ದ.ಕ ಜಿಲ್ಲೆಯಲ್ಲಿ ಸರಳ ರೀತಿಯ ದಸರಾ ಆಚರಣೆಗೆ ಜಿಲ್ಲಾಧಿಕಾರಿ ಆದೇಶ

Spread the love

ದ.ಕ ಜಿಲ್ಲೆಯಲ್ಲಿ ಸರಳ ರೀತಿಯ ದಸರಾ ಆಚರಣೆಗೆ ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ನಾಡ ಹಬ್ಬ ದಸರಾವನ್ನು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಸರಳ ರೀತಿಯಲ್ಲಿಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾಕಾಯ್ದೆ 2005 ರ ಕಲಂ26(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದ.ಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷನಾಗಿ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಆಧ್ಯಾದೇಶ 2020 ಕಲಂ 4 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಡಾ: ರಾಜೇಂದ್ರ ಕೆ.ವಿ ಈ ಕೆಳಕಂಡಂತೆ ಆದೇಶಿಸಿರುತ್ತಾರೆ.

ಕೋವಿಡ್-19 ವೈರಾಣು ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಪ್ರಸಕ್ತ ವರ್ಷ ಅಕ್ಟೋಬರ್ 17 ರಿಂದ 26 ರವರೆಗೆ ಜಿಲ್ಲೆಯಾದ್ಯಂತ ದಸರಾವನ್ನು ಆಚರಿಸಲು ಸಾರ್ವಜನಿಕರು ಅತ್ಯಂತ ಸರಳವಾಗಿ ಕಾರ್ಯಕ್ರಮಗಳಲ್ಲಿ 100ಕ್ಕಿಂತ ಹೆಚ್ಚು ಜನರು ಒಂದೆಡೆ ಸೇರದಂತೆ ಸಾಮಾಜಿಕ ಅಂತರವನ್ನುಕಡ್ಡಾಯವಾಗಿ ಪಾಲಿಸಬೇಕು.

ಸಾಮಾಜಿಕ ಅಂತರವಿಲ್ಲದೆ ನಡೆಸಲಾಗುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಕಾರ್ಯಕ್ರಮದ ಆಯೋಜಕರು, ದೇವಸ್ಥಾನದ ಆಡಳಿತಾಧಿಕಾರಿಗಳು ಮುಂಚಿತವಾಗಿ ಸಂಬಂಧಪಟ್ಟ ಪ್ರಾಧಿಕಾರಿಗಳಿಂದ ಅನುಮತಿಯನ್ನು ಪಡೆಯಬೇಕು ಹಾಗೂ ಕಾರ್ಯಕ್ರಮ ನಡೆಯುವಲ್ಲಿ ಸ್ಯಾನಿಟೈಸರ್ ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಪಾಲನೆಗೆ ಕ್ರಮಕೈಗೊಳ್ಳಬೇಕು. ಕೋವಿಡ್-19 ಮಾರ್ಗಸೂಚಿಗಳು ಉಲ್ಲಂಘನೆಯಾದಲ್ಲಿ ಕಾರ್ಯಕ್ರಮದ ಆಯೋಜಕರು, ದೇವಸ್ಥಾನದ ಆಡಳಿತಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ.

ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾ ನಗರಪಾಲಿಕೆ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಥೆ, ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ, ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹಬ್ಬ ಹರಿದಿನಗಳಲ್ಲಿ ಸಮಾಜದ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯ ಉಂಟಾಗಲು ಪೂರಕವಾಗಿರುವುದರಿಂದ ದಸರಾ ಹಬ್ಬವನ್ನು ಅದೇ ರೀತಿಯಿಂದಲೇ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗಬಾರದಂತೆ ಕಾಪಾಡಬೇಕು. ದಸರಾ ತಯಾರಿ ಮತ್ತು ಚಟುವಟಿಕೆಗಳ ಕುರಿತು ಸಂಬಂಧಿಸಿದ ಪ್ರಾಧಿಕಾರಿಗಳು ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಈ ಮಾರ್ಗಸೂಚಿಗಳು ನವರಾತ್ರಿ ಹಾಗೂ ದುರ್ಗಾ ಪೂಜೆಯ ಆಚರಣೆಗೂ ಅನ್ವಯವಾಗುತ್ತದೆ.

ದಸರಾ ಹಬ್ಬದ ಸಂದರ್ಭದಲ್ಲಿ ದೇವಸ್ಥಾನದ ಆವರಣದೊಳಗೆ ಮಾತ್ರ ಗರಿಷ್ಠ 10 ಹುಲಿ ವೇಷಾಧಾರಿಗಳಿಗೆ ನಿಗದಿತ ಕಾಲಮಿತಿಯೊಳಗೆ ಹರಕೆ ಅರ್ಪಿಸಲು ಅನುಮತಿ ನೀಡಲಾಗಿದೆ. ಹುಲಿ ವೇಷಧಾರಿಗಳು ದೇವಸ್ಥಾನದ ಹೊರಗೆ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಪ್ರದರ್ಶನ ನೀಡುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ. ಮುಖಗವಸು ಧರಿಸದೆ ಸೇರತಕ್ಕಂತಹ ಸಾರ್ವಜನಿಕರ ವಿರುದ್ಧ ನಿಯಮಾನುಸಾರ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗುತ್ತದೆ. ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ, ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ಹಾಗೂ ಭಾರತದಂಡ ಸಂಹಿತೆಯ 188ನೇ ಪ್ರಕರಣದ ಅಡಿಯಲ್ಲಿ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುತ್ತದೆ.

ಈ ಎಲ್ಲಾ ನಿರ್ದೇಶನಗಳನ್ನು ಪಾಲಿಸದೆ ವ್ಯತಿರಿಕ್ತವಾಗಿ ವರ್ತಿಸಿದ್ದಲ್ಲಿ ಅಂತವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರಗಿಸಲು ಆದೇಶಿಸಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love