ಲೋಕಸಭೆ ಚುನಾವಣೆಯಲ್ಲಿ ಮತ್ತೆ ಬಿ.ವೈ. ರಾಘವೇಂದ್ರ ಅವರನ್ನೇ ಗೆಲ್ಲಿಸಿ: ಶಾಮನೂರು ಶಿವಶಂಕರಪ್ಪ

Spread the love

ಲೋಕಸಭೆ ಚುನಾವಣೆಯಲ್ಲಿ ಮತ್ತೆ ಬಿ.ವೈ. ರಾಘವೇಂದ್ರ ಅವರನ್ನೇ ಗೆಲ್ಲಿಸಿ: ಶಾಮನೂರು ಶಿವಶಂಕರಪ್ಪ  
 

ಶಿವಮೊಗ್ಗ: ‘ಶಿವಮೊಗ್ಗ ಜಿಲ್ಲೆಯಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ಗಮನಿಸಿದರೆ ನೀವು ಉತ್ತಮ ಸಂಸದರನ್ನೇ ಆಯ್ಕೆ ಮಾಡಿದ್ದೀರಿ ಎಂಬುದು ತಿಳಿಯುತ್ತದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಬಿ.ವೈ.ರಾಘವೇಂದ್ರ ಅವರನ್ನು ಆಯ್ಕೆ ಮಾಡಿ’ ಎಂದು ಕಾಂಗ್ರೆಸ್ ಶಾಸಕರೂ ಆದ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಸಲಹೆ ನೀಡಿದರು.

ಇಲ್ಲಿನ ಬೆಕ್ಕಿನ ಕಲ್ಮಠದಲ್ಲಿ ಶುಕ್ರವಾರ ಸಂಜೆ ನಡೆದ ಸಮಾರಂಭದಲ್ಲಿ ‘ಗುರು ಬಸವಶ್ರೀ’ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

‘ಬಿ.ವೈ.ರಾಘವೇಂದ್ರ ಅವರಂತಹ ಲೋಕಸಭೆ ಸದಸ್ಯರನ್ನು ಪಡೆದ ನೀವೇ ಧನ್ಯರು. ಜಿಲ್ಲೆಯಲ್ಲಿ ಆಗಬೇಕಿರುವ ಎಲ್ಲ ಕೆಲಸಗಳನ್ನು ಪೂರ್ಣ ಮಾಡಿ ರಾಘವೇಂದ್ರ ಮುನ್ನಡೆಯುತ್ತಿದ್ದಾರೆ’ ಎಂದು ಶ್ಲಾಘಿಸಿದರು.

‘ಈ ಬಾರಿಯ ಲೋಕಸಭಾ ಚುನಾವಣೆಯಲ್ಕಿ ಬಿಜೆಪಿಯಿಂದ ಬಿ.ವೈ.ರಾಘವೇಂದ್ರ ಅವರಿಗೆ ಟಿಕೆಟ್ ಸಿಗುವುದು ಪಕ್ಕಾ. ಹೀಗಾಗಿ ಅವರನ್ನು ಮತ್ತೆ ಆಯ್ಕೆ ಮಾಡಿ’ ಎಂದು ಹೇಳಿದರು.

‘ವೀರಶೈವ ಲಿಂಗಾಯತರಲ್ಲಿ ಅನೇಕ ಒಳ ಪಂಗಡಗಳಿವೆ. ಅವು ದೂರವಾಗಿ ಎಲ್ಲರೂ ಒಂದೇ ಎಂಬ ಭಾವನೆ ಬರಬೇಕು ಆಗ ಐಕ್ಯತೆ ಮೂಡುತ್ತದೆ’ ಎಂದರು.

ವೇದಿಕೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಕಾಂಗ್ರೆಸ್ ಮುಖಂಡ ಎಚ್.ಸಿ.ಯೋಗೀಶ್ ಇದ್ದರು.


Spread the love