‘ಪ್ರತಾಪ್ ಚಂದ್ರ ಶೆಟ್ಟಿಗೆ ಸಚಿವ ಸ್ಥಾನ ನೀಡಿ’ – ಕುಂದಾಪುರ ಯುವ ಕಾಂಗ್ರೆಸ್‌ ಒತ್ತಾಯ

Spread the love

‘ಪ್ರತಾಪ್ ಚಂದ್ರ ಶೆಟ್ಟಿಗೆ ಸಚಿವ ಸ್ಥಾನ ನೀಡಿ’ – ಕುಂದಾಪುರ ಯುವ ಕಾಂಗ್ರೆಸ್‌ ಒತ್ತಾಯ

ಉಡುಪಿ: ನಾಲ್ಕು ಬಾರಿ ವಿಧಾನಸಭಾ ಸದಸ್ಯರಾಗಿ, ಮೂರು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಅನುಭವ ಇರುವ ಪ್ರತಾಪ್‌ಚಂದ್ರ ಶೆಟ್ಟಿ ಅವರಿಗೆ ಜಿಲ್ಲಾ ಉಸ್ತುವಾರಿ ಹಾಗೂ ಸಚಿವ ಸ್ಥಾನ ನೀಡಬೇಕು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಇಚ್ಚಿತಾರ್ಥ್‌ ಶೆಟ್ಟಿ ಒತ್ತಾಯಿಸಿದರು.

ಪ್ರತಾಪ್ ಚಂದ್ರ ಶೆಟ್ಟಿ ಪಕ್ಷದ ಹಿರಿಯ ನಾಯಕರಾಗಿದ್ದು, ಪಕ್ಷ ನಿಷ್ಠೆ ಹಾಗೂ ನಿಷ್ಕಳಂಕ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಅಧಿಕಾರಕ್ಕಾಗಿ ಲಾಬಿ ಮಾಡಿದವರಲ್ಲ. ಶಾಕರಾಗಿದ್ದಾಗಲೂ ನಿಗಮ, ಮಂಡಳಿಗಳ ಹುದ್ದೆ ಪಡೆದವರಲ್ಲ. ಹಾಗಾಗಿ, ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಹಿಂದಿನ ಎಲ್ಲ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಬೆಂಬಲವಾಗಿ ನಿಂತು ಕೆಲಸ ಮಾಡಿದ್ದಾರೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಸಂಘಟಿಸಿದ್ದಾರೆ. ಇಂಥವರಿಗೆ ಸಚಿವ ಸ್ಥಾನದ ಜವಾಬ್ದಾರಿ ನೀಡಿದರೆ, ಕಳೆಗುಂದಿರುವ ಜಿಲ್ಲಾ ಕಾಂಗ್ರೆಸ್‌ಗೆ ಹೊಸ ಚೈತನ್ಯ ಬರಲಿದೆ. ಮುಂದೆ, ಜಿಲ್ಲೆಯನ್ನು ಕಾಂಗ್ರೆಸ್‌ ಕೈವಶಮಾಡಿಕೊಳ್ಳಲು ನೆರವಾಗುತ್ತದೆ ಎಂದರು.

ಪ್ರತಾಪ್‌ಚಂದ್ರ ಶೆಟ್ಟಿ ಅವರು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರಬಲ ಸಮುದಾಯಕ್ಕೆ ಸೇರಿದ ಮುಖಂಡರಾಗಿದ್ದು, ಜಾತ್ಯತೀತ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಜಿಲ್ಲೆಯ ಸಮಸ್ಯೆಗಳನ್ನು ಹತ್ತಿರದಿಂದ ಬಲ್ಲವರಾಗಿದ್ದಾರೆ. ಹಾಗಾಗಿ, ಅವರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ರಮೇಶ್ ಶೆಟ್ಟಿ, ನಟರಾಜ್ ಹೊಳ್ಳ, ಸಂಪತ್ ಶೆಟ್ಟಿ, ತ್ರಿಶೂಲ್, ವಿಜಯ್ ಪೂಜಾರಿ ಅವರು ಉಪಸ್ಥಿತರಿದ್ದರು.


Spread the love