Home Mangalorean News Kannada News ಪ್ರವಾಹ ಸಮೀಕ್ಷೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ರಾಜ್ಯದಲ್ಲಿ ಹತ್ತು ಸಾವಿರ ಕೋಟಿ...

ಪ್ರವಾಹ ಸಮೀಕ್ಷೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ರಾಜ್ಯದಲ್ಲಿ ಹತ್ತು ಸಾವಿರ ಕೋಟಿ ಹಾನಿ

Spread the love

ಪ್ರವಾಹ ಸಮೀಕ್ಷೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ರಾಜ್ಯದಲ್ಲಿ ಹತ್ತು ಸಾವಿರ ಕೋಟಿ ಹಾನಿ
 

ಬೆಳಗಾವಿ: ಪ್ರವಾಹದಿಂದಾಗಿ ರಾಜ್ಯದಲ್ಲಿ 10 ಸಾವಿರ ಕೋಟಿ ರೂಪಾಯಿ ಹಾನಿಯಾಗಿರುವ ಬಗ್ಗೆ ಅಂದಾಜಿಸಲಾಗಿದೆ ಎಂದು ಮುಖ್ಯ ಕಾರ್ಯದರ್ಶಿಗಳು ವಿವರಿಸಿದರು.

ಕೇಂದ್ರ ಗೃಹಸಚಿವರು ಪ್ರವಾಹ ಬಾಧಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ಬಳಿಕ ಸಾಂಬ್ರಾ ವಿಮಾನ ನಿಲ್ದಾಣ ದಲ್ಲಿ ನಡೆಸಿದ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.

ರಾಜ್ಯದಲ್ಲಿ ಪ್ರವಾಹ ಬಾಧಿತ ಜಿಲ್ಲೆಗಳಲ್ಲಿ 4.81 ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿದ್ದು, 22431 ಮನೆಗಳ ಹಾನಿಯಾಗಿದೆ. ಪ್ರಾಥಮಿಕ ಸಮೀಕ್ಷೆಯ ಪ್ರಕಾರ 10 ಸಾವಿರ ಕೋಟಿ ರೂಪಾಯಿ ಹಾನಿ ಅಂದಾಜಿಸಲಾಗಿದೆ.

ಇಡೀ ರಾಜ್ಯದ ಪ್ರವಾಹ ಸ್ಥಿತಿಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಟಿ.ಎಂ.ವಿಜಯ್ ಭಾಸ್ಕರ್ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿವರಿಸಿದರು.

19 ಎನ್.ಡಿ.ಆರ್.ಎಫ್. ತಂಡಗಳನ್ನು ನಿಯೋಜಿಸಲಾಗಿದ್ದು, ಕೊಡುಗು ಜಿಲ್ಲೆಯಲ್ಲಿ ಇನ್ನೂ ಎರಡು ಹೆಲಿಕಾಪ್ಟರ್ ಅಗತ್ಯವಿದೆ ಎಂದು ತಿಳಿಸಿದರು.

ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಮುಂದಿನ ಎರಡು ದಿನಗಳಲ್ಲೂ ಮಳೆಯ ಪ್ರಮಾಣ ಕಡಿಮೆಯಿದೆ ಎಂದು ತಿಳಿಸಿದರು.

ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ರಾಜ್ಯ ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ತಿಳಿಸಿದರು.

ಛಾಯಾ ಚಿತ್ರಗಳ ವೀಕ್ಷಣೆ:
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಆಗಿರುವ ಅನಾಹುತಗಳ ಛಾಯಾಚಿತ್ರ ಪ್ರದರ್ಶನವನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ವೀಕ್ಷಿಸಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್ ಅವರು, ಜಿಲ್ಲೆಯಲ್ಲಿ ಆಗಿರುವ ಹಾನಿಯ ಕುರಿತು ಮಾಹಿತಿಯನ್ನು ನೀಡಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ ಜೋಶಿ, ರೈಲ್ವೆ ಖಾತೆ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಶಾಸಕರಾದ ಉಮೇಶ್ ಕತ್ತಿ, ಅಭಯ್ ಪಾಟೀಲ, ಶಶಿಕಲಾ ಜೊಲ್ಲೆ, ದುರ್ಯೋಧನ ಐಹೊಳೆ, ಮಹಾದೇಪ್ಪ ಯಾದವಾಡ, ರಾಜ್ಯಸಭಾ ಸದಸ್ ಡಾ.ಪ್ರಭಾಕರ್ ಕೋರೆ ಮತ್ತಿತರರು ಉಪಸ್ಥಿತರಿದ್ದರು.

ಪ್ರವಾಹದಿಂದ ಹತ್ತು ಸಾವಿರ ಕೋಟಿ ಹಾನಿ- ಮುಖ್ಯಮಂತ್ರಿ ಯಡಿಯೂರಪ್ಪ ತಕ್ಷಣ 3 ಸಾವಿರ ಕೋಟಿ ಬಿಡುಗಡೆಗೆ ಕೇಂದ್ರಕ್ಕೆ ಮನವಿ

ಪ್ರಾಥಮಿಕ ಅಂದಾಜಿನ ಪ್ರಕಾರ ಬೆಳಗಾವಿ ಸೇರಿಂದತೆ ರಾಜ್ಯದಲ್ಲಿ ಪ್ರವಾಹ ಹಾಗೂ ಧಾರಾಕಾರ ಮಳೆಯಿಂದ ಹತ್ತು ಸಾವಿರ ಕೋಟಿ ರೂಪಾಯಿ ಹಾನಿಯಾಗಿದೆ. ಆದ್ದರಿಂದ ತಕ್ಷಣವೇ 3 ಸಾವಿರ ಕೋಟಿ ರೂಪಾಯಿ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆಯಲ್ಲಿ ಪ್ರವಾಹ ಬಾಧಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ಹಾಗೂ ಹಿರಿಯ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಹತ್ತು ಸಾವಿರ ಕೋಟಿ ಹಾನಿಯು ಪ್ರಾಥಮಿಕ ಅಂದಾಜು ಮಾತ್ರವಾಗಿದೆ. ಪ್ರವಾಹ ಸ್ಥಿತಿಯನ್ನು ನೋಡಿದರೆ

ಅಂದಾಜು 30 ರಿಂದ 40 ಸಾವಿರ ಕೋಟಿ ರೂಪಾಯಿ ಹಾನಿಯಾಗಿದೆ ಎಂಬುದು ನನ್ನ ಅಭಿಪ್ರಾಯ. ಸಮಗ್ರ ಸಮೀಕ್ಷೆ ಬಳಿಕ ಇದು ಗೊತ್ತಾಗಲಿದೆ.

ಜನ-ಜಾನುವಾರುಗಳ ರಕ್ಷಣೆ ಹಾಗೂ ಪುನರ್ವಸತಿ ಕಲ್ಪಿಸುವುದು ಮತ್ತು ಜನರಿಗೆ ಪರಿಹಾರ ತಲುಪಿಸುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ. ಇದರಲ್ಲಿ ಯಾವುದೇ ರಾಜೀಯಿಲ್ಲ ಎಂದರು.

ಬೆಳೆಹಾನಿಯಿಂದ ತತ್ತರಿಸಿರುವ ರೈತರು, ಮನೆಗಳನ್ನು ಕಳೆದುಕೊಂಡಿರುವ ಜನರು ಆತಂಕ ಪಡಬೇಕಿಲ್ಲ ಸರ್ಕಾರ ಅವರ ಜತೆಗಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ರಾಷ್ಟ್ರೀಯ ವಿಪತ್ತು ಘೋಷಣೆ ಬಗ್ಗೆ ಕೇಂದ್ರ ಸರ್ಕಾರ ನಿರ್ಧರಿಸಲಿದೆ. ಪರಿಹಾರ ಒದಗಿಸುವುದು ರಾಜ್ಯ ಸರ್ಕಾರದ ಮೊದಲ ಆದ್ಯತೆಯಾಗಿದೆ.

ವೈಮಾನಿಕ ಸಮೀಕ್ಷೆ:
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಾಯುಸೇನೆಯ ಹೆಲಿಕಾಪ್ಟರ್‍ನಲ್ಲಿ ಎರಡು ಗಂಟೆ ಹತ್ತು ನಿಮಿಷಗಳ ಕಾಲ ಪ್ರವಾಹ ಬಾಧಿತ ಕರ್ನಾಟಕ ಹಾಗೂ ಮಹಾರಾಷ್ಟ್ರದ ಕೆಲ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸಿದರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ವೈಮಾನಿಕ ಸಮೀಕ್ಷೆ ಆರಂಭಿಸಿದ ಅವರು, ವಿಜಯಪುರದ ಆಲಮಟ್ಟಿ ಜಲಾಶಯದಿಂದ ಮಹಾರಾಷ್ಟ್ರದ ಕೊಯ್ನಾ ಜಲಾಶಯ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಹರಿಯುವ ನದಿಗಳನ್ನು ವೀಕ್ಷಿಸಿದರು.

ನೆರವಿಗೆ ಮನವಿ:
ನೆರೆ ಸಂತ್ರಸ್ತರ ಪುನರ್ವಸತಿಗಾಗಿ ಸರ್ಕಾರಿ ನೌಕರರ ಸಂಘದಿಂದ 200 ಕೋಟಿ ರೂಪಾಯಿ ನೆರವು ನೀಡುವುದಾಗಿ ತಿಳಿಸಿದ್ದಾರೆ. ಅದೇ ರೀತಿ ರಾಜ್ಯದ ಕೈಗಾರಿಕೋದ್ಯಮಿಗಳು ನೆರವು ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿಕೊಂಡರು.

2005 ರಲ್ಲಿ ಇದೇ ರೀತಿ ಪರಿಸ್ಥಿತಿ ಎದುರಾದಾಗ ನೆರವಿನ ಮಹಾಪೂರ ಹರಿದುಬಂದಿತ್ತು. ಈಗಲೂ ಕೈಗಾರಿಕೋದ್ಯಮಿಗಳು ಕೈಜೋಡಿಸಿದರೆ ಸಂತ್ರಸ್ತರ ಪುನರ್ವಸತಿ ಸುಲಭವಾಗಲಿದೆ ಎಂದರು.

ನಾಳೆಯಿಂದ ಮತ್ತೇ ಪ್ರವಾಸ:
ಪ್ರವಾಹ ಬಾಧಿತ ಐದಾರು ಜಿಲ್ಲೆಗಳಲ್ಲಿ ನಾಳೆಯಿಂದ ಮತ್ತೇ ಪ್ರವಾಸ ಕೈಗೊಂಡು ಸಂತ್ರಸ್ತರ ಅಹವಾಲು ಆಲಿಸುತ್ತೇನೆ ಎಂದು ತಿಳಿಸಿದರು. ಸಮಗ್ರ ಸಮೀಕ್ಷೆಯ ವರದಿ ಬಂದ ಬಳಿಕ ಹೆಚ್ಚಿನ ಅನುದಾನ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು.

ಆಗಸ್ಟ್ 15 ರ ಬಳಿಕ ಸಂಪುಟ ವಿಸ್ತರಣೆ:
ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವುದರಿಂದ ಮೊದಲು ಪರಿಹಾರ ಹಾಗೂ ಸಂತ್ರಸ್ತರ ಪುನರ್ವಸತಿಗೆ ಆದ್ಯತೆ ನೀಡಬೇಕು. ಆಗಸ್ಟ್ 15 ರ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿರ್ಧರಿಸೋಣ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ಆ ಪ್ರಕಾರ ಆಗಸ್ಟ್ 15 ರವರೆಗೆ ರಾಜ್ಯದಲ್ಲಿ ಪ್ರವಾಸ ಕೈಗೊಂಡು ಆ.16 ರಂದು ನವದೆಹಲಿಗೆ ತೆರಳಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಸುರೇಶ್ ಅಂಗಡಿ, ಶಾಸಕರಾದ ಉಮೇಶ್ ಕತ್ತಿ, ಅಭಯ್ ಪಾಟೀಲ, ಶಶಿಕಲಾ ಜೊಲ್ಲೆ, ದುರ್ಯೋಧನ ಐಹೊಳೆ, ಮಹಾದೇಪ್ಪ ಯಾದವಾಡ, ರಾಜ್ಯಸಭಾ ಸದಸ್ ಡಾ.ಪ್ರಭಾಕರ್ ಕೋರೆ ಮತ್ತಿತರರು ಉಪಸ್ಥಿತರಿದ್ದರು.


Spread the love

Exit mobile version