ಕರಾವಳಿ ಜಿಲ್ಲೆಯ ಪಾಲಿಗೆ ಕರಾಳ ಬಜೆಟ್ : ಯಶ್ಪಾಲ್ ಸುವರ್ಣ
ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಮಂಡಿಸಿದ ಬಜೆಟ್ ಕರಾವಳಿ ಜನತೆಯ ಪಾಲಿಗೆ ಕರಾಳ ಬಜೆಟ್ ಆಗಿದ್ದು ಕರಾವಳಿ ಜಿಲ್ಲೆಯನ್ನು ಸಂಪೂರ್ಣ ಹೊರಗಿಟ್ಟು ಕರಾವಳಿ ಜಿಲ್ಲೆಯ ಬಗ್ಗೆ ತಮ್ಮ ನಿರಂತರ ಕಡೆಗಣನೆ ಮುಂದುವರಿಸಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.
ಕರ್ನಾಟಕ ಭೂಪಟದಲ್ಲಿ ಉಡುಪಿ ಜಿಲ್ಲೆಯ ಅಸ್ತಿತ್ವವನ್ನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮರೆತಿದ್ದು, ಜಿಲ್ಲೆಯ ಆರೋಗ್ಯ, ಶಿಕ್ಷಣ, ಧಾರ್ಮಿಕ, ಮೀನುಗಾರಿಕೆ, ಪ್ರವಾಸೋದ್ಯಮ ಸಹಿತ ಮೂಲ ಸೌಕರ್ಯಗಳ ಬಗ್ಗೆ ಜಿಲ್ಲೆಯ ಜನತೆಯ ನಿರೀಕ್ಷೆಗೆ ಈ ಬಾರಿಯ ಬಜೆಟ್ ನಲ್ಲಿ ತಣ್ಣೀರು ಎರಚಿದ್ದಾರೆ.
ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ 500 ಕೋಟಿ ಅನುದಾನದ ಬೇಡಿಕೆಗೆ ಬಜೆಟ್ ನಲ್ಲಿ ಯಾವುದೇ ಅನುದಾನ ಒದಗಿಸಿಲ್ಲ, ಪ್ರತಿ ಬಾರಿಯಂತೆ ಸಿದ್ದರಾಮಯ್ಯ ಕರಾವಳಿ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೇ ಇರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗೆ ಯಾವುದೇ ಅನುದಾನ ಅಭಿವೃದ್ಧಿ ಯೋಜನೆಗಳನ್ನು ನೀಡದೇ ಸೇಡಿನ ರಾಜಕೀಯ ಮಾಡಲು ಮುಂದಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕದ ಅತೀ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ, ದಾಖಲೆಯ 17 ನೇ ಬಜೆಟ್ ಬಗ್ಗೆ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿಯಾಗಿಸಿ ಗರಿಷ್ಠ ಸಾಲವನ್ನು ರಾಜ್ಯದ ಜನತೆಯ ಮೇಲೆ ಹೇರುವ ಮೂಲಕ “ಸಾಲ ರಾಮಯ್ಯ” ರಾಗಿದ್ದಾರೆ.
ಕರಾವಳಿ ಜಿಲ್ಲೆಯನ್ನು ನಿರಂತರ ಕಡೆಗಣಿಸಿ ಜಿಲ್ಲೆಯ ಅಭಿವೃದ್ಧಿಗೆ ಕೊಡಲಿಯೇಟು ನೀಡಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













