ನಗರದ ರಾಜಕಾಲುವೆ, ಚರಂಡಿಗಳ ಹೂಳೆತ್ತಲು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚನೆ

Spread the love

ನಗರದ ರಾಜಕಾಲುವೆ, ಚರಂಡಿಗಳ ಹೂಳೆತ್ತಲು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚನೆ

ಮಂಗಳೂರು: ಮುಂಬರುವ ಮುಂಗಾರು ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಕೃತಕ ನೆರೆಯಿಂದ ಹಲವಾರು ಪ್ರದೇಶಗಳು ಜಲಾವೃತವಾಗಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವುದನ್ನು ಗಮನಿಸಲಾಗಿದ್ದು, ಈ ನಿಟ್ಟಿನಲ್ಲಿ ಮುಂಗಾರು ಮಳೆಯಲ್ಲಿ ಉಂಟಾಗಬಹುದಾದ ಕೃತಕ ನೆರೆಯನ್ನು ತಡೆಗಟ್ಟುವ ಉದ್ದೇಶದಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಹಾನಗರಪಾಲಿಕೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಗುರುವಾರ ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಮುಂಜಾಗ್ರತಾ ಕ್ರಮವಾಗಿ ನಗರದ ರಾಜಕಾಲುವೆ / ಬೃಹತ್ ಚರಂಡಿಗಳ ಹೂಳೆತ್ತುವ ಕಾಮಗಾರಿಗಳನ್ನು ಸಾರ್ವಜನಿಕರ ಸಹಕಾರದೊಂದಿಗೆ ಶೀಘ್ರವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದರು.

ಮಂಗಳೂರು ಮಹಾನಗರಪಾಲಿಕೆಯ ಮಳೆಗಾಲದ ಪೂರ್ವ ಸಿದ್ಧತೆ ಭಾಗವಾಗಿ ಮಹಾನಗರಪಾಲಿಕೆಯ ಎಲ್ಲಾ ವಾರ್ಡ್‍ಗಳಲ್ಲಿ ಬೃಹತ್ ರಾಜಕಾಲುವೆ ಸುಮಾರು 50 ಕಿಲೋ ಮೀಟರ್ ಮತ್ತು ರಾಜಕಾಲುವೆಗೆ ಕೂಡುವ ಮುಖ್ಯ ಚರಂಡಿಯನ್ನು ಒಳಗೊಂಡು ಹೂಳೆತ್ತುವ ಕಾಮಗಾರಿಯನ್ನು ಮಾರ್ಚ್ ತಿಂಗಳಿಂದ ಪ್ರಾರಂಭಿಸಲು ಉದ್ದೇಶಿಸಿದ್ದು ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ತಿಳಿಸಿದರು.

ಕಾಮಗಾರಿಯನ್ನು ಉತ್ತಮ ಹಾಗೂ ವ್ಯವಸ್ಥಿತ ರೀತಿಯಲ್ಲಿ ನಿರ್ವಹಿಸುವ ಬಗ್ಗೆ ಸಾರ್ವಜನಿಕರು/ಸಂಘ ಸಂಸ್ಥೆಗಳು ಸಲಹೆಗಳನ್ನು ನೀಡಬಹುದಾಗಿದ್ದು, ಹೂಳೆತ್ತುವ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಸ್ವಾಗತಿಸುತ್ತದೆ. ಪಾಲಿಕೆಯ ಸಹಾಯವಾಣಿ ಸಂಖ್ಯೆ -0824-2220306/ 2220319 ಗೆ ಅಥವಾ ವಾಟ್ಸ್‍ಆ್ಯಪ್ ಸಂಖ್ಯೆ 9449007722 ಸಂಪರ್ಕಿಸಬಹುದು ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದರು.


Spread the love
Subscribe
Notify of

0 Comments
Inline Feedbacks
View all comments