ಮಂಗಳೂರು: ರೌಂಡ್ಸ್ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ
ಮಂಗಳೂರು: ನಗರದ ಕೋಡಿಕಲ್ ಬಳಿಯ ನಾರಾಯಣ ಗುರು ಕೋ-ಆಪರೇಟಿವ್ ಸೊಸೈಟಿ ಬಳಿ ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಶನಿವಾರ ತಡರಾತ್ರಿ 2:07 ಗಂಟೆ ಸುಮಾರಿಗೆ ನಡೆದಿದೆ.
ಉರ್ವ ಠಾಣಾ ಪೊಲೀಸ್ ಕಾನ್ಸ್ಟೇಬಲ್ಗಳಿಬ್ಬರು ಕೋಡಿಕಲ್ ಬಳಿಯ ನಾರಾಯಣ ಗುರು ಕೋ-ಆಪರೇಟಿವ್ ಸೊಸೈಟಿ ಮುಂಭಾಗ ವಾಹನ ತಪಾಸಣೆ ನಡೆಸುವ ಹಿನ್ನೆಲೆಯಲ್ಲಿ ನಿಂತಿದ್ದರು. ಈ ವೇಳೆ ಅಲ್ಲಿಗೆ ಬಂದ ಬೈಕ್ ಅನ್ನು ನಿಲ್ಲಿಸಲು ಯತ್ನಿಸಿದ್ದಾರೆ. ಆದರೆ ಚಾಲಕ ಬೈಕ್ ಅನ್ನು ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿ ಅಲ್ಲಿಂದ ಪರಾರಿಯಾಗಿದ್ದನು.
ಸ್ವಲ್ಪ ಹೊತ್ತಿನಲ್ಲಿ ಅದೇ ಬೈಕ್ ಮತ್ತೆ ಮರಳಿ ಬಂದಿದೆ. ಈ ವೇಳೆ ಹಿಂಬದಿ ಸವಾರನು ತಪಾಸಣೆಗೆ ನಿಂತಿದ್ದ ಓರ್ವ ಕಾನ್ಸ್ಟೇಬಲ್ಗೆ ಕೋಲಿನ ಮಾದರಿಯ ವಸ್ತುವಿನಿಂದ ಹಲ್ಲೆ ನಡೆಸಿದ್ದಾನೆ. ಆದರೆ ಅದೃಷ್ಟವಶಾತ್ ಕಾನ್ಸ್ಟೇಬಲ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆಯ ದೃಶ್ಯ ಅಲ್ಲೇ ಸಮೀಪದಲ್ಲಿದ್ದ ಕಟ್ಟಡವೊಂದರ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.













