ಬಂಟ್ವಾಳ ಪುರಸಭೆ ಗುತ್ತಿಗೆ ನೌಕರರ ಬಾಕಿ ವೇತನ ಶೀಘ್ರ ಪಾವತಿಗೆ ಸಂಸದ ಕ್ಯಾ. ಚೌಟ ಸೂಚನೆ

Spread the love

ಬಂಟ್ವಾಳ ಪುರಸಭೆ ಗುತ್ತಿಗೆ ನೌಕರರ ಬಾಕಿ ವೇತನ ಶೀಘ್ರ ಪಾವತಿಗೆ ಸಂಸದ ಕ್ಯಾ. ಚೌಟ ಸೂಚನೆ

ಮಂಗಳೂರು: ಬಂಟ್ವಾಳ ಪುರಸಭೆಯಲ್ಲಿ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಸಕಾಲದಲ್ಲಿ ವೇತನ ಪಾವತಿಯಾಗದಿರುವ ಗಂಭೀರ ಸಮಸ್ಯೆ ಹಾಗೂ ಪುರಸಭೆ ವ್ಯಾಪ್ತಿಯ ಇತರ ಮೂಲಭೂತ ಸೌಕರ್ಯಗಳ ಕೊರತೆ ಕುರಿತು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ರಾಜೇಶ್ ನಾಯ್ಕ್‌ ಅವರ ಜಂಟಿ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಪ್ರಮುಖ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ.

ಬಂಟ್ವಾಳ ಪುರಸಭೆಯ ಕನಿಷ್ಠ ವೇತನದಡಿ ಮತ್ತು ಹೊರಗುತ್ತಿಗೆಯಡಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಸಕಾಲದಲ್ಲಿ ವೇತನ ಪಾವತಿಯಾಗದ ಕಾರಣ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಇದರಿಂದ ಅವರ ಜೀವನ ನಿರ್ವಹಣೆ ಕಷ್ಟವಾಗಿರುವ ಬಗ್ಗೆ ನೌಕರರು ಸಂಸದರ ಹಾಗೂ ಶಾಸಕರ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ, ನೌಕರರ ವೇತನ ಬಾಕಿಯನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ಸೂಚನೆ ನೀಡಿದ್ದಾರೆ.

ಅಲ್ಲದೆ, ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಹಿಂದಿನ ಸರ್ಕಾರದ ಅವಧಿಯಲ್ಲಿ ಒಳಚರಂಡಿ ಯೋಜನೆ ಕಾಮಗಾರಿ ಅನುದಾನ ಮಂಜೂರಾಗಿ ವರ್ಷ ಕಳೆದರೂ ಕಾಮಗಾರಿ ನಡೆಯದೆ ನೇತ್ರಾವತಿ ನದಿ ಕಲುಷಿತಗೊಳ್ಳುತ್ತಿರುವ ಬಗ್ಗೆಯೂ ಮಹತ್ವದ ಚರ್ಚೆ ನಡೆಯಿತು. ಜಿಲ್ಲೆಯ ಜೀವನದಿಯಾಗಿ ಗುರುತಿಸಿಕೊಂಡ ನೇತ್ರಾವತಿಯ ಸಂಸ್ಕರಿಸದ ಕೊಳಚೆ ನೀರು ಮತ್ತು ತ್ಯಾಜ್ಯ ನದಿಗೆ ಹರಿಯುತ್ತಲೇ ಇದೆ. ಇದು ನೀರಿನ ಮಾಲಿನ್ಯ ಮತ್ತು ಸಾಂಕ್ರಾಮಿಕ ರೋಗಗಳ ಹರಡುವಿಕೆಯ ಭೀತಿಯನ್ನು ಹೆಚ್ಚಿಸಿದೆ. ಹೀಗಾಗಿ ಈ ಕುರಿತು ಜಿಲ್ಲಾಡಳಿತವು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಯುಜಿಡಿ ಯೋಜನೆ ಕಾರ್ಯಗತಗೊಳಿಸಲು ಹಾಗೂ ತ್ಯಾಜ್ಯ ನೀರು ನದಿಯೊಡಳಿಗೆ ಸೇರದೆ ನೇತ್ರಾವತಿಯ ಪಾವಿತ್ರ್ಯತೆಯನ್ನು ಕಾಪಾಡುವಂತೆ ಸಂಸದರು ಹಾಗೂ ಶಾಸಕರು ಜಿಲ್ಲಾಡಳಿತ ಹಾಗೂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ ಎಚ್.ವಿ. ದರ್ಶನ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಸಂತೋಷ್ ಕುಮಾರ್, ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿಗಳಾದ ತೀರ್ಥಪ್ರಸಾದ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments