ದೌರ್ಜನ್ಯ ಪ್ರಕರಣ ಪರಿಹಾರ ತ್ವರಿತವಾಗಿ ವಿತರಿಸಲು ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ಮೊತ್ತವನ್ನು ತ್ವರಿತವಾಗಿ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್. ವಿ ಸೂಚಿಸಿದ್ದಾರೆ.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಹಾಗೂ ಎಸ್.ಸಿ.ಪಿ – ಟಿ.ಎಸ್.ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ದೌರ್ಜನ್ಯ ಪ್ರಕರಣಗಳ ಎಫ್.ಐ.ಆರ್ ದಾಖಲಾದ ನಂತರ ಪರಿಹಾರವನ್ನು ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕು. ಸಂತ್ರಸ್ತರು ಅಗತ್ಯ ದಾಖಲೆಗಳನ್ನು ಹೊಂದಿಸಲು ಸಮಾಜ ಕಲ್ಯಾಣ ಇಲಾಖೆಯು ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಹೇಮಲತಾ ಮಾತನಾಡಿ, 2025 ರಲ್ಲಿ ಜಿಲ್ಲೆಯಲ್ಲಿ 69 ದೌರ್ಜನ್ಯ ಪ್ರಕರಣಗಳು ದಾಖಲಾಗಿದೆ. 2026ರಲ್ಲಿ ಮಾರ್ಚ್ 15 ರವರೆಗೆ 11 ದೌರ್ಜನ್ಯ ಪ್ರಕರಣಗಳು ದಾಖಲಾಗಿದೆ. ಈ ಪೈಕಿ 5 ಪ್ರಕರಣಗಳಿಗೆ ಪರಿಹಾರ ವಿತರಣೆ ಬಾಕಿ ಇದೆ ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಫಾಯಿ ಕರ್ಮಚಾರಿ ಸ್ಕ್ಯಾವೆಂಜರ್ಗಳ ಪ್ರಗತಿ ಪರಿಶೀಲನೆ ಸಭೆ, ಹಾಗೂ ಎಸ್.ಸಿ -ಎಸ್.ಟಿ ಅಲೆಮಾರಿ, ಅರೆ ಅಲೆಮಾರಿ, ಸಮುದಾಯಗಳ ಯೋಜನೆಗಳನ್ನು ಅನುಷ್ಠಾನಗೊಳಿಸುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯನ್ನು ಜಿಲ್ಲಾಧಿಕಾರಿಗಳು ನಡೆಸಿದರು.
ಎಲ್ಲ ಇಲಾಖೆಗಳು ಎಸ್. ಸಿ. ಪಿ / ಟಿ. ಎಸ್. ಪಿ ಕಾರ್ಯಕ್ರಮಗಳ ಗುರಿಯನ್ನು ನಿಗದಿತ ಅವಧಿಯಲ್ಲಿ ತಲುಪಬೇಕು ಮತ್ತು ಫಲಾನುಭವಿಗಳಿಗೆ ಅಗತ್ಯ ನೆರವು ಒದಗಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಪೋಲಿಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಉಪ ಪೋಲೀಸ್ ಆಯುಕ್ತ ಮಿಥುನ್ ಹೆಚ್. ಎನ್, ಮಂಗಳೂರು ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಮತ್ತಿತರರು ಉಪಸ್ಥಿತರಿದ್ದರು.
