ಕೊರೋನಾ ವೈರಸ್: ಕರ್ನಾಟಕಕ್ಕೆ ಬರುವ ಅಂತರ್ ರಾಜ್ಯ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

Spread the love

ಕೊರೋನಾ ವೈರಸ್: ಕರ್ನಾಟಕಕ್ಕೆ ಬರುವ ಅಂತರ್ ರಾಜ್ಯ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ 5.0 ಜಾರಿಯಾದ ಬೆನ್ನಲ್ಲೇ ಇತರೆ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರಿಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಅಂಶಗಳನ್ನು ಬಿಡುಗಡೆ ಮಾಡಿದೆ.

ಹೌದು… ಜೂನ್ 30ರವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಿರುವ ಕರ್ನಾಟಕ ಸರ್ಕಾರ ಅಂತರ್ ರಾಜ್ಯ ಪ್ರಯಾಣಿಕರು ಕರ್ನಾಟಕಕ್ಕೆ ಬರಲು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಇತರೆ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರು ಕಡ್ಡಾಯವಾಗಿ ಈ ನಿಯಮಗಳನ್ನು ಪಾಲನೆ ಮಾಡಲೇಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.

ಭಾನುವಾರ ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, ಅಂತರರಾಜ್ಯದಿಂದ ಆಗಮಿಸಲು ಯಾವುದೇ ಪಾಸುಗಳ ಅಗತ್ಯವಿಲ್ಲ. ಆದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು. ಅಂತರ್ ರಾಜ್ಯ ಪ್ರಯಾಣಿಕರು ಹೆಸರು, ವಿಳಾಸ ಮತ್ತು ಮೊಬೈಲ್ ನಂಬರ್ ನೀಡಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡಬೇಕು. ಕಚೇರಿ ಕೆಲಸದ ಮೇಲೆ ಬರುವವರು ಹೆಸರು, ವಿಳಾಸ, ಮೊಬೈಲ್ ನಂಬರ್ ರಾಜ್ಯದಲ್ಲಿ ಯಾರನ್ನು ಭೇಟಿಯಾಗಬೇಕು ಎಂಬ ಮಾಹಿತಿ ನೀಡಬೇಕು ಎಂದು ಸೂಚಿಸಿದೆ. ಹೊರ ರಾಜ್ಯದಿಂದ ಆಗಮಿಸುವ ಎಲ್ಲಾ ಜನರ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಾಗಿದ್ದು, ಹೊರ ರಾಜ್ಯಗಳಿಂದ ಬರುವವರ ಕೈಗೆ 14 ದಿನಗಳ ಹೋಂ ಕ್ವಾರಂಟೈನ್‌ ಸೀಲ್‌ ಅನ್ನು ಅವರಿಗೆ ಹಾಕಲಾಗುತ್ತದೆ. ರೈಲು, ವಿಮಾನದಲ್ಲಿ ಬಂದವರ ತಪಾಸಣೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

ಇನ್ನು ಪ್ರಮುಖವಾಗಿ ಮಹಾರಾಷ್ಟ್ರದಿಂದ ಆಗಮಿಸುವ ಜನರು ಎರಡು ದಿನಕ್ಕೆ ಹಿಂದಿನ ಕೋವಿಡ್-19 ನೆಗೆಟಿವ್ ಪ್ರಮಾಣ ಪತ್ರವನ್ನು ತಂದರೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ನಿಂದ ವಿನಾಯಿತಿ ಸಿಗಲಿದೆ. ಆದರೆ, 14 ದಿನಗಳ ಹೋಂ ಕ್ವಾರಂಟೈನ್‌ಗೆ ಸೂಚಿಸಲಾಗುತ್ತದೆ.


Spread the love