ಪ್ರಚೋದನಕಾರಿ ಭಾಷಣ: ಶ್ರೀಕಾಂತ್ ಶೆಟ್ಟಿ ವಿರುದ್ಧ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಹೈಕೋರ್ಟ್ ಆದೇಶ
ಬೆಂಗಳೂರು : ಪ್ರಚೋದನಕಾರಿ ಭಾಷಣ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂ ಮುಖಂಡ ಶ್ರೀಕಾಂತ್ ಶೆಟ್ಟಿ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಎಫ್ಐಆರ್ ರದ್ದು ಕೋರಿ ಹೈಕೋರ್ಟ್ಗೆ ಶ್ರೀಕಾಂತ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ, “ಭಾಷಣದ ಹಲವು ದಿನಗಳ ಬಳಿಕ ದುರುದ್ದೇಶದಿಂದ ಎಫ್ಐಆರ್ ದಾಖಲಿಸಲಾಗಿದೆ. ಹೀಗಾಗಿ ಮಧ್ಯಂತರ ತಡೆಯಾಜ್ಞೆ ನೀಡಬೇಕು” ಎಂದು ಮನವಿ ಮಾಡಿದರು.
ಈ ವಾದ ಆಲಿಸಿದ ನ್ಯಾಯಪೀಠ, ಪೊಲೀಸರ ವಿಚಾರಣೆಗೆ ಅರ್ಜಿದಾರರು ಸಹಕರಿಸಬೇಕು. ಹೈಕೋರ್ಟ್ ಅನುಮತಿ ಇಲ್ಲದೇ ದೋಷಾರೋಪಪಟ್ಟಿ ಸಲ್ಲಿಸುವಂತಿಲ್ಲ.ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ಪೀಠ ಆದೇಶಿದೆ.
ಮೇ.25ರಂದು ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು NIA ಗೆ ವಹಿಸಬೇಕು ಎಂದು ಸಂಘಪರಿವಾರದ ಸಂಘಟನೆಗಳು ಬಜ್ಪೆಯಲ್ಲಿ ಆಯೋಜಿಸಿದ್ದ ʼಬಜ್ಪೆ ಚಲೋʼ ಕಾರ್ಯಕ್ರಮದ ವೇಳೆ ಶೀಕಾಂತ್ ಶೆಟ್ಟಿ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು ಮತ್ತು ಅವರ ವಿರುದ್ದ ಪ್ರಕರಣ ದಾಖಲಾಗಿತ್ತು