ಚಂದ್ರಶೇಖರ್ ಪಾಲೆತ್ತಾಡಿ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ

Spread the love

ಚಂದ್ರಶೇಖರ್ ಪಾಲೆತ್ತಾಡಿ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ
 

ಬ್ರಹ್ಮಾವರ : ಮಾಧ್ಯಮ ಕ್ಷೇತ್ರದ ಮೂಲಕ ಜನಶಕ್ತಿ ಬೆಳೆಸುವ ಚಿಂತನೆ ಆಗಬೇಕು. ಅನ್ಯಾಯದ ವಿರುದ್ಧ ಮತ್ತು ಸತ್ಯದ ಪರ ಮಾಧ್ಯಮ ಸೆಟೆದು ನಿಲ್ಲಬೇಕಾದ ಅಗತ್ಯವಿದೆ ಎಂದು ಮುಂಬೈಯ ಕರ್ನಾಟಕ ಮಲ್ಲ ಪತ್ರಿಕೆಯ ಸಂಪಾದಕ ಚಂದ್ರಶೇಖರ್ ಪಾಲೆತ್ತಾಡಿ ಹೇಳಿದರು.

ಬ್ರಹ್ಮಾವರದ ಬಂಟರ ಭವನದಲ್ಲಿ ಭಾನುವಾರ ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ವತಿಯಿಂದ ನಡೆದ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

ಈ ನಿಟ್ಟಿನಲ್ಲಿ ಮುಂಗಾರು ಪತ್ರಿಕೆ ಸಂಪಾದಕರಾಗಿದ್ದ ವಡ್ಡರ್ಸೆ ರಘುರಾಮ್ ಶೆಟ್ಟಿ ಅವರ ಚಿಂತನೆ, ಆದರ್ಶ ಇಂದಿಗೂ ಪ್ರಸ್ತುತ ಎಂದ ಅವರು ವಡ್ಡರ್ಸೆ ಅವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡರು.

ಇದಕ್ಕೂ ಮುನ್ನ ಸಮಾರಂಭವನ್ನು ಉದ್ಘಾಟಿಸಿದ ಶಾಸಕ ರಘುಪತಿ ಭಟ್ ಸಮಾಜವನ್ನು ಕಟ್ಟುವ ಕೆಲಸ ಮಾಧ್ಯಮಗಳಿಂದ ಆಗಬೇಕು ಎಂದರು.

ಹಿರಿಯ ಸಾಮಾಜಿಕ ಹೋರಾಟಗಾರ ರವೀಂದ್ರನಾಥ ಶ್ಯಾನುಭಾಗ್ ಪ್ರಶಸ್ತಿ ಪ್ರದಾನ ಮಾಡಿ ಪತ್ರಿಕೆಗಳು ಜನರಿಗೆ ಒಳಿತನ್ನು ನೀಡುವ, ಧ್ವನಿ ಇಲ್ಲದವರ ಧ್ವನಿಯಾಗಿ, ಜನರ ಅಗತ್ಯತೆಗಳನ್ನು ಪೂರೈಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಾರ್ಟೂನಿಸ್ಟ್ ಹಾಗೂ ಪತ್ರಕರ್ತ ಪಂಜು ಗಂಗೊಳ್ಳಿ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು, ಸಾಮಾಜಿಕ ಚಿಂತಕ ಗುರ್ಮೆ ಸುರೇಶ್ ಶೆಟ್ಟಿ, ಮುಂಬೈಯ ಉದ್ಯಮಿ ಮರಾಠ ಸುರೇಶ್ ಶೆಟ್ಟಿ, ಚೋರಾಡಿ ರಾಜೀವ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಘದ ವತಿಯಿಂದ ಆಯೋಜಿಸಿದ್ದ ಉತ್ತಮ ಮೂರು ವರದಿ ತಯಾರಿಸಿದ ವಿದ್ಯಾರ್ಥಿಗಳಿಗೆ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಿಸಲಾಯಿತು.

ಕಾರ್ಯದರ್ಶಿ ರಾಜೇಶ್ ಗಾಣಿಗ ಅಚ್ಲಾಡಿ ಸ್ವಾಗತಿಸಿದರು. ಕಾರ್ಯಕ್ರಮದ ಸಂಯೋಜಕ ವಸಂತ ಗಿಳಿಯಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪತ್ರಕರ್ತರಾದ ಮೋಹನ್ ಉಡುಪ ವಂದಿಸಿದರು. ಚಂದ್ರಶೇಖರ್ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು. ನಂತರ ಯಕ್ಷಗಾನ ನಾಟ್ಯ ವೈಭವ ಕಾರ್ಯಕ್ರಮ ನಡೆಯಿತು.


Spread the love