ಜಮೀನು ಪೋಡಿ:ನಿರ್ಲಕ್ಷ್ಯ ವಹಿಸಿದರೆ ಶಿಸ್ತು ಕ್ರಮ- ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಚ್ಚರಿಕೆ
ಮಂಗಳೂರು: ದರಖಾಸ್ತು ಪೋಡಿ ಮಾಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ವಿಶೇಷ ಆಂದೋಲನ ಕಾರ್ಯಕ್ರಮದಲ್ಲಿ ನಿರ್ಲಕ್ಷ್ಯ ವಹಿಸುವ ಸಿಬ್ಬಂದಿ ಹಾಗೂ ಸರ್ವೇಯರ್ಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಎಚ್ಚರಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ಎಲ್ಲಾ ತಾಲೂಕುಗಳ ತಹಶೀಲ್ದಾರ್, ಸರ್ವೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿಶೇಷ ಆಂದೋಲನದ ಪ್ರಗತಿ ಪರಿಶೀಲಿಸಿದರು.
ಒಂದು ಸರ್ವೇ ನಂಬರ್ನ ಎಲ್ಲಾ ಮಂಜೂರುದಾರರಿಗೆ ಏಕಕಾಲದಲ್ಲಿ ಜಮೀನಿನ ಅಳತೆ ಮಾಡಿ ಪೋಡಿ ಮಾಡುವ ಉದ್ದೇಶದಿಂದ ಕಂದಾಯ ಇಲಾಖೆಯಿಂದ ನಮೂನೆ 1-5 ರವರೆಗಿನ ಮಾಹಿತಿಯನ್ನು ಸಿದ್ಧಪಡಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕ ಸಾಫ್ಟ್ವೇರ್ ಸಿದ್ಧಪಡಿಸಲಾಗಿದ್ದು ಎಲ್ಲಾ ದರಖಾಸ್ತು ಪೋಡಿ ಪ್ರಕರಣಗಳು ಆನ್ಲೈನ್ ಮೂಲಕವೇ ನಿರ್ವಹಿಸಬೇಕಿದೆ ಎಂದು ಅವರು ಹೇಳಿದರು.
ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಈ ವಿಶೇಷ ಆಂದೋಲನದಲ್ಲಿ ನಿರೀಕ್ಷಿತ ಪ್ರಗತಿ ಕಂಡು ಬಂದಿಲ್ಲ. ಈ ನಿಟ್ಟಿನಲ್ಲಿ ಆಯಾಯ ತಹಶೀಲ್ದಾರ್ಗಳು ಮತ್ತು ಸರ್ವೆ ಅಧಿಕಾರಿಗಳು ಮುತುವರ್ಜಿ ವಹಿಸಿ ಆದ್ಯತೆಯಲ್ಲಿ ನಮೂನೆ 1-5 ಪ್ರಕರಣವನ್ನು ವಿಲೇವಾರಿ ಮಾಡಬೇಕು ಎಂದು ಅವರು ಹೇಳಿದರು.
ಈ ಕಾರ್ಯಕ್ರಮದಲ್ಲಿ ನಿರ್ಲಕ್ಷ್ಯ ವಹಿಸುವ ಸಿಬ್ಬಂದಿ ಮತ್ತು ಸರ್ವೆಯರ್ಗಳನ್ನು ಅಮಾನತುಗೊಳಿಸುವುದಾಗಿ ಅವರು ಎಚ್ಚರಿಸಿದರು.
ಎಲ್ಲ ತಹಶೀಲ್ದಾರ್ ಮತ್ತು ಸರ್ವೆ ಅಧಿಕಾರಿಗಳು ತಮ್ಮಲ್ಲಿರುವ ದರಖಾಸ್ತು ಪೋಡಿ ಪ್ರಕರಣಗಳನ್ನು ನಿಗಧಿತ ಅವಧಿಯಲ್ಲಿ ವಿಲೇವಾರಿ ಮಾಡಲು ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಕಟುನಿಟ್ಟಿನ ಸೂಚನೆ ನೀಡಿದರು.
ಜಮೀನು ಸರ್ವೆಗೆ ನಿರ್ಲಕ್ಷ್ಯ ವಹಿಸುವ ಸರ್ವೆಯರ್ಗಳ ಲೈಸೆನ್ಸ್ ರದ್ದುಗೊಳಿಸಲು ಶಿಫಾರಸ್ಸು ಮಾಡಲು ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್, ಉಪ ವಿಭಾಗಾಧಿಕಾರಿ, ತಹಶೀಲ್ದಾರ್ಗಳು, ಭೂ ದಾಖಲೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.