ಮುಖ್ಯಮಂತ್ರಿಯಾಗಿ ಸೋಮವಾರ ಎಚ್‌.ಡಿ.ಕುಮಾರಸ್ವಾಮಿ ಪ್ರಮಾಣ ವಚನ

Spread the love

ಮುಖ್ಯಮಂತ್ರಿಯಾಗಿ ಸೋಮವಾರ ಎಚ್‌.ಡಿ.ಕುಮಾರಸ್ವಾಮಿ ಪ್ರಮಾಣ ವಚನ

ಬೆಂಗಳೂರು: ಹದಿನೈದು ದಿನಗಳಲ್ಲಿ ಬಹುಮತ ಸಾಬೀತು ಪಡಿಸಲು ರಾಜ್ಯಪಾಲರು ಆದೇಶಿಸಿದ್ದು, ಕಾಂಗ್ರೆಸ್‌–ಜೆಡಿಎಸ್‌ ಸಮ್ಮಿಶ್ರ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

ಸೋಮವಾರ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಮಮತಾ ಬ್ಯಾನರ್ಜಿ, ಮಾಯಾವತಿ, ಅಖಿಲೇಶ್‌ ಯಾದವ್‌, ಚಂದ್ರಬಾಬು ನಾಯ್ಡು ಸೇರಿ ವಿವಿಧ ರಾಜ್ಯಗಳ ಅನೇಕ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಶನಿವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೂ ಮುನ್ನವೇ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್‌.ಯಡಿಯೂರಪ್ಪ ರಾಜೀನಾಮೆ ಸಲ್ಲಿಸಿದರು. ಇದರ ಬೆನ್ನಲೇ ರಾಜ್ಯಪಾಲರು ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಆಹ್ವಾನಿಸಿದ್ದರು. ರಾಜ್ಯಪಾಲರನ್ನು ಭೇಟಿ ಮಾಡಿದ ನಂತರ ಕುಮಾರಸ್ವಾಮಿ ಮಾಧ್ಯಮಗಳೊಂದಿಗೆ ಮಾತನಾಡಿದರು.

‘ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕರ ಕುರಿತು ಕಾಂಗ್ರೆಸ್‌ ಮುಖಂಡರೊಂದಿಗೆ ರಾತ್ರಿ ಚರ್ಚೆ ನಡೆಯಲಿದ್ದು, ಭಾನುವಾರ ಸ್ಪಷ್ಟತೆ ಸಿಗಲಿದೆ. ಪ್ರಮಾಣ ವಚನ ಸ್ವೀಕಾರ ಪೂರ್ಣಗೊಳ್ಳುವವರೆಗೂ ಕಾಂಗ್ರೆಸ್‌–ಜೆಡಿಎಸ್‌ ಪಕ್ಷದ ಶಾಸಕರು ನಗರದಲ್ಲಿಯೇ ಉಳಿಯಲಿದ್ದಾರೆ. ಪುನಃ ಬಿಜೆಪಿ ಆಪರೇಷನ್‌ ಕಮಲಕ್ಕೆ ಕೈಹಾಕಲಿರುವ ತಿಳಿವಳಿಕೆ ಇದೆ. ಈ ಬಗ್ಗೆ ಮುಂಜಾಗೃತ ಕ್ರಮಕೈಗೊಳ್ಳಲಾಗುತ್ತದೆ’ ಎಂದು ಹೇಳಿದರು.

ಜೆಡಿಎಸ್ ಸರ್ಕಾರ ರಚನೆಗೆ ಕಾಂಗ್ರೆಸ್‌ ಪೂರ್ಣ ಬೆಂಬಲ ಸೂಚಿಸಿ, ಮೇ 15ರಂದೇ ಸಮ್ಮಿಶ್ರ ಸರ್ಕಾರ ರಚನೆ ಸಂಬಂಧ ರಾಜ್ಯಪಾಲರಿಗೆ ಉಭಯ ಪಕ್ಷದ ಮುಖಂಡರು ಮನವಿ ಸಲ್ಲಿಸಿದ್ದರು.


Spread the love