ಬಸವಣ್ಣನವರು ಅನುಭವ ಮಂಟಪದ ಮೂಲಕ ಸಮಾನತೆಯನ್ನು ಸಮಾಜಕ್ಕೆ ತೋರಿಸಿಕೊಟ್ಟವರು : ಯಶ್ಪಾಲ್ ಎ ಸುವರ್ಣ
ಉಡುಪಿ: ಬಸವಣ್ಣನವರ ಸಿದ್ದಾಂತಗಳು ಸಮಾಜದಲ್ಲಿ ಅನೇಕ ಬದಲಾವಣೆಯನ್ನು ಮಾಡಿದ್ದು, ಅನುಭವ ಮಂಟಪದ ಮೂಲಕ ಸಮಾನತೆಯನ್ನು ಸಮಾಜಕ್ಕೆ ತೋರಿಸಿ ಕೊಟ್ಟ ಅವರ ತತ್ವ ಆದರ್ಶಗಳನ್ನು ಎಲ್ಲೆಡೆ ಸಾರುವುದರೊಂದಿಗೆ ಅವುಗಳನ್ನು ನಮ್ಮ ಜೀವನದಲ್ಲಿ ಆಳವಡಿಸಿಕೊಂಡು ಜಯಂತಿ ಕಾರ್ಯಕ್ರಮದ ಆಚರಣೆಯ ಮೆರುಗನ್ನು ಹೆಚ್ಚಿಸಬೇಕು ಎಂದು ಶಾಸಕ ಯಶ್ ಪಾಲ್ ಎ ಸುವರ್ಣ ಹೇಳಿದರು.
ಅವರು ಇಂದು ನಗರದ ಎಂ.ಜಿ. ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ , ಉಡುಪಿ ಬಸವ ಸಮಿತಿ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಜಯಂತಿ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ, ಬಸವಣ್ಣರ ಭಾವ ಚಿತ್ರಕ್ಕೆ ಪುಷ್ಪರ್ಚಾನೆ ಸಲ್ಲಿಸಿ ಮಾತನಾಡಿದರು.
ಮಾನವೀಯತೆಯ ಕಲ್ಯಾಣಕ್ಕಾಗಿ ತಮ್ಮ ಇಡೀ ಜೀವನವನ್ನು ಮೂಡಿಪಾಗಿಟ್ಟ ಬಸವಣ್ಣ ನವರು ಬಡವರ, ದಲಿತರ, ನೊಂದವರ, ಕಾಯಕಜೀವಿಗಳ ವಿಶ್ವ ಗುರುವಾಗಿದ್ದಾರೆ. ವಚನ ಸಾಹಿತ್ಯದ ತತ್ವವನ್ನು ಜನಸಾಮಾನ್ಯರಿಗೆ ತಿಳಿಸುವ ಕೆಲಸ ಇನ್ನೂ ಹೆಚ್ಚಿನ ರೀತಿಯಲ್ಲಿ ಆಗಬೇಕಿದೆ ಎಂದರು.
ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಬಸವಣ್ಣನವರ ವಚನಗಳು ಇಂದಿಗೂ ಪ್ರಸ್ತುತವಾಗಿದ್ದು, ಅವರ ಬದುಕು, ಬರಹ ಹಾಗೂ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಪ್ರತಿನಿತ್ಯದ ಜೀವನದಲ್ಲಿ ಪಾಲಿಸಬೇಕು ಎಂದರು.
ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, 12 ನೇ ಶತಮಾನದಲ್ಲಿ ಇಡೀ ಜಗತ್ತಿಗೆ ಮಾದರಿಯಾಗುವಂತಹ ಚಿಂತನೆ ಹಾಗೂ ವಚನಗಳನ್ನು ನೀಡಿದ ಮಹಾನಾಯಕ ಬಸವಣ್ಣನವರು. ಅನುಭವ ಮಂಟಪದಲ್ಲಿ, ಜಾತಿ ಸಂಕೋಲೆಯಿಲ್ಲದೆ, ಮೇಲು ಕೀಳು ಎಂಬ ಭಾವನೆಗಳಿಲ್ಲದೆ ಎಲ್ಲರೂ ಸಮಾನರು ಎನ್ನುವ ಸಂದೇಶವನ್ನು ಸಾರಿದರು ಎಂದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಉಡುಪಿ ಬಸವ ಸಮಿತಿಯ ಗೌರವಾಧ್ಯಕ್ಷ ಡಾ.ಜಿ.ಎಸ್. ಚಂದ್ರಶೇಖರ , ಬಸವಣ್ಣನವರ ಕಾಯಕವೇ ಕೈಲಾಸ ಎಂಬ ತತ್ವದಂತೆ ನಾವು ಮಾಡುವ ಕೆಲಸದಲ್ಲಿ ತೃಪ್ತಿ ಹೊಂದಬೇಕು, ಉದ್ಯೋಗವನ್ನು ಪ್ರೀತಿಸುವ ಗುಣವನ್ನು ಬೆಳೆಸಿಕೊಂಡು ಬದುಕಿನಲ್ಲಿ ಏಳಿಗೆ ಹೊಂದಬೇಕು ಎಂದರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ನಿರಂಜನ್ ಯು.ಸಿ ಬಸವಣ್ಣ ನವರ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಶೈಕ್ಷಣಿಕವಾಗಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ , ಬಸವ ಸಮಿತಿಯ ಅಧ್ಯಕ್ಷ ಗಂಗಾಧರ್, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಅಧ್ಯಕ್ಷ ಪ್ರಕಾಶ್ ಸಜ್ಜನ್, ಜಿಲ್ಲಾ ಬಸವ ಸಮಿತಿ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಪ್ರದೀಪ್ ಹಾವಂಜೆ ನಿರೂಪಿಸಿ ವಂದಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಉಡುಪಿ ಬಸವ ಸಮಿತಿ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಇವರ ವತಿಯಿಂದ ನಗರದ ಬೋರ್ಡ್ ಹೈಸ್ಕೂಲ್ ಆವರಣದಿಂದ ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಂಟಪದ ವರೆಗೆ ಸಾಗಿದ ವಿಶ್ವಗುರು ಬಸವಣ್ಣನವರ ಪ್ರತಿಮೆ ಹೊತ್ತ ಜಾಥಾಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಚಾಲನೆ ನೀಡಿದರು.