ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ
ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯದ ವಿರುದ್ಧ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ನಗರದ ಕದ್ರಿ ಸರ್ಕಲ್ನಲ್ಲಿ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಮಾತನಾಡಿದ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್, ನೀಟ್ ಪರೀಕ್ಷೆಯಂತಹ ದೇಶದ ಮಹತ್ವದ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಅತ್ಯಂತ ಆಘಾತಕಾರಿ. ಕೇಂದ್ರ ಸರ್ಕಾರ ಪರೀಕ್ಷಾ ವ್ಯವಸ್ಥೆಯನ್ನು ಪಾರದರ್ಶಕವಾಗಿ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ಹಗರಣದ ಹಿಂದೆ ಬಿಜೆಪಿ ಯುವ ಮೋರ್ಚಾದ ಸದಸ್ಯರ ಜಾಲ ಸಕ್ರಿಯವಾಗಿದ್ದು, ಸುಪ್ರೀಂ ಕೋರ್ಟ್ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಕಳೆದ ಕೆಲವು ವರ್ಷಗಳಿಂದ ವಿವಿಧ ರಾಷ್ಟ್ರೀಯ ಪರೀಕ್ಷೆಗಳಲ್ಲಿ ಪದೇ ಪದೇ ಅಕ್ರಮಗಳು ನಡೆಯುತ್ತಿದ್ದು, ಪರೀಕ್ಷಾ ವ್ಯವಸ್ಥೆಯ ಮೇಲಿನ ಜನರ ನಂಬಿಕೆ ಕುಸಿಯುತ್ತಿದೆ. ದೇಶದ ಜನರಿಗೆ “ಅಚ್ಚೇ ದಿನ್” ಭರವಸೆ ನೀಡಿ ಅಧಿಕಾರಕ್ಕೆ ಬಂದ ಮೋದಿ ಸರ್ಕಾರ, ಕಳೆದ ಹಲವು ವರ್ಷಗಳಲ್ಲಿ ಜನಸಾಮಾನ್ಯರ ಬದುಕನ್ನು ದುಬಾರಿ ಜೀವನದ ಸಂಕಷ್ಟಕ್ಕೆ ತಳ್ಳಿದೆ. ಅದಾನಿ, ಅಂಬಾನಿಗಳಂತಹ ಕಾರ್ಪೊರೇಟ್ ಸಾಮ್ರಾಜ್ಯಗಳಿಗೆ ‘ಅಮೃತಕಾಲ’ವನ್ನೇ ಮೋದಿ ಸರಕಾರ ಧಾರೆ ಎರೆದಿದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರಾದ ಅಪ್ಪಿ, ಲಾರೆನ್ಸ್ ಡಿಸೋಜಾ, ಸುಹಾನ್ ಆಳ್ವ, ಮುಖಂಡರಾದ ಸುಹೈಲ್ ಕಂದಕ್, ಅಭಿನಂದ್ ಹರೀಶ್, ಬಶೀರ್, ನವಾಝ್ ನರಿಂಗಾನ, ಹಾಶೀರ್ ಪೆರಿಮಾರ್, ಫೈಝಲ್, ಗೋಪಿನಾಥ್, ಹಕೀಂ, ಪೃಥ್ವಿರಾಜ್, ಮಿಥೇಶ್, ರಿತೇಶ್ ಅಂಚನ್, ಸುಮಂಥ್, ಫಯಾಝ್ ಅಮ್ಮೆಮ್ಮಾರ್, ಚಂದ್ರಕಲಾ ಜೋಗಿ, ಸಾರಿಕ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
