ಜಡ್ಕಲ್ ಗ್ರಾ.ಪಂ ಮಾಜಿ ಅಧ್ಯಕ್ಷೆ ಕಾಂಗ್ರೆಸ್ ಸೇರ್ಪಡೆ
ಕುಂದಾಪುರ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ದೇಶದಲ್ಲಿ ನಡೆಯುತ್ತಿರುವ ರಾಜಕೀಯ ಧ್ರುವೀಕರಣ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳ ಯಶಸ್ಸಿನಿಂದ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವ ಸಂಖ್ಯೆ ಹೆಚ್ಚಾಗುತ್ತಿರುವುದು ಬದಲಾವಣೆಯ ಸಂಕೇತ ಎಂದು ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದ್ದಾರೆ.
ಇಲ್ಲಿಗೆ ಸಮೀಪದ ಹೆಮ್ಮಾಡಿ – ಕಟ್ಬೇಲ್ತೂರಿನ ಶಾಂತಿ ನಿವಾಸದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ
ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಜಡ್ಕಲ್ ಗ್ರಾ.ಪಂ ಮಾಜಿ ಅಧ್ಯಕ್ಷೆ ವನಜಾ ಶೆಡ್ತಿಯವರು ಹಾಗೂ ಅವರ ಬೆಂಬಲಿಗರನ್ನು ಸ್ವಾಗತಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ನೀಡುತ್ತಿರುವ ಗ್ಯಾರಂಟಿ ಯೋಜನೆಗಳು ಹಾಗೂ ಜನಪರವಾದ ಯೋಜನೆಗಳು ರಾಜ್ಯದ ಜನರು ಮೆಚ್ಚುತ್ತಿದ್ದಾರೆ ಎನ್ನುವುದಕ್ಕೆ, ವಿವಿಧ ರಾಜಕೀಯ ಪಕ್ಷಗಳಿಂದ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ತಂಡೋಪತಂಡವಾಗಿ ಬರುತ್ತಿರುವುದೆ ಸಾಕ್ಷಿ ಎಂದರು.
ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ವಂಡಬಳ್ಳಿ ಜಯರಾಮ್ ಶೆಟ್ಟಿ ಇದ್ದರು.