ದಕ್ಷಿಣ ಕನ್ನಡ ಜಿಲ್ಲೆಯಿಂದ 16 ರೈಲುಗಳಲ್ಲಿ 21888 ವಲಸೆ ಕಾರ್ಮಿಕರ ಪ್ರಯಾಣ

Spread the love

ದಕ್ಷಿಣ ಕನ್ನಡ ಜಿಲ್ಲೆಯಿಂದ 16 ರೈಲುಗಳಲ್ಲಿ 21888 ವಲಸೆ ಕಾರ್ಮಿಕರ ಪ್ರಯಾಣ

ಮಂಗಳೂರು : ಲಾಕ್ ಡೌನ್ ಅವಧಿಯಲ್ಲಿ ತಮ್ಮ ಸ್ವಂತ ರಾಜ್ಯಗಳಿಗೆ ತೆರಳಲು ಬಯಸಿದ ಹೊರರಾಜ್ಯದ ವಲಸೆ ಕಾರ್ಮಿಕರಿಗೆ ರೈಲ್ವೇ ಪ್ರಯಾಣದ ವ್ಯವಸ್ಥೆ ಮಾಡಲಾಗಿದ್ದು, ಇದುವರೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ 16 ರೈಲುಗಳ ಮೂಲಕ 21888 ಮಂದಿ ತೆರಳಿದ್ದಾರೆ.

ಬಿಹಾರ, ಉತ್ತರ ಪ್ರದೇಶ, ಜಾರ್ಖಂಡ್ ರಾಜ್ಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ತೆರಳಿದ್ದಾರೆ. ಈ ಪೈಕಿ ಬಿಹಾರ – 5, ಜಾರ್ಖಂಡ್ -5, ಉತ್ತರ ಪ್ರದೇಶ -5 ಹಾಗೂ ರಾಜಸ್ಥಾನಕ್ಕೆ 1 ರೈಲು ಜಿಲ್ಲೆಯಿಂದ ತೆರಳಿದೆ. ಪ್ರತೀ ರೈಲಿನಲ್ಲಿ ಸರಾಸರಿ 1400 ರಷ್ಟು ಪ್ರಯಾಣಿಕರು ಸಂಚರಿಸಿದ್ದಾರೆ. ಮಂಗಳೂರು ಜಂಕ್ಷನ್ ಹಾಗೂ ಪುತ್ತೂರು ರೈಲ್ವೇ ನಿಲ್ದಾಣಗಳಿಂದ ರೈಲು ಹೊರಟಿರುತ್ತದೆ. ಪ್ರಯಾಣಿಕರಿಂದ ರೈಲ್ವೇ ಇಲಾಖೆ ನಿಗದಿಪಡಿಸಿದ ದರವನ್ನು ಪಡೆಯಲಾಗಿತ್ತು.

ಮೇ 9ರಿಂದ ರೈಲು ಸಂಚಾರ ಆರಂಭವಾಗಿದೆ. ವಲಸೆ ಕಾರ್ಮಿಕರನ್ನು ನಿಗದಿತ ಸ್ಥಳಗಳಿಂದ ರೈಲು ನಿಲ್ದಾಣಕ್ಕೆ ಕರೆದುಕೊಂಡು ಬರಲು ಜಿಲ್ಲಾಡಳಿತ ವತಿಯಿಂದ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಮಾಡಲಾಗಿತ್ತು. ಪ್ರತೀ ಬಸ್ಸಿಗೆ ಓರ್ವ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಆಗಿ ನೇಮಿಸಿ, ಕಂದಾಯ ಇಲಾಖೆಯ ಓರ್ವ ಸಿಬ್ಬಂದಿ ಹಾಗೂ ಇಬ್ಬರು ಪೊಲೀಸರನ್ನು ಸಹಾಯಕರನ್ನಾಗಿ ನಿಯೋಜಿಸಲಾಗಿತ್ತು. ವಲಸೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಸುರತ್ಕಲ್, ಬೈಕಂಪಾಡಿ, ಪಣಂಬೂರು, ಜೋಕಟ್ಟೆ, ಪಂಜಿಮೊಗರು, ಉಳ್ಳಾಲ, ಕಂಕನಾಡಿ, ಬಂದರ್ ಮತ್ತಿತರ ಸ್ಥಳಗಳಿಗೆ ತೆರಳಿ, ಬಸ್ಸಿನಲ್ಲಿ ಕರೆದುಕೊಂಡು, ನೇರವಾಗಿ ರೈಲು ನಿಲ್ದಾಣಕ್ಕೆ ಬರಲು ವ್ಯವಸ್ಥೆ ಮಾಡಲಾಗಿತ್ತು.

ಬಸ್ಸಿಗೆ ಹತ್ತುವ ಮೊದಲೇ ಪ್ರಯಾಣಿಕರ ವಿಳಾಸ, ತಲುಪುವ ಸ್ಥಳ, ಆಧಾರ್ ಸಂಖ್ಯೆ ಸೇರಿದಂತೆ ಸಂಪೂರ್ಣ ವಿವರಗಳನ್ನು ಆಯಾ ಅಧಿಕಾರಿಗಳು, ದಾಖಲೆಗಳನು ಪರಿಶೀಲಿಸಿ ಚಾರ್ಟ್ನಲ್ಲಿ ನಮೂದಿಸುತ್ತಾರೆ. ಆಯಾ ಅಧಿಕಾರಿಗಳು ಈ ಚಾರ್ಟನ್ನು ಕೂಡಲೇ ಜಿಲ್ಲಾಧಿಕಾರಿ ಕಚೇರಿಗೆ ಕಳುಹಿಸಿದ ನಂತರ ಅದನ್ನು ಕ್ರೋಢೀಕರಿಸಿ, ಆಯಾ ರೈಲಿನಲ್ಲಿ ಹೋಗುವ ಸಂಪೂರ್ಣ ಪ್ರಯಾಣಿಕರ ವಿವರಗಳನ್ನು ಸಂಬಂಧಪಟ್ಟ ರಾಜ್ಯ ಸರಕಾರಕ್ಕೆ ಜಿಲ್ಲಾಧಿಕಾರಿ ಕಚೇರಿಯಿಂದ ಕಳುಹಿಸಬೇಕಾಗುತ್ತದೆ. ಈ ಚಾರ್ಟು ಬಂದ ನಂತರವೇ ಅಲ್ಲಿನ ರಾಜ್ಯ ಸರಕಾರಗಳು ಇಲ್ಲಿಂದ ಹೋದ ಪ್ರಯಾಣಿಕರನ್ನು ಸ್ವೀಕರಿಸಲು ವ್ಯವಸ್ಥೆ ಮಾಡುತ್ತದೆ.

ಬಸ್ಸಿಗೆ ಹತ್ತುವ ಮೊದಲೇ ಆರೋಗ್ಯ ಇಲಾಖೆಯ ತಂಡವು, ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿ, ನಂತರ ರೈಲು ನಿಲ್ದಾಣಕ್ಕೆ ಕರೆದುಕೊಂಡು ಬಂದು ರೈಲಿನಲ್ಲಿ ನಿಗದಿತ ಬೋಗಿಯಲ್ಲಿ ಪ್ರಯಾಣಿಕರು ಆಸೀನರಾಗುವವರೆಗೆ ನೋಡಲ್ ಅಧಿಕಾರಿಗಳು ಉಸ್ತುವಾರಿ ನೋಡಿಕೊಳ್ಳುತ್ತಾರೆ. ರೈಲು ನಿಲ್ದಾಣದಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ಊಟದ ಪೊಟ್ಟಣ ಹಾಗೂ ನೀರಿನ ಬಾಟಲ್ಗಳನ್ನು ವಿತರಿಸಲಾಗಿದೆ.

ಪ್ರಯಾಣಿಕರು ರೈಲಿನಲ್ಲಿ ತಮ್ಮ ನಿಗದಿತ ಸ್ಥಳ ತಲುಪಲು 2-3 ದಿನ ತಗಲುವುದರಿಂದ ಪ್ರಯಾಣ ಹಾದಿಯ ಪ್ರಮುಖ ಜಂಕ್ಷನ್ಗಳಲ್ಲಿ ಊಟೋಪಚಾರ ವ್ಯವಸ್ಥೆಯನ್ನು ಮಾಡಲಾಗಿದೆ.

ಸದ್ಯ ಜಿಲ್ಲೆಯಲ್ಲಿ ಪಶ್ಚಿಮ ಬಂಗಾಲ ಹಾಗೂ ಒರಿಸ್ಸಾ ರಾಜ್ಯಗಳ ವಲಸೆ ಕಾರ್ಮಿಕರು ಮಾತ್ರ ತೆರಳಲು ಬಾಕಿ ಇದ್ದು, ಶೀಘ್ರದಲ್ಲಿಯೇ ಅವರಿಗೂ ರೈಲಿನ ವ್ಯವಸ್ಥೆಯಾಗಲಿದೆ.

ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಕಾರ್ಯದಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ನಾಗರಾಜ್, ವಿಲ್ಮಾ, ಇಲಾಖೆಯ ಸಿಬ್ಬಂದಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮೂಡಾ ಆಯುಕ್ತ ದಿನೇಶ್ ಕುಮಾರ್, ಈ ಎಲ್ಲಾ ಪ್ರಕ್ರಿಯೆಗಳ ನೋಡಲ್ ಅಧಿಕಾರಿಯಾಗಿದ್ದರು.


Spread the love