ಪರ್ಯಾಯ ಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

Spread the love

ಪರ್ಯಾಯ ಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜನವರಿ ಮಾಹೆಯಲ್ಲಿ ಜರುಗಲಿರುವ ಪರ್ಯಾಯ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತರುಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

ಅವರು ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

2024 ರ ಜನವರಿ 8 ರಿಂದ 18 ರ ವರೆಗೆ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮವು ನಡೆಯಲಿದ್ದು, ಸದರಿ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗಗಳಿಂದ, ಹೊರ ರಾಜ್ಯಗಳಿಂದ ಹಾಗೂ ವಿದೇಶಗಳಿಂದಲೂ ಭಕ್ತರು ಆಗಮಿಸಲಿದ್ದು, ಜನಸಂದಣಿ ನಗರದಲ್ಲಿ ಹೆಚ್ಚಲಿದ್ದು, ಸ್ವಚ್ಛತೆ, ನೈರ್ಮಲ್ಯ, ರಸ್ತೆಗಳ ಸುಸ್ಥಿತಿ, ನೀರಿನ ವ್ಯವಸ್ಥೆ ಸೇರಿದಂತೆ ಮತ್ತಿತರ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದರು.

ಸುಗಮ ಸಂಚಾರಕ್ಕೆ ಅನುಕೂಲವಾಗುವ ರೀತಿಯಲ್ಲಿ ರಸ್ತೆ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಆದ್ಯತೆಯ ಮೇಲೆ ಕೈಗೊಳ್ಳಬೇಕು. ಮೊಬೈಲ್ ಶೌಚಾಲಯಗಳನ್ನು ಅಲ್ಲಲ್ಲಿ ನಿರ್ಮಿಸಬೇಕು ಎಂದ ಅವರು, ನಗರದ ಶುಚಿತ್ವಕ್ಕೆ ಹೆಚ್ಚುವರಿ ಪೌರಕಾರ್ಮಿಕರನ್ನು ನಿಯೋಜಿಸಬೇಕೆಂದರು.

ಪೊಲೀಸ್ ಇಲಾಖೆಯವರು ಬಂದೋಬಸ್ತ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ವಾಹನಗಳ ಸುಗಮ ಸಂಚಾರಕ್ಕೆ, ಅವುಗಳ ನಿಲುಗಡೆಗೆ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆಗಳನ್ನು ಕಲ್ಪಿಸಬೇಕೆಂದರು.

ತುರ್ತು ಆರೋಗ್ಯ ಚಿಕಿತ್ಸೆ ನೀಡಲು ಶ್ರೀಕೃಷ ಮಠದ ಆವರಣದಲ್ಲಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನೊಳಗೊಂಡ ಆರೋಗ್ಯ ಕೇಂದ್ರಗಳನ್ನು ತಾತ್ಕಾಲಿಕವಾಗಿ ರಚಿಸಬೇಕೆಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದ ವಿವಿಧೆಡೆಯಿಂದ ಆಗಮಿಸುವ ಭಕ್ತರಿಗೆ ಅನುಕೂಲವಾಗುವಂತೆ ಹೆಚ್ಚುವರಿ ಕೆ.ಎಸ್.ಆರ್.ಟಿ.ಸಿ ವಿಶೇಷ ವಾಹನಗಳ ಸೌಲಭ್ಯವನ್ನು ಕಲ್ಪಿಸಿ, ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು.

ಮೂಲಸೌಕರ್ಯಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅಗತ್ಯವಿರುವ ಅನುದಾನ ಕೋರಿ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಬೇಕೆಂದು ಸೂಚನೆ ನೀಡಿದ ಅವರು, ಪ್ರತಿಯೊಂದು ವ್ಯವಸ್ಥೆಯ ಮೇಲುಸ್ತುವಾರಿಗೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಬೇಕೆಂದು ಸೂಚನೆ ನೀಡಿದರು.

ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಪರ್ಯಾಯ ಮಹೋತ್ಸವ ಕಾರ್ಯಕ್ರಮಕ್ಕೆ ಜನವರಿ 8 ರಿಂದ 18 ರವರೆಗೆ ಪ್ರತಿದಿನ ಸಾವಿರಾರು ಭಕ್ತಾಧಿಗಳು ನಗರಕ್ಕೆ ಆಗಮಿಸುವ ನಿರೀಕ್ಷೆಯಿದ್ದು, ಸದರಿ ಕಾರ್ಯಕ್ರಮದ ಯಶಸ್ವಿಗೆ ಸ್ಥಳೀಯ ನಗರಾಡಳಿತ ಹಾಗೂ ಜಿಲ್ಲಾಡಳಿತ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ನೀಡುವುದರೊಂದಿಗೆ ಪರ್ಯಾಯ ಮಹೋತ್ಸವದ ಯಶಸ್ವಿಗೆ ಸಹಕರಿಸಬೇಕು ಎಂದರು.

ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ನಿರಂತರ ವಿದ್ಯುಚ್ಛಕ್ತಿ ಪೂರೈಕೆಗೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು. ಅಗ್ನಿಶಾಮಕ ಹೆಚ್ಚುವರಿ ವಾಹನಗಳನ್ನು ಪಕ್ಕದ ಜಿಲ್ಲೆಯಿಂದ ತರಿಸಿಕೊಳ್ಳಬೇಕು ಎಂದ ಅವರು, ಮೆರವಣಿಗೆಯಲ್ಲಿ ಸರಕಾರದ ವಿವಿಧ ಯೋಜನೆಗಳ ಪ್ರಚಾರ ಪಡಿಸುವ ಟ್ಯಾಬ್ಲೋಗಳು ಭಾಗವಹಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಡಿವೈಎಸ್ಪಿ ದಿನಕರ್, ನಗರಾಭಿವೃದ್ಧಿ ಕೋಶದ ಅಭಿಯಂತರ ಮೋಹನ್ ರಾಜ್, ವಿವಿಧ ಇಲಾಖೆಯ ಅಧಿಕಾರಿಗಳು, ಮಠದ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


Spread the love