ಉಳ್ಳಾಲದಲ್ಲಿ ಗಾಂಜಾ ಮಾರಾಟ: ಉತ್ತರ ಪ್ರದೇಶ ಮೂಲದ ಆರೋಪಿ ಬಂಧನ
ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಗ್ರಾಮದ ತಲಪಾಡಿ ರೈಲ್ವೇ ಟ್ರ್ಯಾಕ್ ಸಮೀಪದ ಕಲ್ಪನೆ ಎಂಬ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ದಿನಾಂಕ 29/12/2025 ರಂದು ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿ, ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುವ ಕೃತ್ಯದಲ್ಲಿ ತೊಡಗಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು ರೂ. 21,000 ಮೌಲ್ಯದ 425 ಗ್ರಾಂ ತೂಕದ ನಿಷೇಧಿತ ಗಾಂಜಾ, ರೂ. 650 ನಗದು, ಒಂದು ಮೊಬೈಲ್ ಫೋನ್ ಹಾಗೂ ಇತರೆ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ರಾಜ್ ಪಾಲ್ ಎಂದು ಗುರುತಿಸಲಾಗಿದ್ದು, ಆತ ಮೂಲತಃ ಉತ್ತರ ಪ್ರದೇಶ ರಾಜ್ಯದ ಹಲ್ಲೋಯಿ ಜಿಲ್ಲೆಯ ಜೂರಿ ಚಂದ್ರಾಪುರ್ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ. ಆತ ಉತ್ತರ ಪ್ರದೇಶದಿಂದ ಗಾಂಜಾವನ್ನು ತರಿಸಿ, ಹಣಕ್ಕಾಗಿ ವಿವಿಧ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದನೆಂದು ತನಿಖೆಯಿಂದ ತಿಳಿದುಬಂದಿದೆ.
ಆರೋಪಿಯನ್ನು ದಿನಾಂಕ 30/12/2025 ರಂದು ಬೆಳಗಿನ ಜಾವ ಉಳ್ಳಾಲ ತಾಲೂಕು ಸೋಮೇಶ್ವರ ಗ್ರಾಮದ ತಲಪಾಡಿ ರೈಲ್ವೇ ಟ್ರ್ಯಾಕ್ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ವಶಕ್ಕೆ ಪಡೆದು, ಗಾಂಜಾ ಹಾಗೂ ಇತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 278/2025, ಕಲಂ 8(c), 20(b) ಎನ್ಡಿಪಿಎಸ್ ಕಾಯ್ದೆ–1985 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.













