟಿಂಗ್ ವ್ಯವಸ್ಥಾಪಕ ಮೋಹನ್ ಶೆಟ್ಟಿ ಮಾತನಾಡಿ, ವಿಶ್ವ ಹೃದಯ ದಿನದ ಪ್ರಯುಕ್ತ ಆಸ್ಪತ್ರೆಯು ಪೊಲೀಸ್ ಸಿಬ್ಬಂದಿ, ಆಂಬ್ಯುಲೆನ್ಸ್ ಚಾಲಕರು, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಮೆಸ್ಕಾಮ್ ಉದ್ಯೋಗಿಗಳು ಸೇರಿದಂತೆ ವಿವಿಧ ಸಾರ್ವಜನಿಕ ಸೇವಾನಿರತರಿಗೆ ಇದೇ ರೀತಿಯ ತರಬೇತಿಗಳನ್ನು ನಡೆಸುತ್ತಿದೆ ಎಂದು ತಿಳಿಸಿದರು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ಖಜಾಂಚಿ ಉಮೇಶ್ ಮಾರ್ಪಳ್ಳಿ ಉಪಸ್ಥಿತರಿದ್ದರು. ಕಾರ್ಯದರ್ಶಿ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಭಾಗವಾಗಿ ಪತ್ರಕರ್ತರಿಗೆ ಉಚಿತ ಬಿಪಿ ತಪಾಸಣೆ, ರಕ್ತ ಪರೀಕ್ಷೆ ಮತ್ತು ಇಸಿಜಿ ತಪಾಸಣೆಗಳನ್ನು ನಡೆಸಲಾಯಿತು.