ಮೋದಿ ಪುಲ್ವಾಮದ ಹುತಾತ್ಮ ಯೋಧರನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಾರೆ – ಸಿದ್ದರಾಮಯ್ಯ

Spread the love

ಮೋದಿ ಪುಲ್ವಾಮದ ಹುತಾತ್ಮ ಯೋಧರನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಾರೆ – ಸಿದ್ದರಾಮಯ್ಯ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಪುಲ್ವಾಮದಲ್ಲಿ ಯೋಧರ ಹುತಾತ್ಮವನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡಿದ್ದಾರೆ. ರಕ್ಷಣಾ ವೈಫಲ್ಯವನ್ನು ಪ್ರಶ್ನಿಸಿದರೆ ವಿಪಕ್ಷದ ಮೇಲೆ ಮೋದಿ ಗೂಬೆ ಕೂರಿಸಿ ಜನರ ಮನಸ್ಸನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಮಾಜಿ ಸಿದ್ದರಾಮಯ್ಯ ಹೇಳಿದರು.

ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ನಗರ ಹೊರವಲಯದ ಅಡ್ಯಾರ್ ಗಾರ್ಡನ್ನಲ್ಲಿ ಬುಧವಾರ ನಡೆದ ದ.ಕ.ಜಿಲ್ಲಾ ಕಾಂಗ್ರೆಸ್ ಪರಿವರ್ತನಾ ಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕೇಂದ್ರದ ಮೋದಿ ನೇತೃತ್ವದ ಸರಕಾರವು ಎಲ್ಲಾ ಕ್ಷೇತ್ರಗಳಲ್ಲೂ ವೈಫಲ್ಯವನ್ನು ಕಂಡಿವೆ. ಕೊಟ್ಟ ಮಾತಿನಂತೆ ಮೋದಿ ಎಂದೂ ನಡೆದುಕೊಂಡಿಲ್ಲ. ಮೋದಿಗೆ 56 ಇಂಚಿನ ಎದೆ ಇದ್ದರೆ ಸಾಲದು, ಜನರ ಸಮಸ್ಯೆಗೆ ಸ್ಪಂದಿಸುವ ಮನಸ್ಸೂ ಬೇಕು. ಮೋದಿ ಆಡಳಿತದಿಂದ ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗದವರು, ಬಡವರು, ಮಹಿಳೆಯರು ನೆಮ್ಮದಿಯಿಂದಿಲ್ಲ. ಆತಂಕದ ಬದುಕು ಸಾಗಿಸುತ್ತಿದ್ದಾರೆ. ಭಾವನಾತ್ಮಕ ವಿಚಾರಗಳನ್ನೇ ಮುಂದಿಟ್ಟು ನೀಚ ರಾಜಕಾರಣ ಮಾಡುತ್ತಿದ್ದಾರೆ. ದೇಶ ಕಂಡ ಅತ್ಯಂತ್ರ ಭ್ರಷ್ಟ ಮತ್ತು ಮಹಾನ್ ಸುಳ್ಳುಗಾರನಾಗಿರುವ ಪ್ರಧಾನಿ ನರೇಂದ್ರ ಮೋದಿಯ ಬಣ್ಣದ ಮಾತಿಗೆ ಬಲಿ ಬೀಳಬೇಡಿ ಎಂದು ಸಿದ್ದರಾಮಯ್ಯ ಹೇಳಿದರು.

ರಫೇಲ್ ಖರೀದಿಯಲ್ಲಿ 39 ಸಾವಿರ ಕೋಟಿ ರೂಪಾಯಿಯ ಹಗರಣ ನಡೆದಿದೆ. ಅಂಬಾನಿಯಂತಹ ಬಂಡವಾಳಶಾಹಿಗಳಿಗೆ ನೆರವು ನೀಡುವ ಮೂಲಕ ಮೋದಿ ಭ್ರಷ್ಟಾಚಾರದ ಭಾಗಿಧಾರ್ ಆಗಿದ್ದಾರೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು.

ಮಂಗಳೂರು ಸಂಸದ ನಳಿನ್ ಉಪಯೋಗಕ್ಕೆ ಬಾರದ ವ್ಯಕ್ತಿ. ಅವರಿಗೆ ಬೆಂಕಿ ಹಚ್ಚಿ ಸಮಾಜವನ್ನು ಒಡೆಯಲು ಮಾತ್ರ ಗೊತ್ತು. ಸಾಮರಸ್ಯದಿಂದ ಬದುಕುವುದು ಹೇಗೆಂದು ತಿಳಿದಿಲ್ಲ. ಈ ಭಾಗದ ಅನಂತ ಕುಮಾರ್ ಹೆಗಡೆ, ಸದಾನಂದ ಗೌಡ, ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲ್ಗೆ ಮೋದಿಯ ಮುಂದೆ ನಿಂತು ಜನರ ಸಮಸ್ಯೆಯನ್ನು ಹೇಳುವ ಧೈರ್ಯವಿಲ್ಲ. ಹಾಗಾಗಿ ನಳಿನ್ರನ್ನು ಸೋಲಿಸಿ ತಕ್ಕ ಪಾಠ ಕಲಿಸಿ ಎಂದು ಸಿದ್ದರಾಮಯ್ಯ ಕರೆ ನೀಡಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ ಪ್ರಧಾನಿ ಮಾತು ಮಾತಿಗೆ ರಾಜ್ಯ ಸಮ್ಮಿಶ್ರ ಸರಕಾರವನ್ನು ಟೀಕಿಸುತ್ತಿದ್ದಾರೆ. ಅದರಲ್ಲೂ ಮುಖ್ಯಮಂತ್ರಿ ಕುಮಾರಸ್ವಾಮಿ ರಿಮೋಟ್ ಕಂಟ್ರೋಲ್ ಮುಖ್ಯಮಂತ್ರಿ ಎಂದು ವ್ಯಂಗ್ಯವಾಡುತ್ತಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ವಿರುದ್ಧ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ ಬಂಡವಾಳ ಶಾಹಿಗಳಾದ ಅಂಬಾನಿ-ಅದಾನಿಯ ನಿಯಂತ್ರಣದಲ್ಲಿದ್ದಾರೆ ಎಂಬುದನ್ನು ಮರೆತಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ನಾಯಕ ಸಿ ಎಮ್ ಇಬ್ರಾಹಿಂ, ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಐವನ್ ಡಿಸೋಜಾ, ಮಾಜಿ ಶಾಸಕರಾದ ಜೆ ಆರ್ ಲೋಬೊ, ಅಭಯಚಂದ್ರ ಜೈನ್, ಶಕುಂತಳ ಶೆಟ್ಟಿ, ಮೊಯ್ದಿನ್ ಬಾವಾ, ವಿನಯ್ ಕುಮಾರ್ ಸೊರಕೆ, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಹಾಗೂ ಇತರರು ಉಪಸ್ಥಿತರಿದ್ದರು.


Spread the love