ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ

Spread the love

ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ

ಬೆಂಗಳೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ ಎಚ್.ಎನ್. ಅನಂತಕುಮಾರ್ (59) ನಿಧನರಾಗಿದ್ದಾರೆ.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ದಿವಸಗಳ ಹಿಂದೆ ಅವರು ಕ್ಯಾನ್ಸರ‍್ ಸಂಬಂಧಿ ಖಾಯಿಲೆಗಾಗಿ ವಿದೇಶದಿಂದ ಚಿಕಿತ್ಸೆ ಪಡೆದುಕೊಂಡು ಬಂದಿದ್ದರು. ಕೆಲವು ದಿವಸಗಳ ಹಿಂದೆ ಬೆಂಗಳೂರಿನ ಶಂಕರ‍್ ಆಸ್ಪತ್ರೆಯಲ್ಲಿ ಅವರು ಕ್ಯಾನ್ಸರ‍್ ಸಂಬಂಧಿಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.

ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು ಕಳೆದ ಎರಡು ದಿನಗಳಿಂದ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಅನಂತಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಖಾಸಗಿ ಆಸ್ಪತ್ರೆಯಿಂದ ಲಾಲ್ ಬಾಗ್ ರಸ್ತೆಯಲ್ಲಿರುವ ಸುಮೇರ ನಿವಾಸಕ್ಕೆ ಅನಂತ್​ ಕುಮಾರ್​ ಅವರ ಪಾರ್ಥಿವ ಶರೀರ ರವಾನೆಯಾಗಿದೆ. ಸದ್ಯ ಕುಟುಂಬದವರಿಗೆ ಮಾತ್ರ ಮನೆಯಲ್ಲಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಬೆಳಗ್ಗೆ 9 ಗಂಟೆ ಸಮಯದ ನಂತರ ಪಾರ್ಥೀವ ಶರೀರದ ದರ್ಶನಕ್ಕೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ. ಸ್ಥಳಕ್ಕೆ ದಕ್ಷಿಣ ವಿಭಾಗ ಪೊಲೀಸರಿಂದ ‌ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಬಾಲ್ಯ ಜೀವನ
ಅನಂತ್​ ಕುಮಾರ್ ಅವರು ಜುಲೈ 22, 1959 ರಂದು ಶ್ರೀ ಎಚ್. ಎನ್. ನಾರಾಯಣ ಶಾಸ್ತ್ರಿ ಮತ್ತು ಗಿರಿಜಾ ದಂಪತಿಗಳ ಮಗನಾಗಿ ಜನಿಸಿದ್ದರು. ಬಾಲ್ಯದಲ್ಲೆ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಆರ್‌ಎಸ್‌ಎಸ್ ತತ್ವಗಳಿಂದ ಪ್ರೇರಿತರಾಗಿದ್ದ ಅವರು ವಿದ್ಯಾರ್ಥಿಯಾಗಿದ್ದಾಗಲೇ ಎಬಿವಿಪಿಯಲ್ಲಿ ಸಕ್ರಿಯರಾಗಿದ್ದರು.

ಭಾರತೀಯ ಜನತಾ ಪಕ್ಷದ ನಾಯಕರಾಗಿದ್ದ ಅನಂತ್ ಕುಮಾರ್ ಒಬ್ಬ ಯಶಸ್ವಿ ರಾಜಕಾರಣಿ. ಕರ್ನಾಟಕದ ದಕ್ಷಿಣ ಬೆಂಗಳೂರು ಚುನಾವಣಾ ಕ್ಷೇತ್ರದಿಂದ ಬಿಜೆಪಿಯ ಅಭ್ಯರ್ಥಿಯಾಗಿ ಜಯಗಳಿಸಿ ಸಂಸದರಾಗಿ ಆಯ್ಕೆಯಾಗಿದ್ದರು. ಮೋದಿ ಸಚಿವ ಸಂಪುಟದಲ್ಲಿ ಕೇಂದ್ರ ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಖಾತೆಯನ್ನು ಅನಂತ್​ ಕುಮಾರ್​ ಅವರು ನಿರ್ವಹಿಸುತ್ತಿದ್ದರು.

ಕೇಂದ್ರ ಸಚಿವ ಅನಂತ್​ ಕುಮಾರ್​ ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಕಾನೂನು ಸಚಿವ ಸದಾನಂದ ಗೌಡ, ಶಾಸಕ ಸುರೇಶ್​ ಕುಮಾರ್​ ಹಾಗೂ ವಿಆರ್​ಎಲ್​ ಸಮೂಹ ಸಂಸ್ಥೆಯ ಮುಖ್ಯಸ್ಥ ವಿಜಯ ಸಂಕೇಶ್ವರ್​ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.


Spread the love